ಕೋಲ್ಕತ್ತಾ:
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿ ಬಾಂಗ್ಲಾದೇಶದ ಉಪ ಹೈಕಮಿಷನ್ಗೆ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷವಾದ ಬಿಜೆಪಿ ನಾಯಕ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಸಾವಿರಕ್ಕೂ ಹೆಚ್ಚು ಸಂತರು ಮತ್ತು ಸನ್ಯಾಸಿಗಳು ಮೆರವಣಿಗೆ ನಡೆಸಿದರು. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಗುಂಪು ಹಲ್ಲೆ ಘಟನೆಗಳನ್ನು ಪ್ರತಿಭಟನಾಕಾರರು ಖಂಡಿಸಿದರು. ಅಲ್ಲದೇ ಅಲ್ಲಿನ ಅಲ್ಪಸಂಖ್ಯಾತರ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿ, ಸಂತ್ರಸ್ತರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದರು.
ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಮತ್ತು ಅಶಾಂತಿಯ ನಡುವೆಯೇ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರು ಸಾವಿರಾರು ಸಂತರು ಮತ್ತು ಸನ್ಯಾಸಿಗಳೊಂದಿಗೆ ಶುಕ್ರವಾರ ಬಾಂಗ್ಲಾದೇಶದ ಉಪ ಹೈಕಮಿಷನ್ಗೆ ಮೆರವಣಿಗೆ ನಡೆಸಿದರು.
ಇತ್ತೀಚೆಗೆ ನಡೆದ ದೀಪು ದಾಸ್ ಘಟನೆ ಖಂಡಿಸಿದ ಸಾವಿರ ಸಾಧುಗಳು ಬಾಂಗ್ಲಾದೇಶದ ಉಪ ಹೈಕಮಿಷನ್ ಕಚೇರಿ ಬಳಿ ಸೇರಿದರು. ಬಳಿಕ ಐವರು ಸಂತರೊಂದಿಗೆ ಕಚೇರಿ ಒಳಗೆ ಹೋದ ಬಿಜೆಪಿ ನಾಯಕ ಸುವೇಂದು ಅಧಿಕಾರಿ, ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ನಿಲ್ಲಬೇಕೆಂದು ಒತ್ತಾಯಿಸುತ್ತೇವೆ. ನಮ್ಮ ಬೇಡಿಕೆ ಈಡೇರದಿದ್ದರೆ ಗಂಗಾ ಸಾಗರ್ ಮೇಳಕ್ಕೆ ಬರುವ ಎಲ್ಲಾ 5 ಲಕ್ಷ ಸಂತರು ಇಲ್ಲಿಗೆ ಬಂದು ಪ್ರತಿಭಟನೆಯಲ್ಲಿ ಕುಳಿತುಕೊಳ್ಳುತ್ತಾರೆ ಎಂದು ಎಚ್ಚರಿಸಿದರು.
ಈ ನಡುವೆ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಪ್ರತಿಕ್ರಿಯಿಸಿದ್ದು, ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ದಾಳಿಗಳಿಂದ ಸರ್ಕಾರ ತೀವ್ರವಾಗಿ ತೊಂದರೆಗೀಡಾಗಿದೆ. ಇದು ಬಹಳ ಕಳವಳಕಾರಿ ವಿಷಯವಾಗಿದೆ. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಹಿಂದೂ ಯುವಕನ ಹತ್ಯೆಯನ್ನು ನಾವು ಖಂಡಿಸುತ್ತೇವೆ ಮತ್ತು ಅಪರಾಧದ ಅಪರಾಧಿಗಳನ್ನು ನ್ಯಾಯದ ಕಟಕಟೆಗೆ ತರಲಾಗುವುದು ಎಂಬುದನ್ನು ನಿರೀಕ್ಷಿಸುತ್ತೇವೆ ಎಂದು ಅವರು ತಿಳಿಸಿದರು.
ಬಾಂಗ್ಲಾದೇಶದ ರಾಜ್ಬರಿ ಜಿಲ್ಲೆಯಲ್ಲಿ ಬುಧವಾರ ಸುಲಿಗೆ ಆರೋಪದ ಮೇಲೆ ಅಮೃತ್ ಮಂಡಲ್ ಎಂಬ ಹಿಂದೂ ವ್ಯಕ್ತಿಯನ್ನು ಗುಂಪೊಂದು ಹಲ್ಲೆ ನಡೆಸಿ ಹತ್ಯೆ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಇದು ಎರಡನೇ ಘಟನೆಯಾಗಿದೆ. ಅಮೃತ್ ಮಂಡಲ್ ಅವರನ್ನು ರಾಜಧಾನಿ ಢಾಕಾದಿಂದ ಕೆಲವೇ ಕಿಲೋ ಮೀಟರ್ ದೂರದಲ್ಲಿರುವ ರಾಜಬರಿ ಜಿಲ್ಲೆಯ ಪಂಗಶಾದಲ್ಲಿ ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಹತ್ಯೆ ಮಾಡಲಾಗಿದೆ. ಅಮೃತ್ ಹೊಸಾಯಿದಂಗ ಗ್ರಾಮದವರಾಗಿದ್ದು, ಅವರು ದರೋಡೆಕೋರ ಎಂದು ಆರೋಪಿಸಿ ಅವರನ್ನು ಕೊಲೆ ಮಾಡಲಾಗಿದೆ ಎನ್ನಲಾಗಿದೆ.
ಇದಕ್ಕೂ ಮೊದಲು ದೀಪು ಚಂದ್ರ ದಾಸ್ ಅವರು ಇಸ್ಲಾಮ್ ಧರ್ಮ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕವಾಗಿ ಥಳಿಸಿ ಹತ್ಯೆ ಮಾಡಲಾಗಿತ್ತು.








