ಮಡಿಕೇರಿ:
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಹಗರಣ ಕುರಿತು ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು ಎಂದು ಮೈಸೂರು-ಕೊಡಗು ಲೋಕಸಭೆ ಎಂಪಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಿಯಾಗಿ ಆಡಳಿತ ನಡೆಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು. ಹಗರಣದಲ್ಲಿ ಭಾಗಿಯಾಗದಿದ್ದರೆ ಸಿಬಿಐ ತನಿಖೆ ಎದುರಿಸಲು ಕಾಂಗ್ರೆಸ್ ನಾಯಕರು ಹಿಂಜರಿಯಬಾರದು. ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ಆರೋಪ ಎದುರಿಸುತ್ತಿರುವವರು ಸಿಬಿಐ ತನಿಖೆ ನಂತರ ಆರೋಪ ಮುಕ್ತರಾಗಿ ಬರಲಿ ಎಂದರು.
ಮುಡಾವನ್ನು ಹಿಂದಿನ ಮೈಸೂರು ಸಂಸ್ಥಾನದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ನಿವೇಶನ ಒದಗಿಸುವ ಉದ್ದೇಶದಿಂದ ಸ್ಥಾಪಿಸಲಾಗಿತ್ತು. ಆದರೆ, ಇಂದು ಪ್ರಾಧಿಕಾರ ಶ್ರೀಮಂತರಿಗೆ ನಿವೇಶನ ನೀಡುತ್ತಿದೆ ಎಂದು ಸಂಸದರು ಆಕ್ರೋಶ ವ್ಯಕ್ತಪಡಿಸಿದರು.