ಹೊಸ ಪಕ್ಷ ಸ್ಥಾಪನೆ: ಟಿಎಂಸಿಯಿಂದ ಅಮಾನತುಗೊಂಡ ಶಾಸಕ ಘೋಷಣೆ

ಕೋಲ್ಕತ್ತಾ: 

    ತೃಣಮೂಲ ಕಾಂಗ್ರೆಸ್  ನಿಂದ ಇತ್ತೀಚೆಗೆ ಅಮಾನತುಗೊಂಡಿದ್ದ ಶಾಸಕ  ಹುಮಾಯೂನ್ ಕಬೀರ್  ಅವರು ಡಿಸೆಂಬರ್ 22ರಂದು ಸ್ವಂತ ಪಕ್ಷ ಸ್ಥಾಪಿಸುವುದಾಗಿ ಹೇಳಿದ್ದು, ಮುಂದಿನ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಮುಂದೆ ತಾವು ಯಾವ ಪಕ್ಷದೊಂದಿಗೆ ಮೈತ್ರಿ ಮಾಡಬೇಕು ಎಂಬುದನ್ನು ಕೂಡ ನಿರ್ಧರಿಸುವುದಾಗಿ ತಿಳಿಸಿದ್ದಾರೆ. ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ಕಬೀರ್ ಅವರನ್ನು ಇತ್ತೀಚೆಗೆ ಪಕ್ಷದಿಂದ ಅಮಾನತುಗೊಳಿಸಲಾಗಿತ್ತು.

    ಪಶ್ಚಿಮ ಬಂಗಾಳದಲ್ಲಿ ಮುಂದಿನ ವರ್ಷ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ 135 ಸ್ಥಾನಗಳಲ್ಲೂ ಸ್ಪರ್ಧಿಸಲಿದೆ. ಇದಕ್ಕಾಗಿ ಡಿಸೆಂಬರ್ 22ರಂದು ಹೊಸ ರಾಜಕೀಯ ಪಕ್ಷವನ್ನು ಪ್ರಾರಂಭಿಸಲಿದ್ದೇನೆ ಎಂದು ಬುಧವಾರ ಕಬೀರ್ ತಿಳಿಸಿದ್ದಾರೆ. ಹೊಸ ಪಕ್ಷ ಸ್ಥಾಪನೆಯ ದಿನದಂದು ತನ್ನೊಂದಿಗೆ ಮುರ್ಷಿದಾಬಾದ್ ಜಿಲ್ಲಾಧ್ಯಕ್ಷ ಸೇರಿದಂತೆ 75 ಸದಸ್ಯರು ಇರಲಿದ್ದಾರೆ. ಇವರೊಂದಿಗೆ ರಾಜ್ಯ ಸಮಿತಿಯನ್ನು ಘೋಷಿಸುತ್ತೇನೆ. ಇದರ ಅನಂತರ ಯಾವ ಪಕ್ಷದೊಂದಿಗೆ ನಾವು ಮೈತ್ರಿ ಮಾಡಿಕೊಳ್ಳಬೇಕೆಂದು ನಿರ್ಧರಿಸುವುದಾಗಿ ತಿಳಿಸಿದರು.

    ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಶ್ಚಿಮ ಬಂಗಾಳ ಘಟಕದೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿರ್ಧರಿಸಿಲ್ಲ ಎಂದಿರುವ ಕಬೀರ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಒಟ್ಟು 249 ಸ್ಥಾನಗಳಲ್ಲಿ 135 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.ಮುಸ್ಲಿಂ ಮತಬ್ಯಾಂಕ್ ಮೇಲೆ ಕಣ್ಣಿಟ್ಟಿರುವ ಕಬೀರ್, 1992ರಲ್ಲಿ ಅಯೋಧ್ಯೆಯಲ್ಲಿ ಕೆಡವಲಾದ 16ನೇ ಶತಮಾನದ ಬಾಬರಿ ಮಸೀದಿಯನ್ನು ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಿರ್ಮಿಸುವುದಾಗಿ ಹೇಳಿ ಇತ್ತೀಚೆಗೆ ಶಿಲಾನ್ಯಾಸ ನೆರವೇರಿಸಿದ್ದರು.

    ಚುನಾವಣೆ ಹತ್ತಿರುವಿರುವ ಸಮಯದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸರಿಯಲ್ಲ. ತಮ್ಮ ಬೆಂಬಲಿಗರ ಬೇಡಿಕೆಯ ಮೇರೆಗೆ ಡೆಬ್ರಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ತಾವು ರಾಜೀನಾಮೆ ನೀಡುವುದಿಲ್ಲ ಎಂದು ತಿಳಿಸಿದರು. 

    ಪಶ್ಚಿಮ ಬಂಗಾಳದ ರಾಜಕೀಯ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ಜಾತ್ಯತೀತ ರಂಗದ ಶಾಸಕ ನೌಶಾದ್ ಸಿದ್ದಿಕಿ, ತಮ್ಮ ಪಕ್ಷವು ಕಾಂಗ್ರೆಸ್ ಮತ್ತು ಎಡಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದ್ದು ಮೈತ್ರಿ ಮಾಡಲು ಯೋಚಿಸುತ್ತಿದೆ. ಕೆಲವು ದಿನಗಳ ಹಿಂದೆ ಹುಮಾಯೂನ್ ಕಬೀರ್ ಅವರು ಕೂಡ ಮೈತ್ರಿಯ ಬಗ್ಗೆ ಪ್ರಸ್ತಾಪಿಸುತ್ತಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಮತ್ತು ಭಾರತೀಯ ಜನತಾ ಪಕ್ಷವನ್ನು ಸೋಲಿಸಲು ಎಡ-ಕಾಂಗ್ರೆಸ್-ಭಾರತೀಯ ಜಾತ್ಯತೀತ ರಂಗವು ಒಟ್ಟಾಗಿ ಬರಬೇಕು ಎಂದು ಹೇಳಿದ್ದಾರೆ.

Recent Articles

spot_img

Related Stories

Share via
Copy link