ಬೆಂಗಳೂರು :
ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲಾತಿ ಕಲ್ಪಿಸುವ ಸಂಬಂಧ ಅಭಿಪ್ರಾಯ ಸಂಗ್ರಹ ಪೂರ್ಣಗೊಳಿಸಿ ಪ್ರಸ್ತಾವನೆಯನ್ನು ಸಚಿವ ಸಂಪುಟ ಸಭೆ ಮುಂದೆ ಮಂಡಿಸುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಮೀಸಲಾತಿ ಕಲ್ಪಿಸುವ ಕುರಿತು 2024ರ ಜುಲೈನಲ್ಲಿ ಪ್ರತ್ಯೇಕ ವಿಧೇಯಕ ಮಂಡಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತೀರ್ಮಾನಿಸಿತ್ತು.
ಕಳೆದ ವರ್ಷದ ಮಳೆಗಾಲದ ಅಧಿವೇಶನದಲ್ಲಿ ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡುವ ʼಕರ್ನಾಟಕ ರಾಜ್ಯ ಉದ್ಯೋಗ ಮಸೂದೆ 2024′ ಮಂಡಿಸಲು ಮುಂದಾಗಿತ್ತು. ರಾಜ್ಯದ ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಲು 2024ರ ಜೂನ್ ತಿಂಗಳಲ್ಲಿ ಸಚಿವ ಸಂಪುಟ ಅನುಮೋದನೆ ಪಡೆಯಲಾಗಿತ್ತು.
ಮ್ಯಾನೇಜ್ಮೆಂಟ್ ಮೇಲ್ವಿಚಾರಕರು, ವ್ಯವಸ್ಥಾಪಕರು, ತಾಂತ್ರಿಕ, ಆಪರೇಷನಲ್, ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50 ಉದ್ಯೋಗ ಸ್ಥಳೀಯರಿಗೆ ಮೀಸಲಿಡಲಾಗುವುದು. ಇನ್ನು ನಾನ್-ಮ್ಯಾನೇಜ್ಮೆಂಟ್ ಕ್ಲರ್ಕ್ಗಳು, ಕೌಶಲ್ಯ, ಕೌಶಲ್ಯ ರಹಿತ ಹಾಗೂ ಅರೆ ಕೌಶಲ್ಯ, ಗುತ್ತಿಗೆ ನೌಕರ ಹುದ್ದೆಗಳಲ್ಲಿ ಶೇ.75 ಮೀಸಲು ಸ್ಥಳೀಯರಿಗೆ ನೀಡುವ ವಿಧೇಯಕ ಮಂಡನೆಗೆ ನಿರ್ಧಾರ ಮಾಡಲಾಗಿತ್ತು. ಈ ವೇಳೆ ರಾಷ್ಟ್ರೀಯ ಮಟ್ಟದಲ್ಲಿ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದ್ದರಿಂದ ಕೊನೆಯ ಹಂತದಲ್ಲಿ ವಿಧೇಯಕ ತಡೆ ಹಿಡಿಯಲಾಗಿತ್ತು.








