ಮದ್ದೂರು ರಸ್ತೆ ಅಗಲೀಕರಣ; ಸಚಿವ ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸಲು ಸಿಎಂ ಸೂಚನೆ

ಬೆಂಗಳೂರು

     ಮದ್ದೂರು ಪಟ್ಟಣದ ಟಿ.ಬಿ. ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ವಿಷಯ ಕುರಿತು ಸಿಎಂ ಸಿದ್ದರಾಮಯ್ಯ  ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಮುಖ್ಯಮಂತ್ರಿಗಳ ಕೊಠಡಿಯಲ್ಲಿ ಸಭೆ ನಡೆಯಿತು. 2025-26ನೇ ಸಾಲಿನ ವಾರ್ಷಿಕ ಬಜೆಟ್‌ನಲ್ಲಿ ಮದ್ದೂರು ನಗರದಲ್ಲಿ ರಸ್ತೆ ಅಗಲೀಕರಣಕ್ಕಾಗಿ ವಿಸ್ತೃತ ಯೋಜನಾ ವರದಿಗಳನ್ನು ತಯಾರಿಸಲು ಘೋಷಿಸಲಾಗಿತ್ತು. ಅದರಂತೆ ಲೋಕೋಪಯೋಗಿ ಇಲಾಖೆಯಿಂದ ವಿಸ್ತೃತ ಯೋಜನಾ ವರದಿಯನ್ನೂ ತಯಾರಿಸಲಾಗಿದೆ.

    ಮದ್ದೂರು ಪಟ್ಟಣದ ಟಿ.ಬಿ. ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆಯು ಜನನಿಬಿಡ ಹಾಗೂ ವಾಣಿಜ್ಯ ಚಟುವಟಿಕೆಯುಳ್ಳ ಜಿಲ್ಲಾ ಮುಖ್ಯ ರಸ್ತೆಯಾಗಿದೆ. ಅಧಿಕ ವಾಹನ ಸಂಚಾರವುಳ್ಳ ಈ ರಸ್ತೆ ಪುರಸಭೆಯ ಸುಪರ್ದಿಯಲ್ಲಿದೆ. ಬಿಎಂಐಸಿಎಪಿಎ ಅವರು ತಯಾರಿಸಿರುವ ಯೋಜನ ನಕ್ಷೆಯಲ್ಲಿ ಇದನ್ನು 100 ಅಡಿ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಗುರುತಿಸಲಾಗಿದೆ.

    ರಸ್ತೆ ಅಗಲೀಕರಣ ಕಾಮಗಾರಿ ಯೋಜನಾ ವರದಿ ಪರಿಶೀಲಿಸಿದ ಮುಖ್ಯಮಂತ್ರಿಗಳು, ಈ ರಸ್ತೆಯನ್ನು 80 ಅಡಿ ವಿಸ್ತರಿಸಲು ಸಚಿವ ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮದ್ದೂರು ಶಾಸಕರಾದ ಕೆ.ಎಂ. ಉದಯ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Recent Articles

spot_img

Related Stories

Share via
Copy link