ಚಳ್ಳಕೆರೆ
ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದ ವಿವಿಧ ವಾರ್ಡ್ಗಳಲ್ಲಿ ಶಾಸಕ ಟಿ.ರಘುಮೂರ್ತಿ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಿದರು. ಪ್ರತಿಯೊಂದು ವಾರ್ಡ್ಗಳಲ್ಲೂ ಪಾದಯಾತ್ರೆಯ ಮೂಲಕ ಮನೆ ಮನೆಗೂ ತೆರಳಿ ಮತಯಾಚನೆ ಮಾಡಿದರು. ನಗರದ ಅಭಿವೃದ್ಧಿಗೆ ಹೆಚ್ಚಿನ ಶಕ್ತಿ ನೀಡಲು ಈ ಬಾರಿಯ ನಗರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡುವಂತೆ ಮತದಾರರಿಗೆ ಮನವಿ ಮಾಡಿದರು.
ಅವರು ಶನಿವಾರ ನಗರದ ಡಿ.ಸುಧಾಕರ್ ನಗರ, ವೆಂಕಟೇಶ್ವರ ನಗರ, ಸೂಜಿಮಲ್ಲೇಶ್ವರ ನಗರ ವ್ಯಾಪ್ತಿಗಳಲ್ಲಿ ಅಭ್ಯರ್ಥಿಗಳು ಹಾಗೂ ಪಕ್ಷದ ಮುಖಂಡರೊಂದಿಗೆ ಪ್ರಚಾರ ನಡೆಸಿದರು. ನಗರದಲ್ಲಿ ಈಗಾಗಲೇ ಕಳೆದ 5 ವರ್ಷಗಳ ಅವಧಿಯಲ್ಲಿ ನಗರದ ನಾಗರೀಕರ ಸಮಸ್ಯೆಗಳಿಗೆ ಸ್ಪಂದಿಸಲಾಗಿದೆ. ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ, ನಗರದ ಅಭಿವೃದ್ಧಿಗೆ ಅವಶ್ಯವಿರುವ ಎಲ್ಲಾ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.
ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ 30 ಅಭ್ಯರ್ಥಿಗಳು ಸ್ಪರ್ಧಿಸಿದ್ದು ಕಡೇ ಪಕ್ಷ 20 ಸ್ಥಾನಗಳಲ್ಲಾದರೂ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಲಿದೆ ಎಂದರು. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಕಾರ್ಯಕರ್ತರು ಹಾಗೂ ಮುಖಂಡರು ಚುನಾವಣೆ ಮುಗಿಯುವ ತನಕ ಕೇವಲ ಮತದಾರರನ್ನು ವಿನಂತಿಸಿ ಮತ ನೀಡುವಂತೆ ಮನವಿ ಮಾಡುವ ಮೂಲಕ ಪಕ್ಷದ ವಿಜಯಕ್ಕೆ ನಾಂದಿಹಾಡಬೇಕು ಎಂದರು.
ಪ್ರಚಾರ ಕಾರ್ಯದಲ್ಲಿ ಪಕ್ಷದ ಅಭ್ಯರ್ಥಿಗಳಾದ ಟಿ.ಮಲ್ಲಿಕಾರ್ಜುನ್, 1ನೇ ವಾರ್ಡ್ನ ವೈ.ಪ್ರಕಾಶ್, ಎಸ್.ಮಂಜುಳಾ, ತಾಲ್ಲೂಕು ಪಂಚಾಯಿತಿ ಸದಸ್ಯ ಜಿ.ವೀರೇಶ್, ಪುರುಷೋತ್ತಮನಾಯ್ಕ ಮುಂತಾದವರು ಉಪಸ್ಥಿತರಿದ್ದರು.