ಮೈಸೂರು:
ದಸರಾ ಮಹೋತ್ಸವಕ್ಕೆ ತೆರೆ ಬಿದ್ದಿದ್ದು, ಈ ನಡುವೆ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ವರ್ಷಪೂರ್ತಿ ಕಾರ್ಯಕ್ರಮ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ನಿಟ್ಟಿನಲ್ಲಿ ತಜ್ಞರು ಮತ್ತು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು, ವರ್ಷಪೂರ್ತಿ ಕಾರ್ಯಕ್ರಮಗಳನ್ನು ನಡೆಸಿದರೆ, ಭಾರತ ಮತ್ತು ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಆಕರ್ಷಿಸುವ ಮೂಲಕ ಆರ್ಥಿಕತೆಯನ್ನು ಹೆಚ್ಚಿಸಬಹುದು. ಈ ಕುರಿತು ಜಿಲ್ಲಾಡಳಿತದೊಂದಿಗೆ ಚರ್ಚಿಸಿದ್ದೇನೆ ಮತ್ತು ಪ್ರವಾಸೋದ್ಯಮ ಸಾಮರ್ಥ್ಯವನ್ನು ಬಳಸಿಕೊಳ್ಳಲು ಕಾರ್ಯಕ್ರಮಗಳ ಕ್ಯಾಲೆಂಡರ್ ರೂಪಿಸಲು ತಜ್ಞರೊಂದಿಗೂ ಮಾತುಕತೆ ನಡೆಸುತ್ತೇನೆಂದು ಹೇಳಿದರು.
ದಸರಾ ಮಹೋತ್ಸವದ ಎಲ್ಲಾ 10 ದಿನಗಳಲ್ಲೂ ಮಳೆಯ ನಡುವೆಯೂ ಸಂಗೀತೋತ್ಸವ, ಯುವ ದಸರಾ, ಯುವ ಸಂಭ್ರಮ, ಅನ್ನಸಂತರ್ಪಣೆ, ಮಹಿಳಾ ಮತ್ತು ಮಕ್ಕಳ ದಸರಾ, ರೈತ ದಸರಾ, ಫಲಪುಷ್ಪ ಪ್ರದರ್ಶನ, ಜಂಬೂ ಸವಾರಿ ಎಲ್ಲಾ ಕಾರ್ಯಕ್ರಮಗಳು ಉತ್ತಮ ಪ್ರದರ್ಶನ ಕಂಡವು. ನವರಾತ್ರಿ ಸಂದರ್ಭದಲ್ಲಿ ಹೋಟೆಲ್ ಉದ್ಯಮವು 100 ಕೋಟಿಗೂ ಹೆಚ್ಚು ಆದಾಯವನ್ನು ಗಳಿಸಿದೆ. ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಎಲ್ಲಾ 19 ಉಪ ಸಮಿತಿಗಳು ಮತ್ತು ಚುನಾಯಿತ ಪ್ರತಿನಿಧಿಗಳು ಉತ್ಸವದ ಯಶಸ್ಸಿಗೆ ಒಗ್ಗಟ್ಟಿನಿಂದ ಶ್ರಮಿಸಿದ್ದಾರೆಂದು ತಿಳಿಸಿದರು.
ಪ್ರಸ್ತುತ ಅಭಿವೃದ್ಧಿ ಚಟುವಟಿಕೆಗಳತ್ತ ಗಮನ ಹರಿಸಲಾಗುತ್ತಿದ್ದು, ಶೀಘ್ರದಲ್ಲೇ ದಸರಾ ಖರ್ಚು ವೆಚ್ಚಗಳ ವರದಿಯನ್ನು ಬಹಿರಂಗಗೊಳಿಸಲಾಗುವುದು ಹಾಗೂ ಹಬ್ಬದ ಸಂದರ್ಭದಲ್ಲಿ ಆಗಿರುವ ಸಣ್ಣಪುಟ್ಟ ತಪ್ಪುಗಳನ್ನು ಪರಿಶೀಲಿಸಿ ಮುಂದಿನ ದಿನಗಳಲ್ಲಿ ಸರಿಪಡಿಸಲಾಗುವುದು ಎಂದು ಇದೇ ವೇಳೆ ಸಚಿವರು ತಿಳಿಸಿದರು.
