ಬೆಂಗಳೂರು
ಯುವ ಪೀಳಿಗೆಯು ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಶ್ರೇಯೋಭಿವೃದ್ಧಿ ಸಾಧಿಸಲ್ಲೆಂದು ರಾಜ್ಯ ಸರ್ಕಾರ ಎಲ್ಲಾ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ಆರಂಭಿಸಲು ಉದ್ದೇಶಿಸಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿಶ್ವೇಶ್ವರಯ್ಯ ಕೈಗಾರಿಕೆ ಮತ್ತು ತಾಂತ್ರಿಕ ಮ್ಯೂಸಿಯಂ ಅಡಿ ನಗರದ ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಸಭಾಂಗಣದಲ್ಲಿ ಆಯೋಜಿಸಿದ ‘ದಕ್ಷಿಣ ಭಾರತ ರಾಜ್ಯಗಳ ವಿಜ್ಞಾನ ಮೇಳ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ಮೇಳ ಆಯೋಜಿಸಿದ್ದು, ತಾಲ್ಲೂಕು, ಜಿಲ್ಲಾ, ರಾಜ್ಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಕ್ಕಳಿಗೆ ಸಿಗಲಿದೆ. ದಕ್ಷಿಣ ಭಾರತದಿಂದ ಆಗಮಿಸಿರುವ 6 ರಾಜ್ಯಗಳ ವಿದ್ಯಾರ್ಥಿಗಳಿಗೆ ಮೇಳ ಉಪಯುಕ್ತವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಡಾ.ಬಿ.ಆರ್. ಅಂಬೇಡ್ಕರ್ ಅವರು ವಿಜ್ಞಾನಿಗಳಾಗಿರಲಿಲ್ಲ. ಆರ್ಥಿಕ ತಜ್ಞರಾಗಿದ್ದರು. ಸಂವಿಧಾನದಲ್ಲಿ ಕರ್ತವ್ಯಗಳ ಬಗ್ಗೆ ಬರೆದ ಅವರು, ಶಿಕ್ಷಣ ಪದ್ಧತಿಯಲ್ಲಿ ವಿಜ್ಞಾನ ವಿಷಯಗಳನ್ನು ಅಳವಡಿಸಿಕೊಳ್ಳುವ ಮೂಲಕ ದೂರ ದೃಷ್ಟಿ ಹೊಂದಿದರಾಗಿದ್ದರು ಎಂದು ಅಭಿಪ್ರಾಯಪಟ್ಟರು.
ಅಭಿವೃದ್ಧಿ ಹೊಂದಿದ ಬೇರೆ ದೇಶಗಳಿಗೆ ಹೋಲಿಸಿದರೆ, ವಿಜ್ಞಾನ ಹಾಗೂ ತಂತ್ರಜ್ಞಾನ ಸಂಸ್ಥೆಗಳಲ್ಲಿ ದೇಶದ ಜನರು ಹೆಚ್ಚಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿಶೇಷವಾಗಿ ಮೈಸೂರು ಮಹಾರಾಜರಿಂದ ಕರ್ನಾಟಕ ಹಾಗೂ ಬೆಂಗಳೂರಿನಲ್ಲಿ ವಿಜ್ಞಾನ ಕ್ಷೇತ್ರಕ್ಕೆ ಹೆಚ್ಚು ದೊರಕಿದೆ ಎಂದರು.
38 ಡಾಕ್ಟರೇಟ್ ಪದವಿ ಪಡೆದ ವಿಜ್ಞಾನಿ ಡಾ. ಸಿ ಎನ್ ರಾವ್ ಸೇರಿ ಅನೇಕ ವಿಜ್ಞಾನಿಗಳು ಸಾಧಕರಾಗಿ ಭಾರತ ದೇಶದಲ್ಲಿ ವಿಜ್ಞಾನದ ಬಗ್ಗೆ ಅಡಿಪಾಯ ಹಾಕಿ ಕೊಟ್ಟಿದ್ದಾರೆ. ರಾಜ್ಯದಲ್ಲಿ ಇಂಜಿನಿಯರಿಂಗ್, ಮೆಡಿಕಲ್ ಕಾಲೇಜುಗಳನ್ನು ಪ್ರಾರಂಭ ಮಾಡದೆ ಇದ್ದಿದ್ದರೆ ಬೇರೆ ರಾಜ್ಯಗಳಲ್ಲಿ ಕೂಡ ಇವುಗಳನ್ನು ಆರಂಭಿಸುತ್ತಿರಲಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ವಿಶ್ವೇಶ್ವರಯ್ಯ ಕೈಗಾರಿಕೆ ಮತ್ತು ತಾಂತ್ರಿಕ ಮ್ಯೂಸಿಯಂ ನಿರ್ದೇಶಕರಾದ ಕೆ.ಮದನ್ ಗೋಪಾಲ್ ಮಾತನಾಡಿ, ಕೇರಳ, ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತೆಲಂಗಾಣ, ತಮಿಳುನಾಡು ಹಾಗೂ ಪುದುಚೇರಿ ವಿದ್ಯಾರ್ಥಿಗಳು ವಿಜ್ಞಾನ ಮೇಳದಲ್ಲಿ ಪಾಲ್ಗೊಂಡಿದ್ದು, ಬೇರೆ ರಾಜ್ಯದ ವಿದ್ಯಾರ್ಥಿಗಳು ವಿಜ್ಞಾನ ಹಾಗೂ ತಂತ್ರಜ್ಞಾನದ ಕುರಿತು ಯಾವ ದೃಷ್ಠಿಕೋನದಲ್ಲಿ ಚಿಂತಿಸುತ್ತಿದ್ದಾರೆ ಎಂಬುದನ್ನು ಅವರ ಪ್ರಾತ್ಯಕ್ಷಿಕೆಯ ಮೂಲಕ ತಿಳಿದುಕೊಳ್ಳಲು ಸಹಾಯಕವಾಗಲಿದೆ. ಪ್ರತಿ ರಾಜ್ಯದಿಂದ ಪ್ರತ್ಯೇಕ ಗುಂಪು ಹಾಗೂ ಶಿಕ್ಷಕರ ಪ್ರದರ್ಶನ ಸೇರಿ ಅಂದಾಜು 300 ಪ್ರಾತ್ಯಕ್ಷಿಕೆ ಪ್ರದರ್ಶಿಸಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ಪಿ.ಸಿ.ಜಾಫರ್, ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ ನಿರ್ದೇಶನಾಲಯದ ನಿರ್ದೇಶಕರಾದ ಲಲಿತಾ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
