ಬಳ್ಳಾರಿ
ಮಹಿಳೆಯರನ್ನು ತಾತ್ಸಾರ ಮನೋಭಾವನೆಯಿಂದ ಕಾಣುವುದನ್ನು ಬಿಟ್ಟು ಪೂಜ್ಯನೀಯ ಭಾವನೆಯಿಂದ ಕಾಣುವ ಮೂಲಕ ಪ್ರತಿಯೊಬ್ಬರು ಅವರಿಗೆ ಗೌರವ ಸಲ್ಲಿಸಬೇಕು. ಹೆಣ್ಮಕ್ಕಳ ಸವಾಲುಗಳನ್ನು ನಿವಾರಿಸುವ ನಿಟ್ಟಿನಲ್ಲಿ ಸರ್ವರು ಪ್ರಯತ್ನಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಬಿ.ಹಂದ್ರಾಳ್ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಯುನಿಸೇಫ್ ಸಂಸ್ಥೆಯ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಹಾಗೂ ಜಿಲ್ಲೆಯಲ್ಲಿ ಅಪೌಷ್ಟಿಕತೆ ಸವಾಲುಗಳನ್ನು ಗುರುತಿಸುವ ಮತ್ತು ನಿವಾರಿಸುವ ಕುರಿತು ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಇಂದಿಗೂ ಸಹ ಕುಟುಂಬದಲ್ಲಿ ಹೆಣ್ಣು, ಗಂಡು ಎನ್ನುವ ಲಿಂಗ ತಾರತಮ್ಯ ನಡೆಯುತ್ತಿವೆ. ಗಂಡುಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ತೋರುವ ಆಸಕ್ತಿ ಹೆಣ್ಣುಮಕ್ಕಳಿಗೆ ತೋರುವುದಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ ನ್ಯಾ.ಹಂದ್ರಾಳ್ ಅವರು, ಬಾಲ್ಯ ವಿವಾಹ, ಭ್ರೂಣ ಹತ್ಯೆ ನಿಷೇಧ ಸೇರಿದಂತೆ ಮಹಿಳೆಯರು ಮತ್ತು ಮಕ್ಕಳ ಸಬಲೀಕರಣವಾಗಿಸುವ ನಿಟ್ಟಿನಲ್ಲಿ ಸರಕಾರಗಳು ಜಾರಿಗೆ ತಂದ ಯೋಜನೆಗಳ ಕುರಿತು ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕು ಮತ್ತು ಈ ಕುರಿತು ಗ್ರಾಮೀಣ ಭಾಗದ ಮಹಿಳೆಯರಿಗೆ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಮುತುವರ್ಜಿ ವಹಿಸಬೇಕು ಎಂದು ಸಲಹೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾಗೇಶ್ ಬಿಲ್ವ ಮಾತನಾಡಿ, ಮಹಿಳೆಯರಲ್ಲಿ ಅಪೌಷ್ಟಿಕತೆ ಹೆಚ್ಚಾಗಿ ಕಾಡುತ್ತಿದೆ. ಈ ಬಗ್ಗೆ ಅರಿವು ಮೂಡಿಸಬೇಕು. ಜಿಲ್ಲೆಯಲ್ಲಿ 23595ಗಂಡು, 23227ಹೆಣ್ಣು ಮಕ್ಕಳು ಮಧ್ಯಮ ಅಪೌಷ್ಠಿಕತೆಯಿಂದ, 521ಮಕ್ಕಳು ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ. ಇಂತಹ ಮಕ್ಕಳನ್ನು ಗುರುತಿಸಿ ಸೂಕ್ತ ಪೌಷ್ಠಿಕ ಆಹಾರಗಳನ್ನು ನೀಡುವ ಮೂಲಕ ಅಪೌಷ್ಠಿಕತೆಯಿಂದ ಬಳಲುವ ಮಕ್ಕಳ ಸಂಖ್ಯೆಯನ್ನು ಕಡಿಮೆ ಮಾಡಲಾಗುತ್ತಿದೆ ಎಂದರು.
ಅಪೌಷ್ಠಿಕತೆ ನಿವಾರಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವುದು ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಯುನಿಸೇಫ್ ಸಂಸ್ಥೆಯ ರಾಜ್ಯ ಸಂಯೋಜಕ ಅಬೀದ್ ಅಹ್ಮದ್ ಮಾತನಾಡಿದರು. ನ್ಯಾಯಾಧೀಶರಾದ ಗಂಗಾಧರ್ಮಠ, ನಾಗೇಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಿವರಾಜ ಹೆಡೆ, ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿಜಯಲಕ್ಷ್ಮೀ, ಯುನಿಸೇಫ್ನ ಡಾ.ಎಂ.ಎಸ್.ತಾರಾ ಸೇರಿದಂತೆ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ತಾಪಂ ಇಒಗಳು,ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಆರೋಗ್ಯ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
