ಬೆಂಗಳೂರು
ದೇವನಹಳ್ಳಿಯಲ್ಲಿ ಡಿಸೆಂಬರ್ 8 ರಿಂದ ಎರಡು ದಿನಗಳ ರಾಜ್ಯ ಸರ್ವ ಸದಸ್ಯರ ಸಭೆ ನಡೆಯಲಿದ್ದು,ರಾಜ್ಯ , ರಾಷ್ಟ್ರ, ಅಂತಾರಾಷ್ಟ್ರೀಯ ಹಂತದ ರಾಜಕಾರಣ, ಆರ್ಥಿಕ ಬದಲಾವಣೆ, ದುಡಿಯುವ ಜನರ ಐಕ್ಯತೆ, ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟುವಿಕೆ ಮುಂತಾದ ವಿಷಯಗಳು ಕುರಿತು ವಿಚಾರ ಗೋಷ್ಠಿಗಳನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ತಿಳಿಸಿದ್ದಾರೆ.
ಈ ಸಭೆಯಲ್ಲಿ ಸಂಘಟನೆಯ ಎಲ್ಲಾ ಪದಾಧಿಕಾರಿಗಳು, 2 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಮೊದಲ ದಿನ ದೇವನಹಳ್ಳಿಯ ಟಿಪ್ಪು ಜನ್ಮಸ್ಥಳದಿಂದ ಹೊರಡುವ ಬೃಹತ್ ಮೆರವಣಿಗೆಗೆ ಡಿಎಸ್ಎಸ್ ನಾಯಕಿ ಇಂದಿರಾ ಕೃಷ್ಣಪ್ಪ ಚಾಲನೆ ನೀಡಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾವಳ್ಳಿ ಶಂಕರ್, ಮಾಜಿ ಸಚಿವ ಹೆಚ್.ಆಂಜನೇಯ ಅವರು ಅಂದು ಮಧ್ಯಾಹ್ನ 12 ಗಂಟೆಗೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ,ಶಾಸಕ ನಿಸರ್ಗ ಎಲ್.ಎನ್.ನಾರಾಯಣ ಸ್ವಾಮಿ, ಬೆಂಗಳೂರು ವಿಶ್ವವಿದ್ಯಾಲಯದ ಆರ್ಥಿಕ ತಜ್ಞ ಡಾ.ಕೇಶವ್ ಅವರು ಭಾಗವಹಿಸಲಿದ್ದಾರೆ. ಡಿ. 9ರಂದು ನಡೆಯುವ ವಿಚಾರಗೋಷ್ಠಿಗಳಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಮತ್ತು ಕವಿ ಮೂಡ್ನಕೂಡು ಚಿನ್ನಸ್ವಾಮಿ ತಮ್ಮ ಚಿಂತನೆಗಳನ್ನು ಹಂಚಿಕೊಳ್ಳಲಿದ್ದಾರೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








