![]()
ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಕೆಲಸ ಮಾಡಿರುವ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಮುಖಂಡರ ವಿರುದ್ಧ ಪಕ್ಷದ ವರಿಷ್ಠರು ತೆಗೆದುಕೊಂಡ ನಿರ್ಧಾರ ಸೂಕ್ತವಾಗಿದೆ ಎಂದು ಸಂಸದೆ ಪ್ರಭಾ ಮಲ್ಲಿಕಾರ್ಜುನ ತಿಳಿಸಿದ್ದಾರೆ.
ನಗರದಲ್ಲಿರುವ ತಮ್ಮ ನಿವಾಸದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ಶಿಸ್ತಿನ ಪಕ್ಷ. ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಂಡಿದೆ ಎಂದರು.
ಇದೇ ವೇಳೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಅವರನ್ನು ಗೆಲ್ಲಿಸಿ ಎಂದು ಶಾಮನೂರು ಶಿವಶಂಕರಪ್ಪ ಕರೆ ನೀಡಿದ್ದರು. ಆಗ ಏಕೆ ಕ್ರಮ ಕೈಗೊಂಡಿರಲಿಲ್ಲ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅವರು ತಬ್ಬಿಬ್ಬಾದರು.
ದೇಶದಲ್ಲಿ ಇಂಡಿಯಾ ಒಕ್ಕೂಟದವರು ಮಹಿಳಾ ವಿರೋಧಿಗಳೆಂದು ಬಿಂಬಿಸುವ ಷಡ್ಯಂತ್ರ ನಡೆಯುತ್ತಿದೆ. ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಹಿಳಾ ಮೀಸಲಾತಿ ವಿಚಾರ ತರಾತುರಿಯಲ್ಲಿ ಮುನ್ನೆಲೆಗೆ ಬಂದಿದೆ. ಇದೇ ವಿಚಾರವನ್ನಿಟ್ಟುಕೊಂಡು ನಮ್ಮನ್ನು ಮಹಿಳಾ ವಿರೋಧಿಗಳು ಎಂದು ಬಿಂಬಿಸಲಾಗುತ್ತಿದೆ ಎಂದು ದೂರಿದರು.
ಕ್ಷೇತ್ರ ಪುನರ್ವಿಂಗಡಣೆಯಿAದ ಇಂಡಿಯಾ ಒಕ್ಕೂಟಕ್ಕೆ ಹಿನ್ನಡೆಯಾಗುವ ಆತಂಕವಿದೆ. ಉತ್ತರ ಭಾರತದಲ್ಲಿ ಹೆಚ್ಚು ಸೀಟ್?ಗಳನ್ನು ಬಿಜೆಪಿ ಪಡೆಯಲಿದೆ. ಆದ್ದರಿಂದ ವಿರೋಧಿಸಿದೆವು ಎಂದರು.
ಮಹಿಳೆಯರನ್ನು ಮತ ಬ್ಯಾಂಕ್ ಆಗಿ ಬಳಸುವುದರ ಜೊತೆಗೆ ಭಾವನಾತ್ಮಕ ಪ್ರಚೋದನೆ ನೀಡುವುದನ್ನು ನಿಲ್ಲಿಸಬೇಕು. ಮಹಿಳಾ ಮೀಸಲಾತಿ ಮಸೂದೆ ಪಾಸ್ ಆದರೆ ಕ್ರೆಡಿಟ್ ತೆಗೆದುಕೊಳ್ಳುವುದು ಮತ್ತು ಸೋತರೆ ಇಂಡಿಯಾ ಒಕ್ಕೂಟದ ವಿರುದ್ಧ ಹರಿಹಾಯುವುದು ಎನ್ಡಿಎ ಸರ್ಕಾರದ ಉದ್ದೇಶವಾಗಿತ್ತು ಎಂದರು.







