ಶಿರಸಿ
ರಾಜ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರ ಪಾಲಿಗೆ ವರವಾಗಿದೆ ಎಂದು ಶಿರಸಿಯ
ಜನಜಾಗೃತಿ ವೇದಿಕೆಯ ಉಪಾಧ್ಯಕ್ಷರಾದ ಶ್ರೀಮತಿ ಗೌರಿ ನಾಯ್ಕ ಹೇಳಿದರು.ಅವರು ಸಮೀಪದ ಕಸ್ತೂರ್ಬಾನಗರ ಕಾರ್ಯಕ್ಷೇತ್ರದ ಲಿಡ್ಕರ್ ಕಾಂಪ್ಲೆಕ್ಸ್ ನ ಸಮುದಾಯ ಭವನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸದ್ಗುರು ಮಹಿಳಾ ಜ್ಞಾನ ವಿಕಾಸ ಕೇಂದ್ರ ಹಮ್ಮಿಕೊಂಡ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಮಾಡಲು ಸಾಲ ಸೌಲಭ್ಯ ನೀಡುವುದರ ಜೊತೆಗೆ ಸಮಾಜದ ಬಗ್ಗೆ ಕಾಳಜಿಯನ್ನು ಹೊಂದಿ ಕೃಷಿ ತರಬೇತಿ, ಪರಿಕರಗಳ ವಿತರಣೆ, ವಿದ್ಯಾರ್ಥಿ ವೇತನ, ಮದ್ಯಪಾನ ವರ್ಜನ ಶಿಬಿರ, ಪರಿಸರ ಕಾಳಜಿ, ಬೀಜ ಬಿತ್ತನೆ, ಬಡವರು ವಾಹನ ಖರೀದಿಸಲು ಸಾಲ ಸೌಲಭ್ಯ, ಅಂಗವಿಕಲರಿಗೆ ತ್ರಿಚಕ್ರ ವಾಹನಗಳ ವಿತರಣೆ ಹೀಗೇ ಹತ್ತು ಹಲವು ಜನಪರ ಕಾರ್ಯಗಳನ್ನು ನಿರಂತರವಾಗಿ ನಡೆಸುತ್ತಾ ಗ್ರಾಮೀಣ ಪ್ರದೇಶದ ಜನರಿಗೆ ಗ್ರಾಮಾಭಿವೃದ್ದಿ ಯೋಜನೆ ಸಂಜೀವಿನಿಯಾಗಿದೆ ಎಂದರು.
ಯೋಜನಾಧಿಕಾರಿ ರಾಘವೇಂದ್ರ ನಾಯ್ಕ್ ಮಾತನಾಡಿ, ಮಹಿಳೆಯರ ತಮ್ಮ ಕುಟುಂಬದಲ್ಲಿ ಸ್ವಂತ ನಿರ್ಧಾರ ತಳೆಯುವ ಶಕ್ತಿ ನೀಡುವ ಉದ್ದೇಶದಿಂದ ಜ್ಞಾನವಿಕಾಸ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಹಾಬಲೇಶ್ವರ ನಾಯ್ಕ್ ಕೆನರಾ ಬ್ಯಾಂಕ್ ಪ್ರಾಯೋಜಿತ ಆರ್ಥಿಕ ಸಾಕ್ಷರತಾ ಕೇಂದ್ರ ಸಿರ್ಸಿ ಇವರು ಮಾತನಾಡಿ, ಸ್ತ್ರೀಶಕ್ತಿ ಸಬಲೀಕರಣದ ಉದ್ದೇಶದಿಂದ ಪ್ರತಿ ಗ್ರಾಮದಲ್ಲಿ ಜ್ಞಾನವಿಕಾಸ ಕೇಂದ್ರವನ್ನು ಆರಂಭಿಸಿ ಈ ಕೇಂದ್ರದ ಮೂಲಕ ಮಹಿಳೆಯರಿಗೆ ಆರೋಗ್ಯ, ಸ್ವಚ್ಛತೆ, ಶಿಕ್ಷ ಣ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಪರಿಣಿತರಿಂದ ಉಪನ್ಯಾಸ ಮತ್ತಿತರ ಚಟುವಟಿಕೆಗಳನ್ನು ನಡೆಸುತ್ತಿರುವ ಕಾರ್ಯ ಶ್ಲಾಘನೀಯ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಮಹಿಳಾ ಜ್ಞಾನ ವಿಕಾಸ ಕೇಂದ್ರದ ಸಮನ್ವಯ ಅಧಿಕಾರಿ ಮಲ್ಲಿಕಾ ನಿರೂಪಿಸಿದರು. ನಾಗರಾಜ್ ಸ್ವಾಗತಿಸಿದರು. ವಿಶಾಲ ಪ್ರಭು ವಂದಿಸಿದರು.
