ಬೆಂಗಳೂರು:
ಯುವ ಬ್ರಿಗೇಡ್ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ಎಫ್ಐಆರ್ ಹಾಗೂ ತೆಗೆದುಕೊಂಡ ಕ್ರಮದ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಪೊಲೀಸ್ ಇಲಾಖೆ ಆದೇಶಿಸಿದೆ. 2022ರಿಂದ 2025ರ ಮೇ 31ರವರೆಗೆ ದಾಖಲಾಗಿರುವ ಪ್ರಕರಣಗಳ ಮಾಹಿತಿ ಹಾಗೂ ಎಫ್ಐಆರ್ ಪ್ರತಿಗಳನ್ನು ಬೆಂಗಳೂರಿನಲ್ಲಿರುವ ಪೊಲೀಸ್ ಪ್ರಧಾನ ಕಚೇರಿಗೆ ಕಳುಹಿಸುವಂತೆ ಆದೇಶಿಸಲಾಗಿದೆ. ಇದರಿಂದಾಗಿ, ಸೂಲಿಬೆಲೆ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ ಎಂಬ ಅನುಮಾನ ಮೂಡಿದೆ.
ಇದಕ್ಕೆ ಇನ್ನೊಂದು ಕಾರಣವೂ ಇದೆ. ಇತ್ತೀಚೆಗೆ ಮತೀಯ ವೈಷಮ್ಯದ ಘಟನೆಗಳನ್ನು ಹೆಚ್ಚೆಚ್ಚು ಕಾಣುತ್ತಿರುವ ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಪ್ರಚೋದನಕಾರಿ ಭಾಷಣಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಕೆಲ ಸಂಘಟನೆಗಳ ಮುಖಂಡರ ಗಡಿಪಾರಿಗೂ ನೋಟೀಸ್ ನೀಡಿದೆ. ಇದೀಗ ಚಕ್ರವರ್ತಿ ಸೂಲಿಬೆಲೆ ಮೇಲಿನ ಕೇಸ್ಗಳನ್ನು ಒಟ್ಟುಗೂಡಿಸುತ್ತಿರುವ ಹಿನ್ನೆಲೆಯಲ್ಲಿ, ಅವರನ್ನು ಕೂಡ ಗಡಿಪಾರು ಮಾಡಲಾಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ.
ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅವರು ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಕ್ಯಾಬಿನೆಟ್ ಸಭೆಗೂ ಮುನ್ನ ಮಾಧ್ಯಮಗಳ ಜೊತೆ ಮಾತಾಡಿದ ಗೃಹ ಸಚಿವರು, ಅಲ್ಪಸಂಖ್ಯಾತ ಆಯೋಗದವರು ಡಿಜಿಪಿಗೆ ಸೂಲಿಬೆಲೆ ಕೇಸ್ ಬಗ್ಗೆ ಮಾಹಿತಿ ಕೇಳಿದ್ದಾರೆ ಎಂದಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಮೇಲಿರುವ ದೂರಿನ ಬಗ್ಗೆ ಮಾಹಿತಿ ತರಿಸಿಕೊಳ್ಳುವ ಸಲುವಾಗಿ ಎಲ್ಲಾ ಎಸ್ಪಿಗಳಿಗೆ ಕೇಳಿದ್ದಾರೆ. ನನಗೆ ಗೊತ್ತಿರುವ ಹಾಗೆ ಇಷ್ಟೇ ಮಾಹಿತಿ. ಗಡಿಪಾರಿನ ಬಗ್ಗೆ ಮಾಹಿತಿ ಇಲ್ಲ ಎಂದ ಪರಮೇಶ್ವರ್ ಅವರು, ಗಡಿಪಾರು ಮಾಡಲು ಅದರದ್ದೇ ಕಾರಣಗಳಿರಬೇಕಲ್ಲ ಎಂದಿದ್ದಾರೆ.