ಬೆಂಗಳೂರು:
ಕೇಂದ್ರ ಸರ್ಕಾರವು ರೈತರಿಗೆ ಬಂಪರ್ ಕೊಡುಗೆಯನ್ನು ನೀಡಲು ಮುಂದಾಗಿದೆ. ಜನೌಷಧಿ ಕೇಂದ್ರಗಳ ಮಾದರಿಯಲ್ಲಿ, ರೈತರಿಗೆ ಕಡಿಮೆ ದರದಲ್ಲಿ ಕೀಟನಾಶಕಗಳನ್ನು ಒದಗಿಸಲು ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ ಕೀಟನಾಶಕ ಕೇಂದ್ರಗಳನ್ನು ಸ್ಥಾಪಿಸುವ ಚಿಂತನೆ ಇದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನೌಷಧಿ ಕೇಂದ್ರಗಳು ರಿಯಾಯಿತಿ ದರದಲ್ಲಿ ಔಷಧಿಗಳನ್ನು ಒದಗಿಸುವಂತೆ, ರೈತರಿಗೆ ಅಗತ್ಯವಾದ ಕೀಟನಾಶಕಗಳನ್ನು ಕಡಿಮೆ ದರದಲ್ಲಿ ಒದಗಿಸುವ ಯೋಜನೆಯ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಮಂಡ್ಯ, ತುಮಕೂರು, ಹಾಸನ, ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ತೆಂಗು ಬೆಳೆಯುವ ರೈತರು ಸಂಕಷ್ಟದಲ್ಲಿದ್ದಾರೆ. ಕೇಂದ್ರ ಸಚಿವ ವಿ. ಸೋಮಣ್ಣ ಅವರು ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿ, ಈ ಜಿಲ್ಲೆಗಳ ರೈತರ ಸಮಸ್ಯೆಗಳ ತೀವ್ರತೆಯನ್ನು ತಿಳಿದುಕೊಂಡಿದ್ದಾರೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಶುಕ್ರವಾರ ಸಂಜೆ ಬೆಂಗಳೂರಿಗೆ ಆಗಮಿಸಿದ್ದು, ತೆಂಗು ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಸೋಮಣ್ಣ ಭರವಸೆ ನೀಡಿದ್ದಾರೆ.
ಕೀಟನಾಶಕ ಕೇಂದ್ರಗಳ ಸ್ಥಾಪನೆಯಿಂದ ರೈತರಿಗೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಉತ್ಪನ್ನಗಳು ಲಭ್ಯವಾಗಲಿವೆ. ಇದರಿಂದ ತೆಂಗು ಬೆಳೆಗಾರರಿಗೆ ಕಪ್ಪು ತಲೆ ಹುಳು ಸಮಸ್ಯೆಯನ್ನು ನಿಯಂತ್ರಿಸಲು ಸಹಾಯವಾಗಲಿದೆ. ಕೇಂದ್ರ ಸರ್ಕಾರದ ಈ ಯೋಜನೆಯು ಕರ್ನಾಟಕದ ರೈತರಿಗೆ ಆರ್ಥಿಕ ಒತ್ತಡವನ್ನು ಕಡಿಮೆ ಮಾಡಲು ಮತ್ತು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ಸಹಕಾರಿಯಾಗಲಿದೆ ಎಂದು ಸಚಿವರು ಅಭಿಪ್ರಾಯ ಪಟ್ಟಿದ್ದಾರೆ.
ಕಪ್ಪು ತಲೆ ಹುಳು(ಬ್ಲ್ಯಾಕ್ ಹೆಡ್ಡೆಡ್ ಕ್ಯಾಟ್ಪಿಲ್ಲರ್)ವಿನ ಬಾಧೆಯಿಂದ ರಾಜ್ಯದ ಬಹಳಷ್ಟು ಜಿಲ್ಲೆಗಳ ರೈತರು ಸಂಕಷ್ಟಕ್ಕೆ ಒಳಗಾಗಿದ್ದು ಈ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆದಿದೆ. ‘ರೋಗಬಾಧೆಯಿಂದಾಗಿ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಮಾಣದಲ್ಲಿ ತೆಂಗಿಗೆ ಹಾನಿಯಾಗಿದೆ ಎಂದು ಸಮೀಕ್ಷೆ ನಡೆಸಲಾಗುತ್ತಿದೆ. ಎರಡು ವಾರದಲ್ಲಿ ಸಮೀಕ್ಷೆ ವರದಿ ಬರಲಿದೆ’ ಎಂದು ಅಧಿಕಾರಿಗಳು ಸಭೆಯಲ್ಲಿ ತಿಳಿಸಿದ್ದಾರೆ. ವರದಿ ಬಂದ ಬಳಿಕ ಯಾವ ಕ್ರಮ ಕೈಗೊಳ್ಳಬೇಕು ಎಂಬುದನ್ನು ನಿರ್ಧರಿಸುವ ಬಗ್ಗೆ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು
