ಬೆಂಗಳೂರು,ಸೆ.1:
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೋದಿ ಅಲೆಯನ್ನು ಹಿಮ್ಮೆಟ್ಟಿಸಿ ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ರಣತಂತ್ರ ರೂಪಿಸುತ್ತಿರುವ ಕಾಂಗ್ರೆಸ್ ನಾಯಕರು, ಘಟಾನುಘಟಿಗಳನ್ನು ಚುನಾವಣಾ ಕಣಕ್ಕಿಳಿಸಲು ಮುಂದಾಗಿದ್ದಾರೆ.ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸೇರಿದಂತೆ ಹಲವು ಗೆಲ್ಲುವ ಸಾಮಥ್ರ್ಯವಿರುವವರನ್ನು ಕಣಕ್ಕಿಳಿಸಲು ವರಿಷ್ಠರು ಮುಂದಾಗಿದ್ದಾರೆ.
ಸಿದ್ದರಾಮಯ್ಯ ಅವರನ್ನು ಕೊಪ್ಪಳ ಇಲ್ಲವೆ ಬಾಗಲಕೋಟೆಯಿಂದ ಕಣಕ್ಕಿಳಿಸಬೇಕೆಂದು ಅವರ ಅಭಿಮಾನಿ ವರ್ಗ ಆಸಕ್ತವಾಗಿದೆ. ಆದರೆ ಸಿದ್ದರಾಮಯ್ಯ ಇದಕ್ಕೆ ಸುತಾರಾಂ ಒಪ್ಪುತ್ತಿಲ್ಲ. ಸಿದ್ದರಾಮಯ್ಯನವರು ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಬೇಕೆಂಬ ಒತ್ತಡ ಪ್ರಬಲವಾಗಿ ಕೇಳಿಬಂತು. ಶಿವರಾಜ್ ತಂಗಡಿ, ಬಸವನಗೌಡ ಬಾದರ್ಲಿ, ರಾಘವೇಂದ್ರ ಹಿಟ್ನಾಳ್ ಮುಂತಾದವರು ಸಿದ್ದರಾಮಯ್ಯ ಸ್ಪರ್ಧಿಸಬೇಕೆಂದು ಆಗ್ರಹಿಸಿದರು.
ಸಿದ್ದರಾಮಯ್ಯನವರು ಸ್ಪರ್ಧೆಗೆ ಸದ್ಯಕ್ಕೆ ಸಹಮತ ವ್ಯಕ್ತಪಡಿಸಲಿಲ್ಲ. ಬಸವನಗೌಡ ಬಾದರ್ಲಿ, ವಿರೂಪಾಕ್ಷಪ್ಪ, ಕರಿಯಣ್ಣ, ಬಸವರಾಜ ರಾಯರೆಡ್ಡಿ ಸೇರಿದಂತೆ ಏಳು ಜನ ಈ ಕ್ಷೇತ್ರದಲ್ಲಿ ಆಕಾಂಕ್ಷಿಗಳಿದ್ದು, ಸಿದ್ದರಾಮಯ್ಯ ಬರುವುದಾದರೆ ನಾವೆಲ್ಲ ಹಿಂದೆ ಸರಿದು ಅವಕಾಶ ಮಾಡಿಕೊಡುವುದಾಗಿ ಹೇಳಿದರು. ಸಿದ್ದರಾಮಯ್ಯನವರು ಈ ಸಂದರ್ಭದಲ್ಲಿ ಮಾತನಾಡಿ, ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿ ಕೆಲಸ ಮಾಡಿದ್ದರೂ ಜನ ಮನ್ನಣೆ ನೀಡಲಿಲ್ಲ. ಹೀಗಾಗಿ ನಾನು ಸದ್ಯ ಏನೂ ಹೇಳುವುದಿಲ್ಲ ಎಂದು ಹೇಳಿದರು.
ಇದೇ ರೀತಿ ಬಿಜಾಪುರದಿಂದ ಎಂ.ಬಿ. ಪಾಟೀಲ್, ಹಾವೇರಿಯಿಂದ ಎಚ್.ಕೆ. ಪಾಟೀಲ್ ಸೇರಿ ಹಲವು ಹಿರಿಯರನ್ನು ಕಣಕ್ಕಿಳಿಸಲು ವರಿಷ್ಠರು ಆಲೋಚನೆ ನಡೆಸಿದ್ದಾರೆ.ಲೋಕಸಭಾ ಚುನಾವಣೆ ಕುರಿತು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ವಿಚಾರ ಪ್ರಮುಖವಾಗಿ ಪ್ರಸ್ತಾಪವಾಗಿದೆ. ಕೊಪ್ಪಳ ಇಲ್ಲವೆ ಬಾಗಲಕೋಟೆಯಿಂದ ಚುನಾವಣಾ ಕಣಕ್ಕಿಳಿದರೆ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷದ ಬಲ ಹೆಚ್ಚಾಗಲಿದೆ ಎನ್ನುವುದು ಈ ಭಾಗದ ನಾಯಕರ ಅಭಿಪ್ರಾಯವಾಗಿದೆ.
ಬಳ್ಳಾರಿ ಜಿಲ್ಲಾ ಮುಖಂಡರ ಸಭೆ ನಡೆಸಲಾಯಿತು. ಜಿಲ್ಲೆಯಲ್ಲಿ ಆರು ಜನ ಕಾಂಗ್ರೆಸ್ ಶಾಸಕರಿದ್ದು, ಎಲ್ಲರೂ ಒಟ್ಟಾಗಿ ಅಭ್ಯರ್ಥಿ ಆಯ್ಕೆ ಮಾಡಿದರೆ ಗೆಲುವು ಸುಲಭ ಸಾಧ್ಯವಾಗುತ್ತದೆ. ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸೂಕ್ತ ಕಾರ್ಯತಂತ್ರ ರೂಪಿಸಬೇಕೆಂಬ ಸಲಹೆ ಕೇಳಿ ಬಂತು.ಇಂದು ನಡೆದ ಸಭೆಯಲ್ಲಿ ಜಿಲ್ಲಾವಾರು ಪ್ರತ್ಯೇಕ ಸಭೆ, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹ, ಜಾತ್ಯತೀತ ಪಕ್ಷಗಳೊಂದಿಗೆ ಮೈತ್ರಿ ಮುಂತಾದ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ದೇಶಾದ್ಯಂತ ಇರುವ ಮೋದಿ ಅಲೆಯನ್ನು ಕುಗ್ಗಿಸಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ದೇಶಾದ್ಯಂತ ಪ್ರಚುರಪಡಿಸಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ದೇಶದ ಚುಕ್ಕಾಣಿ ಹಿಡಿಯಬೇಕಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಾಯಕರು ಇಂದು ಚರ್ಚೆ ನಡೆಸಿದರು. ತಳಮಟ್ಟದ ಕಾರ್ಯಕರ್ತರನ್ನು ಹುರಿದುಂಬಿಸಿ ಜನರಲ್ಲಿ ಜಾಗೃತಿ ಮೂಡಿಸಿ ಮತಗಳನ್ನು ಸೆಳೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಾಯಕರು ಚರ್ಚಿಸಿದರು.
ಹಾಲಿ ಇರುವ 9 ಲೋಕಸಭೆ ಸ್ಥಾನಗಳ ಜತೆಗೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಅನಿವಾರ್ಯತೆ ಇದೆ. ಇದಕ್ಕಾಗಿ ಜಾತ್ಯತೀತ ಶಕ್ತಿಗಳ ಜತೆ ಕೈ ಜೋಡಿಸಬೇಕು. ರಾಜ್ಯದಲ್ಲಿ ಜೆಡಿಎಸ್ ಜತೆ ಸೇರಿ ಮೈತ್ರಿ ಸರ್ಕಾರ ಮಾಡಿದ್ದು, ಜೆಡಿಎಸ್ ಜತೆ ಚುನಾವಣೆ ಪೂರ್ವ ಮೈತ್ರಿ ಮಾಡಿಕೊಂಡು ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕು. ಬಿಜೆಪಿಗೆ ಹೆಚ್ಚಿನ ಸ್ಥಾನ ಗೆಲ್ಲಲು ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂಬ ಬಗ್ಗೆ ಚರ್ಚಿಸಲಾಯಿತು. ಮೈತ್ರಿ ಸರ್ಕಾರ ಮಾಡಿರುವ ರೈತರ ಸಂಪೂರ್ಣ ಸಾಲಮನ್ನಾ, ಹಿಂದಿನ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಗಳಾದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟಿನ್ ಮುಂತಾದ ಯೋಜನೆಗಳನ್ನು ಮುಂದುವರಿಸಿರುವುದರ ಲಾಭವನ್ನು ಚುನಾವಣೆಯಲ್ಲಿ ಪಡೆಯುವುದರ ಬಗ್ಗೆಯೂ ಕೂಡ ಸಭೆಯಲ್ಲಿ ಚರ್ಚಿಸಲಾಯಿತು.
ಬಿಜೆಪಿಯವರ ಅಪಪ್ರಚಾರಗಳನ್ನು ಹತ್ತಿಕ್ಕುವ ಬಗ್ಗೆಯೂ ಚರ್ಚಿಸಲಾಯಿತು. ಭಾವನಾತ್ಮಕ ವಿಷಯಗಳು, ಕೋಮು ಭಾವನೆ ಸೃಷ್ಟಿಸುವ ಕೆಲಸ ಮಾಡುವ ಬಗ್ಗೆ ಎಚ್ಚರದಿಂದ ಇರಬೇಕು. ಈ ಬಗ್ಗೆ ಜನರನ್ನು ಜಾಗೃತಿಗೊಳಿಸಬೇಕು. ಪಕ್ಷ ಸಂಘಟನೆಯನ್ನು ಬಲಗೊಳಿಸಬೇಕು. ಬ್ಲಾಕ್ ಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಶಕ್ತಿಯುತಗೊಳಿಸಬೇಕು. ಒಟ್ಟಾರೆ ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಗೊಂದಲವಾಗದಂತೆ ಎಚ್ಚರಿಕೆಯ ಹೆಜ್ಜೆಯನ್ನಿಟ್ಟು ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂಬುದರ ಬಗ್ಗೆ ಮಹತ್ವದ ಚರ್ಚೆ ನಡೆದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
