ನವದೆಹಲಿ:
ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ ಹೈಡ್ರಾಮಾವೇ ನಡೆದಿದ್ದು, ಸಮಾರು 300 ವಿರೋಧ ಪಕ್ಷದ ಸಂಸದರು ಚುನಾವಣಾ ಅಕ್ರಮಗಳ ಆರೋಪದ ಮೇಲೆ ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ, ಮೆರವಣಿಗೆಯನ್ನು ಪೊಲೀಸರು ಮಧ್ಯದಲ್ಲಿಯೇ ತಡೆದರು, ಇದರಿಂದಾಗಿ ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಹಲವಾರು ಸಂಸದರು ಬ್ಯಾರಿಕೇಡ್ಗಳನ್ನು ದಾಟಿ ಒಳ ನುಗ್ಗಲು ಪ್ರಯತ್ನಿಸಿದ್ದಾರೆ. ಪೊಲೀಸರು ಹಾಗೂ ಸಂಸದರ ನಡುವೆ ವಾಗ್ವಾದ ನಡೆಯಿತು. ಚುನಾವಣಾ ಆಯೋಗದ ಕಚೇರಿ ಎದುರು ಸಂಸದರು ಪ್ರತಿಭಟನೆ ನಡೆಸಿದರು. ದೆಹಲಿ ಪೊಲೀಸರು ಮೆರವಣಿಗೆಯು ಚುನಾವಣಾ ಆಯೋಗದ ಕಚೇರಿಯನ್ನು ತಲುಪಲು ಅನುಮತಿ ನೀಡಿಲ್ಲ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅದರ ಮದ್ಯೆ, ಪ್ರತಿಭಟನೆಯ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹಾಗೂ ಮಿತಾಲಿ ಬಾಗ್ ಮೂರ್ಛೆ ಹೋಗಿದ್ದರು. ಕಾಂಗ್ರೆಸ್ ನಾಯಕರು ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಉಪಚರಿಸಿದ್ದಾರೆ. ನಂತರ ಅವರನ್ನು ಕೂಡಲೇ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಪ್ರತಿಭಟನೆ ಜೋರಾಗುತ್ತಿದ್ದಂತೆ ಪೊಲೀಸರು ಅವರನ್ನು ನಿಯಂತ್ರಿಸಲು ಹರ ಸಾಹಸ ಪಟ್ಟಿದ್ದಾರೆ. ಬಂಧಿಸಲ್ಪಟ್ಟ ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಮತ್ತು ಟಿಎಂಸಿ ಸಂಸದೆ ಸಾಗರಿಕಾ ಘೋಷ್. ಸಂಸದರನ್ನು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಪ್ರಿಯಾಂಕಾ ಗಾಂಧಿ ವಾದ್ರಾ ಮಾತನಾಡಿ, ಕೇಂದ್ರ ಸರ್ಕಾರ ಹೆದರುತ್ತಿದೆ. ಸತ್ಯ ಜನರ ಮುಂದೆ ಬಯಲಾಗಿದೆ. ಇದೊಂದು ಹೇಡಿ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ವಾಸ್ತವವೆಂದರೆ ಅವರು ಮಾತನಾಡಲು ಸಾಧ್ಯವಿಲ್ಲ. ಸತ್ಯವು ದೇಶದ ಮುಂದೆ ಇದೆ. ಈ ಹೋರಾಟ ರಾಜಕೀಯವಲ್ಲ. ಈ ಹೋರಾಟವು ಸಂವಿಧಾನವನ್ನು ಉಳಿಸಲು. ಈ ಹೋರಾಟವು ಒಬ್ಬ ವ್ಯಕ್ತಿ, ಒಂದು ಮತಕ್ಕಾಗಿ. ನಮಗೆ ಮತದಾರರ ಪಟ್ಟಿ ಕೊಡಲಿ ಎಂದು ಅವರು ಹೇಳಿದ್ದಾರೆ.
ಬಿಹಾರದ ಎಸ್ಐಆರ್ ಪ್ರಕ್ರಿಯೆಯನ್ನು ವಿರೋಧಿಸಲು ಮತ್ತು “ಮತ ಕಳ್ಳತನ” ಎಂದು ಆರೋಪಿಸಿ ಪ್ರತಿಭಟನಾಕಾರರು ಇಂಗ್ಲಿಷ್, ಹಿಂದಿ, ತಮಿಳು, ಬಂಗಾಳಿ ಮತ್ತು ಮರಾಠಿ ಭಾಷೆಗಳಲ್ಲಿ ಪೋಸ್ಟರ್ಗಳನ್ನು ಬಳಸಿ ಪ್ರತಿಭಟನೆ ನಡೆಸಲಾಯಿತು. ಬಿಹಾರದಲ್ಲಿ ಚುನಾವಣಾ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು ವಿರೋಧಿಸಿ ಮತ್ತು 2024 ರ ಲೋಕಸಭಾ ಚುನಾವಣೆಯಲ್ಲಿ ಮತದಾರರ ವಂಚನೆಯನ್ನು ಆರೋಪಿಸಿ ಈ ಪ್ರತಿಭಟನೆ ನಡೆಯುತ್ತಿದೆ.








