
ಮೈಸೂರು : ಮಲ್ಲಿಕಾರ್ಜುನ ಖರ್ಗೆಯವರ ಮಾತನ್ನು ಗಮನಿಸಿದರೆ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಬಹುದು ಅನಿಸುತ್ತದೆ. ಆದರೆ, ಕೆಲವರು ಖರ್ಗೆ ಸಿಎಂಯವರು ಆಗಲಿ ಎನ್ನುತ್ತಾರೆ, ಮತ್ತೆ ಕೆಲವರು ಡಿ. ಕೆ. ಶಿವಕುಮಾರ್ ಮೇ 15ಕ್ಕೆ ಸಿಎಂ ಆಗುತ್ತಾರೆ ಎನ್ನುತ್ತಾರೆ. ನೋಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದರು.
ಶನಿವಾರ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸೂತ್ತೂರು ಮಠಕ್ಕೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದ ವಿಜಯೇಂದ್ರ ಅವರು ಮಾಧ್ಯಮದವರ ಜೊತೆ ಮಾತನಾಡಿದರು.
ಉಪಚುನಾವಣೆ ಫಲಿತಾಂಶ ಕಾಂಗ್ರೆಸ್ಗೆ ಪಾಠವಾಗಲಿದ್ದು, ಎರಡು ಕ್ಷೇತ್ರಗಳಲ್ಲಿ ಬೈ ಎಲೆಕ್ಷನ್ ಗೆಲ್ಲುವ ವಿಶ್ವಾಸ ಇಲ್ಲ ಅಂತ ಕಾಂಗ್ರೆಸ್ ಮುಖಂಡರೇ ನನಗೆ ಹೇಳಿದ್ದಾರೆ. ಫಲಿತಾಂಶ ಬಂದ ಮೇಲೆ ರಾಜ್ಯದ ಸಿಎಂ ಹಾಗೂ ಕಾಂಗ್ರೆಸ್?ಗೆ ಪಾಠವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಮೈಸೂರು ಪಂಜಾಬ್ ಆಗಿದೆ, ಡ್ರಗ್ಸ್ ಹಾವಳಿ ಜಾಸ್ತಿಯಾಗಿದೆ. ಕಾಂಗ್ರೆಸ್ ಸರ್ಕಾರ ಮನುಷ್ಯತ್ವ ಇಲ್ಲದ ಸರ್ಕಾರ. ಮೈಸೂರಿನಲ್ಲಿ 3 ವರ್ಷದಿಂದ ಒಂದೇ ಒಂದು ಅಭಿವೃದ್ಧಿ ಆಗಿಲ್ಲ. ರಾಜ್ಯದ ಅಭಿವೃದ್ಧಿಗೆ ಕಾಂಗ್ರೆಸ್ ಮನಸ್ಸು ಮಾಡಿಲ್ಲ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಕೇವಲ ಕುರ್ಚಿ ಉಳಿಸಿಕೊಳ್ಳುವ ಹಪಾಹಪಿ ಅಷ್ಟೇ ಕಾಣಿಸುತ್ತಿದೆ. ದೆಹಲಿಗೆ ಒಬ್ಬರ ಹಿಂದೆ ಒಬ್ಬರು ಹೋಗುತ್ತಿದ್ದಾರೆ ಎಂದು ಟೀಕಿಸಿದರು.
ಮೇ 8 ರಂದು ಯಡಿಯೂರಪ್ಪ ಚಿತ್ರದುರ್ಗದ ಪುರ ಪ್ರವೇಶ ಮಾಡಲಿದ್ದು, ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಗುವುದು. 9 ರಂದು ಅಮಿತ್ ಶಾ ಅವರು ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ನಾಡಿನ ರೈತರು, ಮಹಿಳೆಯರು, ಸ್ವಾಮೀಜಿಗಳು ಎಲ್ಲರೂ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸುಮಾರು 10 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಯಡಿಯೂರಪ್ಪ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಮಿನಿ ದಸರಾ ಮಾದರಿಯಲ್ಲಿ ಕಾರ್ಯಕ್ರಮ ಮಾಡುತ್ತೇವೆ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಶ್ರೀಗಳು ಬರಲು ಒಪ್ಪಿದ್ದಾರೆ : ಸ್ವಾಮೀಜಿಯನ್ನು ಭೇಟಿ ಮಾಡಿ, ಮೇ 9 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಯಡಿಯೂರಪ್ಪ ಅವರ 50ನೇ ವರ್ಷದ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಬರಬೇಕೆಂದು ಆಹ್ವಾನ ನೀಡಲಾಗಿದ್ದು, ಸ್ವಾಮೀಜಿಯವರು ಬರಲು ಒಪ್ಪಿದ್ದಾರೆ ಎಂದು ತಿಳಿಸಿದರು.
ವಿಜಯೇಂದ್ರ ಬೂಸ್ಟ್ ಕಾರ್ಯಕ್ರಮ ಅಲ್ಲ :
ಚುನಾವಣೆ ಸಮೀಪ ಕಾರ್ಯಕ್ರಮ ಆಯೋಜನೆ ಮಾಡಿದ್ದರೆ, ವಿಜಯೇಂದ್ರ ಅಥವಾ ಬಿಜೆಪಿಗೆ ಬೂಸ್ಟ್ ಆಗುತ್ತಿತ್ತು. ಈಗ ಯಾವುದೇ ಚುನಾವಣೆ ಇಲ್ಲ, ಇದು ಯಡಿಯೂರಪ್ಪ ಅವರಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮ. ಈ ರಾಜ್ಯದಲ್ಲಿ ಅನೇಕರು ಅದೃಷ್ಟದ ಸಿಎಂ ಆಗಿದ್ದಾರೆ. ಆದರೆ, ಯಡಿಯೂರಪ್ಪ ಅದೃಷ್ಟದ ಸಿಎಂ ಅಲ್ಲ. ಜನರಿಂದ ಜನರಿಗಾಗಿ ಜನರಿಗೋಸ್ಕರ ಇದ್ದವರು. ಅದಕ್ಕಾಗಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಗೋವಿಂದ ಕಾರಜೋಳ ಅವರ ಅಪೇಕ್ಷೆಯಂತೆ ಚಿತ್ರದುರ್ಗದಲ್ಲಿ ಮಾಡುತ್ತಿದ್ದೇವೆ.
– ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ








