ಮೈಸೂರು:
ಕೈಗಾರಿಕೋದ್ಯಮಿಗಳನ್ನು ಕರ್ನಾಟಕದಿಂದ ದೂರವಿಡುವ ಆಂಧ್ರಪ್ರದೇಶ ಸರ್ಕಾರದ ಪ್ರಯತ್ನ ಎಂದಿಗೂ ಫಲ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.ಕಬಿನಿ ಜಲಾಶಯಕ್ಕೆ ಭಾನುವಾರ ಬಾಗಿನ ಅರ್ಪಿಸಿದ ಬಳಿಕ ದೇವನಹಳ್ಳಿ ಭೂಸ್ವಾಧೀನ ಕೈಬಿಟ್ಟ ವಿಚಾರ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.
ನಾವು ಜಮೀನು ಕೊಡುವುಲ್ಲ ಎಂದಿಲ್ಲ. ಯಾವುದೇ ಕೈಗಾರಿಕೆಗಳು ರಾಜ್ಯದಿಂದ ಹೋಗಲ್ಲ. ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಮತ್ತು ಅವರ ಪುತ್ರ ಏನೇ ರಾಜಕೀಯ ಮಾಡಿದರೂ ಫಲ ನೀಡುವುದಿಲ್ಲ ಎಂದು ಹೇಳಿದರು.
ಬೆಂಗಳೂರಿನಲ್ಲಿ 18,000 ಕೋಟಿ ರೂ.ಗಳ ಸುರಂಗ ರಸ್ತೆಯ ವಿರುದ್ಧ ಬಿಜೆಪಿ ನಡೆಸುತ್ತಿರುವ ಅಭಿಯಾನದ ಕುರಿತು ಮಾತನಾಡಿ, ಬಿಜೆಪಿ ಯಾವಾಗಲೂ ಅಭಿವೃದ್ಧಿಯ ವಿರುದ್ಧವಾಗಿದೆ ಎಂದು ತಿಳಿಸಿದರು.ಇದೇ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆಗಿನ ವೈಮನಸ್ಸು ಕುರಿತ ಊಹಾಪೋಹಗಳಿಗೆ ಉತ್ತರಿಸಿದ ಅವರು, ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ನಮ್ಮನ್ನು ವಿಭಜಿಸಲು, ಪರಿಸ್ಥಿತಿಯ ರಾಜಕೀಯ ಲಾಭ ಪಡೆಯಲು ಬಯಸುತ್ತಿದೆ. ಆದರೆ, ಎಂದಿಗೂ ಅದು ಆಗುವುದಿಲ್ಲ ಎಂದರು ಮೈಸೂರಿನಲ್ಲಿ ನಡೆಸ ಸಾಧನಾ ಸಮಾವೇಶದಲ್ಲಿ ಡಿಕೆ.ಶಿವಕುಮಾರ್ ಅವರನ್ನು ಅವಮಾನಿಸಿದ್ದಾರೆಂಬ ಬಿಜೆಪಿ ಅರೋಪ ಕುರಿತು ಮಾತನಾಡಿ, ಸರ್ಕಾರದ ವತಿಯಿಂದ ಸಮಾವೇಶ ಆಯೋಜಿಸಲಾಗಿತ್ತು. ಇಂತಹ ಸಂದರ್ಭಗಳಲ್ಲಿ ಕಾರ್ಯಕ್ರಮದಲ್ಲಿ ಹಾಜರಿರುವವರಿಗೆ ಸ್ವಾಗತ ಕೋರುವುದು ಪರಿಪಾಠ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಾರ್ಯಕ್ರಮದಲ್ಲಿ ಆ ವೇಳೆಯಲ್ಲಿ ಇರದಿದ್ದ ಕಾರಣ, ಅವರ ಹೆಸರನ್ನು ನಾನು ಸಹಜವಾಗಿ ತೆಗೆದುಕೊಳ್ಳಲಿಲ್ಲ. ಇದರಲ್ಲಿ ಅವಮಾನ ಮಾಡುವ ಪ್ರಶ್ನೆ ಎಲ್ಲಿದೆ? ಎಂದು ಪ್ರಶ್ನಿಸಿದರು.
ಬಿಜೆಪಿಯವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ನನ್ನ ಹಾಗೂ ಡಿ ಕೆ ಶಿವಕುಮಾರ್ ನಡುವೆ ಒಡಕುಂಟು ಮಾಡುವ ಉದ್ದೇಶದಿಂದ ಇಂತಹ ಹೇಳಿಕೆಗಳನ್ನು ಅವರು ನೀಡುತ್ತಾರೆ. ಇದರಿಂದ ರಾಜಕೀಯ ಲಾಭವಾಗಬಹುದೆಂಬ ಭ್ರಮೆ ಬಿಜೆಪಿಯವರಿಗಿದ್ದು, ಅದು ಸದಾ ಭ್ರಮೆಯಾಗಿಯೇ ಇರಲಿದೆ.
ನಮ್ಮ ಸರ್ಕಾರಕ್ಕೆ ಎರಡು ವರ್ಷ ತುಂಬಿದ ಸಂದರ್ಭದಲ್ಲಿ ವಿಜಯನಗರದಲ್ಲಿ ನಡೆದ ಸಮಾವೇಶದಲ್ಲಿ ಸುಮಾರು 2 ಲಕ್ಷ ಜನ ಭಾಗವಹಿಸಿದ್ದರು. ಇದು ಸರ್ಕಾರಕ್ಕೆ ಜನರ ಬೆಂಬಲವನ್ನು ಸೂಚಿಸುತ್ತದೆ. ಬಿಜೆಪಿಯವರು ಗ್ಯಾರಂಟಿ ವಿರೋಧಿಸುವ ಮಾತುಗಳನ್ನಾಡುತ್ತಲೇ, ನಮ್ಮ ಗ್ಯಾರಂಟಿ ಯೋಜನೆಗಳನ್ನೇ ಅನುಕರಿಸುತ್ತಿದ್ದಾರೆ. ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ಧರಿದ್ದೇವೆ ಎಂದರು.
ರಾಜ್ಯದ ಸಣ್ಣ ವ್ಯಾಪಾರಿಗಳಿಗೆ ಡಿಜಿಟಲ್ ಪೇಮೆಂಟ್ ನಿಂದ ತೆರಿಗೆ ನೋಟೀಸ್ ನೀಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಜಿಎಸ್ಟಿ ಪದ್ಧತಿ ಕೇಂದ್ರ ಸರ್ಕಾರ ಮಾಡಿದ್ದು, ಜಿಎಸ್ಟಿ ಕೌನ್ಸಿಲ್ ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತದೆ. ಇದಕ್ಕೆ ರಾಜ್ಯ ಸರ್ಕಾರಗಳ ಜವಾಬ್ದಾರಿಯಿಲ್ಲ. ಆದಾಗ್ಯೂ ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ, ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯೊಂದಿಗೆ ಚರ್ಚಿಸಿ, ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು,
ಏತನ್ಮಧ್ಯೆ, ವಕೀಲರೊಂದಿಗೆ ಅಪಾಯಿಂಟ್ಮೆಂಟ್ ಇದ್ದ ಕಾರಣ ನವದೆಹಲಿಗೆ ಹೋಗಲು ಸಮಾವೇಶಜಿಂಜ ಹೊರಟಿದ್ದೆ ಎಂದು ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಸಿದ್ದರಾಮಯ್ಯ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ. ಮಹದೇವಪ್ಪ ಅವರಿಗೆ ಸ್ಥಳದಿಂದ ಹೊರಡುವ ಮೊದಲು ತಿಳಿಸಿದ್ದೇನೆ ಎಂದು ತಿಳಿಸಿದ್ದಾರೆ.
