
ಬೆಂಗಳೂರು: ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ನೇರವಾಗಿ ಆರ್ಎಸ್ಎಸ್ ಹೆಸರನ್ನು ಉಲ್ಲೇಖಿಸದಿದ್ದರೂ, ಸರ್ಕಾರದ ಕ್ರಮಗಳ ಉದ್ದೇಶ ಸ್ಪಷ್ಟವಾಗಿದೆ. ಸದನದಲ್ಲಿ ಆರ್ಎಸ್ಎಸ್ನ ಪ್ರಾರ್ಥನೆಯ ಉಲ್ಲೇಖ ಮಾಡಿದ್ದ ಮುಖ್ಯಮಂತ್ರಿಗಳ ನಿಲುವು ಇದೀಗ ಬಯಲಾಗಿದೆ. ಆರ್ಎಸ್ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಸಾರ್ವಜನಿಕ ಸಭೆಗಳಿಗೆ ಅನುಮತಿ ಕಡ್ಡಾಯಗೊಳಿಸುವಂತಹ ನಿರ್ಧಾರಗಳನ್ನು ಸರ್ಕಾರ ಕೈಗೊಳ್ಳುತ್ತಿದೆ. ಧೈರ್ಯವಿದ್ದರೆ ಆರ್ಎಸ್ಎಸ್ ಅನ್ನು ನಿಷೇಧಿಸುವ ಪ್ರಯತ್ನ ಮಾಡಿ ಎಂದು ಬಿ.ವೈ.ವಿಜಯೇಂದ್ರ ಸವಾಲ್ ಹಾಕಿದ್ದಾರೆ.
ತಾಯಿ ಭುವನೇಶ್ವರಿ ಪ್ರತಿಮೆ ಮುಂದೆ ಭಾರತೀಯ ಜನತಾ ಪಕ್ಷದ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಮುಖ್ಯಮಂತ್ರಿಗಳೇ, ನಿಮಗೆ ಧೈರ್ಯವಿದ್ದರೆ ಆರ್ಎಸ್ಎಸ್ ಅನ್ನು ನಿಷೇಧಿಸುವ ಪ್ರಯತ್ನ ಮಾಡಿ ನೋಡೋಣ. ಆರ್ಎಸ್ಎಸ್ನಿಂದ ಯಾವ ದೇಶವಿರೋಧಿ ಚಟುವಟಿಕೆ ನಡೆದಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಇಲಾಖೆಯ ಜವಾಬ್ದಾರಿಗಳ ಬಗ್ಗೆ ಗಮನಹರಿಸುವ ಬದಲು ಪದೇಪದೇ ಆರ್ಎಸ್ಎಸ್ ಅನ್ನು ಟೀಕಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಆರ್ಎಸ್ಎಸ್ ದೇಶಭಕ್ತ ಸಂಘಟನೆ: ಆರ್ಎಸ್ಎಸ್ ಶತಮಾನ ಪೂರೈಸಿರುವ ಸಂಘಟನೆ. ದೇಶಭಕ್ತಿ, ರಾಷ್ಟಾçಭಿಮಾನ ಹಾಗೂ ಸೇವಾ ಮನೋಭಾವ ಬೆಳೆಸುವ ಸಂಘಟನೆಯಾಗಿ ಅದು ಕಾರ್ಯನಿರ್ವಹಿಸುತ್ತಿದೆ. ದೇಶದ ಪರವಾಗಿ ಧ್ವನಿ ಎತ್ತುವ ಶಕ್ತಿಗಳಲ್ಲಿ ಆರ್ಎಸ್ಎಸ್ ಪ್ರಮುಖವಾಗಿದೆ. ಹಿಂಬಾಗಿಲಿನಿAದ ಆರ್ಎಸ್ಎಸ್ನ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಯಾವುದೇ ಪ್ರಯತ್ನವನ್ನು ಬಿಜೆಪಿ ಸಹಿಸುವುದಿಲ್ಲ. ಸರ್ಕಾರ ತನ್ನ ನಿಲುವನ್ನು ಮರುಪರಿಶೀಲಿಸಬೇಕು ಎಂದು ಅವರು ಎಚ್ಚರಿಸಿದರು.
ರಾಜ್ಯ ಮತ್ತು ದೇಶದ ಜನಸಂಖ್ಯೆಯಲ್ಲಿ ಮಹಿಳೆಯರು ಶೇಕಡ 50ರಷ್ಟು ಇದ್ದಾರೆ. ಮಹಿಳೆಯರಿಗೆ ಸಮಾನ ಅವಕಾಶ ಹಾಗೂ ಸೂಕ್ತ ಪ್ರಾತಿನಿಧ್ಯ ದೊರೆಯಬೇಕು. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಮಹಿಳೆಯರಿಗೆ 33ರಷ್ಟು ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಾಗ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ಅವರು ಅದನ್ನು ವಿರೋಧಿಸುತ್ತಾರೆ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೇ ಮಹಿಳೆಯರಿಗೆ ಪ್ರಾತಿನಿಧ್ಯ ನಿರಾಕರಿಸುವ ಮೂಲಕ ಮಹಿಳಾ ಸಮುದಾಯಕ್ಕೆ ಅಪಮಾನ ಮಾಡುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದರು.
ಆರ್ಎಸ್ಎಸ್ ಭಯೋತ್ಪಾದಕ ಸಂಘಟನೆಯೇ..?, ಮಾಫಿಯಾದವರೇ?
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಾರ್ವಜನಿಕ ಸ್ಥಳಗಳ ಬಳಕೆಗೆ ಕಾನೂನು, ನಿಯಮಗಳನ್ನು ಪಾಲನೆ ಮಾಡಬೇಕು ಎಂದರೆ ಬಿಜೆಪಿಯವರು ಇದು ಆರ್.ಎಸ್.ಎಸ್ ಗೆ ಹೇಳಿರುವುದು ಎಂದು ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ. ಕುಂಬಳಕಾಯಿ ಕದ್ದವರಿಗೆ ಮಾತ್ರ ಹೆಗಲು ಮುಟ್ಟಿ ನೋಡಿಕೊಳ್ಳುವಂತಹ ಆತಂಕವಿರುತ್ತದೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆರ್.ಎಸ್.ಎಸ್ ಎದುರು ಹಾಕಿಕೊಂಡರೆ ನೀವು ಮನೆಯಿಂದ ಆಚೆ ಬರಲು ಆಗುವುದಿಲ್ಲ” ಎಂದಿದ್ದಾರೆ. ಧೈರ್ಯವಿದ್ದರೆ ಆರ್ಎಸ್ಎಸ್ ಅನ್ನು ನಿಷೇಧಿಸುವ ಪ್ರಯತ್ನ ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈವಿಜಯೇಂದ್ರ ಅವರು ಸವಾಲು ಹಾಕಿದ್ದಾರೆ. ಈ ಬೆದರಿಕೆ ಮಾತುಗಳ ಹಿಂದಿನ ಅರ್ಥವೇನು? ಆರ್.ಎಸ್.ಎಸ್ ಭಯೋತ್ಪಾದಕ ಸಂಘಟನೆಯೇ? ಪ್ರಶ್ನಿಸಿದವರನ್ನು ಮುಗಿಸುವ ಅಂಡರ್ ವರ್ಲ್್ಡ ಮಾಫಿಯಾದವರೇ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.








