ಕೇಂದ್ರ ಸಚಿವ ಸೋಮಣ್ಣ ಕಾರ್ಯಕ್ರಮದಲ್ಲಿ ಹೈಡ್ರಾಮಾ

ಕೊಪ್ಪಳ: 

    ಜಿಲ್ಲೆಯ ಹಿಟ್ನಾಳದಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲಾನ್ಯಾಸದ ವೇಳೆ ಹೈಡ್ರಾಮಾ ನಡೆದಿದೆ. ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಸಂಸದರು, ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಫೋಟೊ, ಹೆಸರು ನಮೂದಿಸಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದು, ಈ ವೇಳೆ ಶಿವರಾಜ್ ತಂಗಡಗಿ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

   ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಕೇಂದ್ರ ಸಚಿವ ಸೋಮಣ್ಣ ಎದುರೇ ಕೈ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ವೇದಿಕೆ ಮೇಲಕ್ಕೆ ಕುರ್ಚಿ ಎಸೆದು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸಚಿವ ವಿ.ಸೋಮಣ್ಣ ಕಾರಿನ ಮುಂಭಾಗ ಕುಳಿತು ಆಕ್ರೋಶ‌ ಹೊರಹಾಕಿದರು. ಅಲ್ಲದೇ ಸ್ಥಳಕ್ಕೆ ಸಚಿವ ಶಿವರಾಜ್‌ ತಂಗಡಗಿ ಅವರು ಆಗಮಿಸಿ, ಕೇಂದ್ರ ಸಚಿವ ಸೋಮಣ್ಣ ವಿರುದ್ಧ ಅಸಮಾಧಾನ ನಡೆಸಿದರು.

   ಸಚಿವ ಸೋಮಣ್ಣ ಪೂಜೆ ನೆರವೇರಿಸಿ ಶಂಕುಸ್ಥಾಪನೆ ಮಾಡಲು ಮುಂದಾದಾಗ, ಕಾಂಗ್ರೆಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಕೂಡ ಪ್ರೋಟೋಕಾಲ್ ವಿಚಾರವನ್ನು ಎತ್ತಿ ಆಕ್ಷೇಪ ವ್ಯಕ್ತಪಡಿಸಿದರು. ವೇದಿಕೆ ಬಳಿ ಸಚಿವ ಸೋಮಣ್ಣ, ಇಂತಹ ಕಾರ್ಯಕ್ರಮಗಳಲ್ಲಿ ಪಟಾಲಂ ತೆಗೆದುಕೊಂಡು ಗಲಾಟೆ ಮಾಡಬೇಡಿ ಎಂದು ಹೇಳಿದ್ದರಿಂದ ಶಿವರಾಜ್ ತಂಗಡಗಿ ಮತ್ತಷ್ಟು ಕೆರಳಿದರು. ಪರಿಣಾಮ ವೇದಿಕೆಯ ಬಳಿಯೇ ಕೇಂದ್ರ ಮತ್ತು ರಾಜ್ಯ ಸಚಿವರ ನಡುವೆ ತೀವ್ರ ವಾಗ್ವಾದ ನಡೆಯಿತು.

   ಘಟನೆ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಸೋಮಣ್ಣ, ಕಾಮಗಾರಿಯ ಸಂಪೂರ್ಣ ವೆಚ್ಚ ಕೇಂದ್ರ ಸರ್ಕಾರದ್ದು. ಕಾರ್ಯಕ್ರಮದ ಸಂಬಂಧ ಯಾವುದೇ ಶಿಷ್ಟಾಚಾರ ಉಲ್ಲಂಘನೆಯಾಗಿಲ್ಲ. ಶಿಲಾನ್ಯಾಸ ಕಲ್ಲಿನಲ್ಲಿ ಸ್ಥಳೀಯ ಸಂಸದರು, ಶಾಸಕರ ಹೆಸರು ಇದೆ. ಆದರೆ, ಉದ್ದೇಶಪೂರ್ವಕವಾಗಿ ಗಲಾಟೆ ಮಾಡಿಸಲಾಗಿದೆ ಎಂದು ತಿಳಿಸಿದ್ದಾರೆ. 

   ಕೊಪ್ಪಳ ಜಿಲ್ಲೆಯ ಹಿಟ್ನಾಳದಲ್ಲಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು, ಗಿಣಿಗೇರಾ – ಮುನಿರಾಬಾದ್ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ನಂ. 77ರ ಬದಲಿಗೆ ರಸ್ತೆ ಮೇಲ್ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಈ ಮೇಲ್ಸೇತುವೆಯಿಂದ ಜನರ ಸುರಕ್ಷಿತ, ಸುಗಮ ಸಂಚಾರಕ್ಕೆ ನೆರವಾಗಲಿದೆ.

Recent Articles

spot_img

Related Stories

Share via
Copy link