ಬೆಂಗಳೂರು:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೇರಿದಂತೆ ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಯಾವುದೇ ಸಮಯದಲ್ಲಿ ಚುನಾವಣೆ ಘೋಷಣೆಯಾಗಬಹುದು. ಹೀಗಾಗಿ ಚುನಾವಣೆಗೆ ಸಿದ್ಧತೆಗಳ ಪ್ರಾರಂಭಿಸುವಂತೆ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಸೂಚನೆ ನೀಡಿದರು.
ಕೆಪಿಸಿಸಿ ಕಚೇರಿಯಲ್ಲಿಂದು ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಎಲ್.ಆರ್ ಶಿವರಾಮೇಗೌಡ ಮತ್ತು ಬ್ರಿಜೇಶ್ ಕಾಳಪ್ಪ, ಎಲ್.ಎಸ್. ಚೇತನ್ ಗೌಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವವರ ಪಟ್ಟಿ ದೊಡ್ಡದಿದೆ. 15 ದಿನ ಅಥವಾ ತಿಂಗಳಿಗೊಮ್ಮೆ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆಂದು ಹೇಳಿದರು.
ಬಿಜೆಪಿ-ಜೆಡಿಎಸ್ ಪಕ್ಷದ ಹಾಲಿ ಶಾಸಕರೂ ಸೇರ್ಪಡೆಯಾಗುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಶಾಸಕರ ಸೇರ್ಪಡೆ ಬಗ್ಗೆ ಬಹಿರಂಕ ಹೇಳಿಕೆ ನೀಡಲಾಗದು. ನಿಮ್ಮನ್ನು ಬಿಟ್ಟು ಏನೂ ಮಾಡುವುದಿಲ್ಲ ಎಂದು ತಿಳಿಸಿದರು.
ಗಾಂಧೀಜಿ ಕಾಂಗ್ರೆಸ್ ನಾಯಕತ್ವ ವಹಿಸಿ 100 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಇದನ್ನು ಗುರುತಿಸಲು 100 ಕಾಂಗ್ರೆಸ್ ಕಚೇರಿಗಳ ಸ್ಥಾಪನೆಯ ಉದ್ಘಾಟನಾ ಸಮಾರಂಭ ನಡೆಸಲಾಗುತ್ತಿದೆ. ಈ ಸಮಾರಂಭಕ್ಕೆ ಹಿರಿಯ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿಯವರು ಭಾಗಿಯಾಗಲಿದ್ದಾರೆ.
ಮುಖಂಡರು, ಕಾರ್ಯಕರ್ತರು 104 ಕಾಂಗ್ರೆಸ್ ಕ್ಚೇರಿ ಕಟ್ಟಲು ಮುಂದೆ ಬಂದಿದ್ದಾರೆ. ಕಟ್ಟಡ ನಿರ್ಮಾಣ ಕಾಮಗಾರಿಗೂ ಸಮಿತಿ ರಚನೆ ಮಾಡಿದ್ದೇವೆ. ಕಾಂಗ್ರೆಸ್ ಹೆಸರಿನಲ್ಲಿ ಭೂಮಿ ನೋಂದಣಿ ಆಗಿದ್ದರೆ ಮಾತ್ರ ಕಚೇರಿ ನಿರ್ಮಾಣಕ್ಕೆ ಪೂಜೆ ಮಾಡಬೇಕೆಂದು ಹೈಕಮಾಂಡ್ ಸ್ಪಷ್ಟವಾಗಿ ತಿಳಿಸಿದೆ ಎಂದು ತಿಳಿಸಿದರು.
ಇದೇ ವೇಳೆ ಜಿಲ್ಲಾ ಪಂಚಾಯತ್ಗಳು, ತಾಲ್ಲೂಕು ಪಂಚಾಯತ್ಗಳು ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಮುಂಬರುವ ಚುನಾವಣೆಗಳಿಗೆ ಪಕ್ಷವು ಸಂಪೂರ್ಣವಾಗಿ ಸಿದ್ಧವಾಗಬೇಕಾದ ಅಗತ್ಯವನ್ನು ಒತ್ತಿ ಹೇಳಿದರು.ಮಹಿಳಾ ಅಭ್ಯರ್ಥಿಗಳಿಗೆ ಕನಿಷ್ಠ ಶೇ.50 ಸ್ಥಾನಗಳನ್ನು ನೀಡುವ ಗುರಿಯೊಂದಿಗೆ ಪಕ್ಷವು ಮೈತ್ರಿ ಮಾಡಿಕೊಳ್ಳುತ್ತಿದೆ ಮತ್ತು ಅಭ್ಯರ್ಥಿಗಳ ಪಟ್ಟಿಗಳನ್ನು ಅಂತಿಮಗೊಳಿಸುತ್ತಿದೆ ಎಂದು ತಿಳಿಸಿದರು.
