ನವದೆಹಲಿ:
ಅನಾರೋಗ್ಯದ ಕಾರಣದಿಂದಾಗಿ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ಅವರು ರಾಜೀನಾಮೆ ನೀಡಿದ ನಂತರ ತೆರವಾಗಿದ್ದ ಸ್ಥಾನದ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ವೇಳಾಪಟ್ಟಿಯ ಪ್ರಕಾರ, ಸೆಪ್ಟೆಂಬರ್ 9 ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 21 ಆಗಿದೆ. ಚುನಾವಣಾ ಫಲಿತಾಂಶಗಳನ್ನು ಮತದಾನದ ದಿನದಂದು ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ. ರಾಜೀನಾಮೆಯ 60 ದಿನಗಳ ಒಳಗೆ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಬೇಕು. ಇದೀಗ ಚುನಾವಣಾ ದಿನಾಂಕ ಘೋಷಣೆಯಾಗಿದೆ.
ಉಪರಾಷ್ಟ್ರಪತಿ ಚುನಾವಣೆಯಲ್ಲಿ, ರಾಜ್ಯಸಭೆಯ 233 ಚುನಾಯಿತ ಸಂಸದರು, ರಾಜ್ಯಸಭೆಯ 12 ನಾಮನಿರ್ದೇಶಿತ ಸಂಸದರು ಮತ್ತು ಲೋಕಸಭೆಯ 543 ಸಂಸದರು ತಮ್ಮ ಮತಗಳನ್ನು ಚಲಾಯಿಸಬಹುದು. ಈ ರೀತಿಯಾಗಿ, ಒಟ್ಟು 788 ಜನರು ಮತ ಚಲಾಯಿಸಬಹುದು. ಈ ಚುನಾವಣೆಯನ್ನು ರಹಸ್ಯ ಮತದಾನದ ಮೂಲಕ ನಡೆಸಲಾಗುತ್ತದೆ. ಲೋಕಸಭೆಯಲ್ಲಿ ಎನ್ಡಿಎ ಒಕ್ಕೂಟವೂ 542ರ ಪೈಕಿ 293 ಸದಸ್ಯರ ಬೆಂಬಲ ಹೊಂದಿದ್ದು, ರಾಜ್ಯಸಭೆಯಲ್ಲಿ 129 ಸದಸ್ಯರ ಬೆಂಬಲ ಹೊಂದಿದೆ. ಆಡಳಿತರೂಢ ಒಕ್ಕೂಟವೂ ಒಟ್ಟು 422 ಸದಸ್ಯರ ಬೆಂಬಲ ಹೊಂದಿದೆ.
ಜನತಾದಳ-ಸಂಯುಕ್ತ ಸಂಸದರಾಗಿರುವ ರಾಜ್ಯಸಭಾ ಉಪ ಸಭಾಪತಿ ಹರಿವಂಶ್ ಅವರನ್ನು ಸಂಭಾವ್ಯ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕೂಡ ಮುಂದಿನ ಉಪ ರಾಷ್ಟ್ರಪತಿ ಆಗುವ ಸಾಧ್ಯತೆ ಇದೆ. ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಅವರಿಗೂ ಈ ಹುದ್ದೆಗೇರುವ ಅವಕಾಶವಿದೆ ಎಂದು ಹೇಳಲಾಗುತ್ತಿದೆ.








