ಬೆಂಗಳೂರು
ಕಾಂಗ್ರೆಸ್ ಭಿನ್ನಮತೀಯ ಶಾಸಕ ರಮೇಶ್ ಜಾರಕಿಹೊಳಿ ಎಲ್ಲಿದ್ದಾರೆ ಎಂಬ ನಿಗೂಢ ರಹಸ್ಯ ರಾಜ್ಯ ರಾಜಕೀಯ ವಲಯದಲ್ಲಿ ಮಂಗಳವಾರವೂ ಮುಂದುವರೆದಿದ್ದು, ಜಾರಕಿಹೊಳಿ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರನ್ನು ಭೇಟಿಯಾಗಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ರಮೇಶ್ ಜಾರಕಿಹೊಳಿ, ಅಮಿತ್ ಷಾ ಅವರನ್ನು ಭೇಟಿ ಮಾಡಿರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ; ಭಿನ್ನಮತೀಯ ಕಾಂಗ್ರೆಸ್ ಶಾಸಕರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಭೇಟಿ ಮಾಡುವ ಯಾವುದೇ ಸಾಧ್ಯತೆಗಳಿಲ್ಲ ಎಂದು ತಿಳಿಸಿದ್ದಾರೆ. ಸಂಪುಟದಿಂದ ಕೈಬಿಟ್ಟನಂತರ ರಾಜ್ಯ ಕಾಂಗ್ರೆಸ್ ನಾಯಕರ ಸಂಪರ್ಕಕ್ಕೆ ಸಿಗದ ರಮೇಶ್ ಜಾರಕಿಹೊಳಿ, ದೆಹಲಿಯಲ್ಲಿ ಬೆಂಬಲಿಗ ಶಾಸಕರೊಂದಿಗೆ ಬಿಜೆಪಿ ಬೆಂಬಲಿಸಲು ಮಾತುಕತೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ
ಮುಂದಿನ ಲೋಕಸಭಾ ಚುನಾವಣೆಗೆ ಪಕ್ಷದ ಕಾರ್ಯಕರ್ತರನ್ನು ಅಣಿಗೊಳಿಸುವ ಕೆಲಸದಲ್ಲಿ ನಾನು ಬಿಡುವಿಲ್ಲದೆ ತೊಡಗಿಸಿಕೊಂಡದ್ದೇನೆ; ಜೆಡಿಎಸ್-ಕಾಂಗ್ರೆಸ್ ಸರ್ಕಾರವನ್ನು ಪದಚ್ಯುತಗೊಳಿಸುವ ಯಾವುದೇ ಯೋಜನೆ ನಮ್ಮ ಮುಂದಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಶಾಸಕರೊಂದಿಗೆ ಬಿಜೆಪಿ ನಾಯಕರು ನಿರಂತರ ಸಂಪರ್ಕದಲ್ಲಿದ್ದಾರೆ. ರಾಜ್ಯದಲ್ಲಿ ಮತ್ತೆ ಗದ್ದುಗೆ ಏರಲು ಎಲ್ಲ ಪ್ರಯತ್ನಗಳನ್ನು ಅದು ನಡೆಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ಧರಾಮಯ್ಯ ಅವರ ಅರೋಪವಾಗಿದೆ
ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಲು ಪಕ್ಷ ಸೇರ್ಪಡೆಗೊಳ್ಳುವಂತೆ ಬಿಜೆಪಿ ನಾಯಕರು ತಮಗೆ ವಿವಿಧ ರೀತಿಯ ಅಮಿಷ ಒಡ್ಡುತ್ತಿದ್ದಾರೆ ಎಂದು ಅಫ್ಜಲ್ಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ.ವೈ ಪಾಟೀಲ್ ಆರೋಪಿಸಿದ್ದಾರೆ. ಬಿಜೆಪಿಯ ಯಾವುದೇ ಪ್ರಯತ್ನ ವಿಫಲಗೊಳಿಸುವುದಾಗಿ . ಕಾಂಗ್ರೆಸ್ನಲ್ಲಿಯೇ ಮುಂದುವರಿಯುವುದಾಗಿ ಹೇಳಿರುವ ಅವರು, ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರ್ಕಾರ ತನ್ನ ಪೂರ್ಣ ಅವಧಿಯನ್ನು ಪೂರೈಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








