ಬೆಂಗಳೂರು:
ಪಂಜಾಬ್ನ ಪಟಿಯಾಲ ಬಳಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಪಟಿಯಾಲದ ಆಸ್ಪತ್ರೆಯೊಂದರಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುರುಬೂರ್ ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ನಿನ್ನೆ ಪಂಜಾಬ್ನ ಪಟಿಯಾಲ ರಸ್ತೆಯಲ್ಲಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕುರುಬೂರ್ ಶಾಂತಕುಮಾರ್ ಹಾಗೂ ಮಿಳುನಾಡಿನ ಪಾಂಡಿಯನ್ ಅವರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈಗ ಕುರುಬೂರ್ ಶಾಂತಕುಮಾರ್ ಅವರನ್ನು ಪಟಿಯಾಲ ಆಸ್ಪತ್ರೆಯಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವ್ಯವಸ್ಥೆ ಮಾಡಿದ್ದಾರೆ. ಅಪಘಾತದಲ್ಲಿ ಶಾಂತಕುಮಾರ್ ಅವರ ಬೆನ್ನುಮೂಳೆಗೆ ತೀವ್ರ ಗಾಯಾವಾಗಿದ್ದು, ಬೆಂಗಳೂರಿನಲ್ಲೇ ಚಿಕಿತ್ಸೆ ಕೊಡಿಸಲು ಅವರನ್ನು ಏರ್ ಲಿಫ್ಟ್ ಮಾಡಿಸಲು ಸೋಮಣ್ಣ ತೀರ್ಮಾನಿಸಿದ್ದು, ಈ ಸಂಬಂಧ ಸೋಮಣ್ಣ ಅವರು ಈಗಾಗಲೇ ಪಟಿಯಾಲ ಜಿಲ್ಲಾಧಿಕಾರಿ ಜೊತೆ ಮಾತುಕತೆ ನಡೆಸಿದ್ದಾರೆ.
ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ) ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು ಕಳೆದ ಒಂದು ವರ್ಷದಿಂದ ದೆಹಲಿಯ ಕನೋಲಿ ಬಾರ್ಡರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಾಂತಕುಮಾರ್ ಅವರು ಶುಕ್ರವಾರ ದೆಹಲಿಯಲ್ಲಿ ಕರೆಯಲಾಗಿದ್ದ ಸಭೆಗೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯ ಈ ದುರ್ಘಟನೆ ಸಂಭವಿಸಿತ್ತು.
