ನವದೆಹಲಿ:
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಭಾರತ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಗಳ ಬಗ್ಗೆ ಚೀನಾ ಕಳವಳ ವ್ಯಕ್ತಪಡಿಸಿದ್ದು, ಶಾಂತಿ ಕಾಪಾಡಿಕೊಳ್ಳುವಂತೆ ಎರಡೂ ರಾಷ್ಟ್ರಗಳನ್ನು ಒತ್ತಾಯಿಸಿದೆ. ಪಾಪಿ ಪಾಕಿಸ್ತಾನದಲ್ಲಿ ನೆಲೆಯೂರಿರುವ ಉಗ್ರರನ್ನು ಸದೆ ಬಡಿಯುವ ಮೂಲಕ ಭಾರತ ಚುರುಕು ಮುಟ್ಟಿಸಿರುವ ಬೆನ್ನಲ್ಲೇ ಪಾಕ್ನ ಪರಮಾಪ್ತ ರಾಷ್ಟ್ರ ಚೀನಾ ಶಾಂತಿ ಮಂತ್ರ ಪಠಿಸಿದೆ. ಈ ಬಗ್ಗೆ ಚೀನಾ ವಿದೇಶಾಂಗ ಸಚಿವಾಲಯ ವಕ್ತಾರ ಮಾಹಿತಿ ನೀಡಿದ್ದು, ಇದೊಂದು ವಿಷಾದನೀಯ ಸಂಗತಿ ಎಂದು ಹೇಳಿದ್ದು, ಎಲ್ಲರೂ ಸಂಯಮದಿಂದ ವರ್ತಿಸುವಂತೆ ಕರೆ ನೀಡಿದ್ದಾರೆ.
ನಮಗೆ ಈಗಿರುವ ಪರಿಸ್ಥಿತಿಯ ಬಗ್ಗೆ ಕಳವಳವಿದೆ. ಭಾರತ ಮತ್ತು ಪಾಕಿಸ್ತಾನ ಯಾವಾಗಲೂ ನಮ್ಮ ನೆರೆ ಹೊರೆಯ ರಾಷ್ಟ್ರ. ಅವರು ಚೀನಾದ ನೆರೆಹೊರೆಯವರು. ಚೀನಾ ಎಲ್ಲಾ ರೀತಿಯ ಭಯೋತ್ಪಾದನೆಯನ್ನು ವಿರೋಧಿಸುತ್ತದೆ. ಶಾಂತಿ ಮತ್ತು ಸ್ಥಿರತೆಯ ದೊಡ್ಡ ಹಿತಾಸಕ್ತಿಯಿಂದ ಕಾರ್ಯನಿರ್ವಹಿಸಲು, ಶಾಂತವಾಗಿರಲು, ಸಂಯಮವನ್ನು ಕಾಪಾಡಿಕೊಳ್ಳಲು ಮತ್ತು ಪರಿಸ್ಥಿತಿಯನ್ನು ಇನ್ನಷ್ಟು ಜಟಿಲಗೊಳಿಸುವ ಕ್ರಮಗಳನ್ನು ತೆಗೆದುಕೊಳ್ಳದಂತೆ ನಾವು ಎರಡೂ ಕಡೆಯವರನ್ನು ಒತ್ತಾಯಿಸುತ್ತೇವೆ ಎಂದು ವಕ್ತಾರರು ಹೇಳಿದರು.
ಪಹಲ್ಗಾಮ್ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಾರತೀಯ ಸೇನೆ ಇಂದು ತಡರಾತ್ರಿ ʻಆಪರೇಷನ್ ಸಿಂಧೂರ್ʼ ದಾಳಿಯನ್ನು ನಡೆಸಿದೆ. ಈ ಡೆಡ್ಲಿ ಅಟ್ಯಾಕ್ನಲ್ಲಿ ಈಗಾಗಲೇ ನೂರಕ್ಕೂ ಅಧಿಕ ಉಗ್ರರು ಉಡೀಸ್ ಆಗಿದ್ದೂ, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದೀಗ ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಮೊದಲ ರಿಯಾಕ್ಷನ್ ನೀಡಿದ್ದಾರೆ. ಆಪರೇಷನ್ ಸಿಂಧೂರ್ ಬಗ್ಗೆ ಕಾಂಗ್ರೆಸ್ ಸಂಸದ ಮತ್ತು ಲೋಕಸಭಾ ನಾಯಕ ರಾಹುಲ್ ಗಾಂಧಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, “ನಮ್ಮ ಸಶಸ್ತ್ರ ಪಡೆಗಳ ಬಗ್ಗೆ ನಮಗೆ ಹೆಮ್ಮೆ ಇದೆ. ಜೈ ಹಿಂದ್!” ಎಂದು ಹೇಳಿದ್ದಾರೆ.
ಪಹಲ್ಗಾಮ್ ದಾಳಿಗೆ ಸೇಡು ತೀರಿಸಿಕೊಂಡಿರುವ ಭಾರತ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ 9 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕ್ಷಿಪಣಿ ದಾಳಿ ನಡೆಸಿದ ಭಾರತ ಉಗ್ರರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದೆ. ಯಾವುದೇ ಸೂಚನೆ ಇಲ್ಲದೆ ಸುಮಾರು 20 ನಿಮಿಷಗಳ ಕಾಲ ನಡೆದ ಈ ದಾಳಿಯಿಂದ ಪಾಕ್ ಪತರುಗುಟ್ಟಿ ಹೋಗಿದೆ. ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ಸರಣಿ ನಿಖರ ದಾಳಿಯಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಾಕಿಸ್ತಾನ ಹಾಗೂ POK ಅಲ್ಲಿರುವ 9 ಸ್ಥಳಗಳಾದ ಕೊಟ್ಪಿ, ಮುಜಾಫರ್ಬಾದ್, ಬಹವಲ್ಪುರ್ ಬಳಿ ಏರ್ಸ್ಟ್ರೈಕ್ ನಡೆದಿದೆ. ಲಷ್ಕರ್ ಎ ತಯಬಾ ಮತ್ತು ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಗಳ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ಮಾಡಿದೆ.








