ರಾಜ್ಯದಲ್ಲಿ ಭದ್ರತೆ ಹೆಚ್ಚಳಕ್ಕೆ ಸೂಚಿಸಿದ್ದೇನೆ ; ಸಿಎಂ ಸಿದ್ದರಾಮಯ್ಯ

ಮೈಸೂರು

    ದೆಹಲಿ ಸ್ಫೋಟ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬೆಂಗಳೂರು, ಮೈಸೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಭದ್ರತೆ ಹೆಚ್ಚಿಸಲು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ. ದೆಹಲಿ ಸ್ಫೋಟದ ಬಗ್ಗೆ ತಿಳಿದ ಬಳಿಕ ಮೈಸೂರು ಪೊಲೀಸರ ಜತೆ ಮಾತನಾಡಿದ್ದೇನೆ. ಬೆಂಗಳೂರು ಪೊಲೀಸರಿಗೂ ಸೂಚಿಸುತ್ತೇನೆ. ಒಟ್ಟಾರೆ ರಾಜ್ಯಾದ್ಯಂತ ಭದ್ರತೆ ಬಿಗಿಗೊಳಿಸಲು ತಿಳಿಸುತ್ತೇನೆ ಎಂದು ಸಿಎಂ ಹೇಳಿದ್ದಾರೆ.

   ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಏರ್‌ಪೋರ್ಟ್‌, ರೈಲು ನಿಲ್ದಾಣ ಹಾಗೂ ಜನಸಂದಣಿ ಹೆಚ್ಚಿರುವ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲು ಸೂಚಿಸುತ್ತೇನೆ. ಇನ್ನು ಘಟನೆಯಲ್ಲಿ ಮೃತರಾದವರಿಗೆ ಸಂತಾಪ ಸೂಚಿಸುತ್ತೇನೆ.

   ಭದ್ರತಾ ವೈಫಲ್ಯವಾಗಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸೆಕ್ಯೂರಿಟಿ ಲ್ಯಾಪ್ಸ್‌ ಆಗಿದೆಯಾ, ಇಲ್ಲವೋ ಎಂಬ ಬಗ್ಗೆ ನಾನು ಈಗಲೇ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಂಡು ಮಾತನಾಡುವೆ. ಭದ್ರತೆ ವೈಫಲ್ಯ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ನಾನು ಕೆಡಿಪಿ ಸಭೆಯಲ್ಲಿ ಇದ್ದ ಹಿನ್ನೆಲೆಯಲ್ಲಿ ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಸಿಕ್ಕಿಲ್ಲ ಎಂದು ತಿಳಿಸಿದರು. 

    ನವ ದೆಹಲಿ ಸ್ಫೋಟ ಪ್ರಕರಣ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ದೆಹಲಿ ಸ್ಫೋಟದಲ್ಲಿ (Delhi Blast) ಸುಮಾರು 8 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಬೆಂಗಳೂರಿನ ಏರ್‌ಪೋರ್ಟ್, ರೈಲ್ವೆ ಹಾಗೂ ಮೆಟ್ರೋ ನಿಲ್ದಾಣಗಳು ಸೇರಿ ಪ್ರಮುಖ ಸ್ಥಳಗಳಲ್ಲಿ ಪೊಲೀಸ್‌ ಬಿಗಿ ಭದ್ರತೆಗೆ ಡಿಜಿ-ಐಜಿಪಿ ಡಾ. ಸಲೀಂ ಸೂಚಿಸಿದ್ದಾರೆ.

   ನಗರ ಪ್ರದೇಶಗಳಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಇದೇ ವೇಳೆ ಬೆಂಗಳೂರಿನಲ್ಲಿ ಹೈ ಅಲರ್ಟ್ ಸೂಚಿಸಲಾಗಿದೆ. ಅನುಮಾನಾಸ್ಪದ ವ್ಯಕ್ತಿಗಳ ಸ್ಥಳಗಳ ಮೇಲೆ ನಿಗಾ ಇಡುವಂತೆ ಸೂಚಿಸಲಾಗಿದ್ದು, ಲಾಡ್ಜ್‌ನಲ್ಲಿ ತಂಗಿರುವ ಹೊರ ರಾಜ್ಯದವರ ಮೇಲೆ ನಿಗಾ ಇಡಲು ಸೂಚಿಸಲಾಗಿದೆ. ಇದರ ಜತೆಗೆ ರಾತ್ರಿಯೂ ಗಸ್ತು ಹೆಚ್ಚಳ, ಬಸ್ ನಿಲ್ದಾಣ ಮೆಟ್ರೋ ನಿಲ್ದಾಣಗಳಲ್ಲೂ ನಿಗಾ ಇಡಲು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಲಾಗಿದೆ.  

    ಸ್ಫೋಟದ ಹಿನ್ನೆಲೆಯಲ್ಲಿ ದೆಹಲಿ ಮಾತ್ರವಲ್ಲದೆ ಮುಂಬೈ, ಹೈದರಾಬಾದ್‌, ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಎನ್‌ಐಎ, ಎನ್‌ಎಸ್‌ಜಿ ತಂಡಗಳು ತೆರಳಿ ಪರಿಶೀಲಿಸುತ್ತಿದ್ದು, ಘಟನೆ ಹಿಂದೆ ಉಗ್ರರ ಕೈವಾಡ ಇದೆಯೇ ಎಂಬ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ.

Recent Articles

spot_img

Related Stories

Share via
Copy link