ರಾಜ್ಯದಲ್ಲಿ ಮುಂದುವರಿದ ಚಳಿ, ಬೆಂಗಳೂರು ಮತ್ತಿತರೆಡೆ ತುಂತುರು ಮಳೆ ಸಾಧ್ಯತೆ

ಬೆಂಗಳೂರು

    ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿ  ಮುಂದುವರೆದಿದೆ. ರಾತ್ರಿ ತಾಪಮಾನ ಕುಸಿತ ಹಾಗೂ ಹಗಲು ಬಿಸಿಲು ಮುಂದುವರಿದಿವೆೆ. ಈ ನಡುವೆಯೇ ಇಂದು  ರಾಜ್ಯ ರಾಜಧಾನಿ ಬೆಂಗಳೂರು  ಸೇರಿದಂತೆ ರಾಜ್ಯದ ಕೆಲವೆಡೆ ಮೋಡ ಕವಿದ ವಾತಾವರಣವಿದ್ದು, ಹಗುರದಿಂದ ಸಾಧಾರಣ ಮಳೆ  ಬೀಳುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಎಲ್ಲಿ ಚಳಿ, ಎಲ್ಲಿ ಮಳೆ ಎಂಬ ವಿವರ ಇಲ್ಲಿದೆ.

    ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ದಟ್ಟ ಮಂಜು, ಚಳಿ ಜೊತೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಮಳೆ ಬೀಳುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ ಕಳೆದ ಎರಡು ದಿನಗಳ ಹಿಂದೆ ಅಂದರೆ ಹೊಸ ವರ್ಷದ ಆರಂಭದಲ್ಲಿ ನಗರದ ಹಲವೆಡೆ ತಂತುರು ಮಳೆಯಾದ ಬಗ್ಗೆ ವರದಿಯಾಗಿದೆ.

    ಇಂದು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮತ್ತೊಂದೆಡೆ, ಮುಂದಿನ 2-3 ದಿನಗಳ ಕಾಲ ರಾಜ್ಯದ ಕೆಲವೆಡೆ ತಾಪಮಾನದಲ್ಲಿ ಕುಸಿತ ಆಗಲಿದ್ದು, ಚಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ. ಉಳಿದಂತೆ ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಚಳಿ ಜೊತೆ ಒಣಹವೆ ಮುಂದುವರೆಯಲಿದೆ. ಅದರಲ್ಲೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭೀಕರ ಚಳಿ ಇರಲಿದೆ ಎಂದು ತಿಳಿಸಿದೆ. 

   ಈಗಾಗಲೇ ಭಾರೀ ಚಳಿಯಿಂದ ಈ ಭಾಗಗಳ ಜನರು ತತ್ತರಿಸಿ ಹೋಗಿದ್ದಾರೆ. ಇಂದು ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ಬೀದರ್ ಹಾಗೂ ಬಾಗಲಕೋಟೆ ಭಾಗಗಳಲ್ಲಿ ಹೆಚ್ಚು ಚಳಿ ಇರಲಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿ ಭಾಗಗಳಲ್ಲಿ ಕಡಿಮೆ ಚಳಿ ಇರಲಿದ್ದು, ಮುಂದಿನ 3 ದಿನಗಳಲ್ಲಿ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಮುನ್ಸೂಚನೆ ನೀಡಿದೆ.

   ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ತುಮಕೂರು, ಮೈಸೂರು, ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಹಾಸನ, ಚಿಕ್ಕಮಗಳೂರು, ಕೊಡಗು, ವಿಜಯನಗರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಜೊತೆ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

   ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಬಾಗಲಕೋಟೆ, ಬೆಳಗಾವಿ, ಹಾವೇರಿ, ವಿಜಯಪುರ, ಗದಗ, ಕಲಬುರಗಿ, ಧಾರವಾಡ, ಕೊಪ್ಪಳ, ಬಳ್ಳಾರಿ, ರಾಯಚೂರಿನಲ್ಲಿ ಭಾರೀ ಚಳಿ ಮುಂದುವರೆಯಲಿದೆ. ಮುಂದಿನ ದಿನಗಳಲ್ಲಿ ಈ ಭಾಗಗಳ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಕರಾವಳಿ ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ತಿಳಿಸಿದೆ.

   ಈಗಾಗಲೇ ಭಾರೀ ಚಳಿಯಿಂದಾಗಿ ಹಲವು ಜಿಲ್ಲೆಗಳಲ್ಲಿ ಬೆಳಗ್ಗೆ 9 ಗಂಟೆಯಾದರೂ ಜನರು ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಬೀದರ್, ಕಲಬುರಗಿ, ರಾಯಚೂರು, ಧಾರವಾಡ ಜಿಲ್ಲೆಗಳಲ್ಲೇ ಹೆಚ್ಚು ಚಳಿ ಮುಂದುವರೆದಿದೆ. ಜನವರಿ ತಿಂಗಳಾಂತ್ಯದಲ್ಲಿ ಚಳಿ ಪ್ರಮಾಣ ಕಡಿಮೆಯಾಗಲಿದ್ದು, ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Recent Articles

spot_img

Related Stories

Share via
Copy link