ಅನರ್ಹ ಬಿಪಿಎಲ್‌ ಕಾರ್ಡ್‌ದಾರರಿಗೆ ಶಾಕ್, 12.69 ಲಕ್ಷ ಅಕ್ರಮ ಪಡಿತರ ಚೀಟಿ ರದ್ದು

ಬೆಂಗಳೂರು :

    ರಾಜ್ಯದಲ್ಲಿ ಚಾಲ್ತಿಯಲ್ಲಿರುವ ವಿವಿಧ ಪಡಿತರ ಚೀಟಿಗಳ ಪೈಕಿ ಸುಮಾರು 12.69 ಲಕ್ಷ ಬಿಪಿಎಲ್ ಪಡಿತರ ಚೀಟಿಗಳು‌  ಶಂಕಾಸ್ಪದವಾಗಿದ್ದು, ಈ ಪಡಿತರ ಚೀಟಿ ಹಾಗೂ ಫಲಾನುಭವಿಗಳನ್ನು ಜಿಲ್ಲಾ/ ತಾಲ್ಲೂಕು ಮಟ್ಟದಲ್ಲಿ ಆಹಾರ ನಿರೀಕ್ಷಕರ ಹಂತದಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೆ.ಎಚ್. ಮುನಿಯಪ್ಪ  ತಿಳಿಸಿದ್ದಾರೆ.

   ವಿಧಾನ ಪರಿಷತ್ ಸದಸ್ಯರಾದ ಎಂ. ನಾಗರಾಜು ಅವರ ಪ್ರಶ್ನೆಗೆ ಉತ್ತರ ನೀಡಿದರು. ರಾಜ್ಯದಲ್ಲಿ ಹಲವು ವರ್ಷಗಳಿಂದ ಇದ್ದ ತಾಂತ್ರಿಕ ದೋಷವನ್ನು ನಿವಾರಣೆ ಮಾಡಿರುವುದರಿಂದ ಪಡಿತರ ವಿತರಣೆಯಲ್ಲಿ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದರು. ಕಪ್ಪು ಮಾರುಕಟ್ಟೆಯಲ್ಲಿ ಸರಕುಗಳ ಮಾರಾಟ ಮತ್ತು ಇತರ ಚಟುವಟಿಕೆಗಳ ಬಗ್ಗೆ 409 ಪ್ರಕರಣಗಳು ದಾಖಲಾಗಿದ್ದು, ₹20 ಕೋಟಿಗೂ ಹೆಚ್ಚು ದಂಡ ವಿಧಿಸಲಾಗಿದೆ ಹಾಗೂ ಈಗಾಗಲೇ ₹10 ಕೋಟಿ ವಸೂಲಿ ಮಾಡಲಾಗಿದೆ ಎಂದು ಹೇಳಿದರು.

   ದಕ್ಷಿಣ ಭಾರತದಲ್ಲಿಯೇ ಅತಿ ಹೆಚ್ಚು ಬಿಪಿಎಲ್ ಕಾರ್ಡ್‌ಗಳು ಇರುವ ರಾಜ್ಯ ನಮ್ಮದು ಎಂದು ಸಚಿವರು ತಿಳಿಸಿ, ನಮ್ಮ ರಾಜ್ಯದಲ್ಲಿ ಶೇಕಡಾ 75 ರಿಂದ 80ರಷ್ಟು ಬಿಪಿಎಲ್ ಕಾರ್ಡ್‌ಗಳು ಇದ್ದು, ತಮಿಳುನಾಡಿನಲ್ಲಿ 50%, ಕೇರಳದಲ್ಲಿ 45% ಮತ್ತು ಆಂಧ್ರಪ್ರದೇಶ, ತೆಲಂಗಾಣಗಳಲ್ಲಿ 50% ಬಿಪಿಎಲ್ ಕಾರ್ಡ್‌ಗಳಿವೆ ಎಂದರು. ಕಳೆದ ವಿಧಾನಸಭಾ ಅಧಿವೇಶನದ ಹಿಂದೆ 15 ಲಕ್ಷ ಕಾರ್ಡ್‌ಗಳನ್ನು ಪರಿಶೀಲನೆಗೆ ತೆಗೆದುಕೊಂಡಾಗ, ಸುಮಾರು 50 ರಿಂದ 60 ಲಕ್ಷ ಅನರ್ಹ ಫಲಾನುಭವಿಗಳನ್ನು ಗುರುತಿಸಿದ್ದೇವೆ, ಆದರೆ ಕೆಲವರ ಗೊಂದಲ ಸೃಷ್ಟಿಯಿಂದ ಆ ಕೆಲಸ ನಿಂತುಹೋಯಿತು ಎಂದು ಸಚಿವರು ವಿಷಾದ ವ್ಯಕ್ತಪಡಿಸಿದರು.

   ಪರಿಷ್ಕರಣೆ ಕಾರ್ಯಕ್ಕಾಗಿ ಕೇಂದ್ರದ 12 ಮಾನದಂಡಗಳು ಮತ್ತು ರಾಜ್ಯದ 5 ಮಾನದಂಡಗಳ ಆಧಾರದ ಮೇಲೆ ಮುಂದಾಗಿರುವುದಾಗಿ ತಿಳಿಸಿ, ಎಲ್ಲಾ ಸದಸ್ಯರು ಸಹಕರಿಸಬೇಕೆಂದು ಮನವಿ ಮಾಡಿದರು. ಅನರ್ಹರನ್ನು ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾಯಿಸಿ ನಿಜವಾದ ಅರ್ಹ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ಒದಗಿಸುವುದು ನಮ್ಮ ಉದ್ದೇಶ ಎಂದು ಸಚಿವರು ಸ್ಪಷ್ಟಪಡಿಸಿದರು.

Recent Articles

spot_img

Related Stories

Share via
Copy link