ಶಿರಾ:
ಬೆಲೆ ಏರಿಕೆ ತಡೆ, ಉದ್ಯೋಗ ಸೃಷ್ಠಿ, ಮೋಟಾರ್ ವಾಹನ ತಿದ್ದುಪಡಿ ಮಸೂದೆ ಹಿಂಪಡೆತ ಸೇರಿದಂತೆ ಹತ್ತು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ವಿವಿಧ ಕಾರ್ಮಿಕ ಸಂಘಟನೆಗಳು ದೇಶ ವ್ಯಾಪಿ ಕೈಗೊಂಡಿರುವ ಬಂದ್ ಹಿನ್ನೆಲೆಯಲ್ಲಿ ಶಿರಾ ನಗರದಲ್ಲಿ ನೀರಸ ಪ್ರತಿಕ್ರಿಯೆ ಕಂಡು ಬಂದಿದೆ.
ಅಂಗನವಾಡಿ ಕಾರ್ಯಕರ್ತರ ಮತ್ತು ಸಹಾಯಕಿಯರ ಫೆಡರೇಷನ್ ಕಾರ್ಮಿಕ ಸಂಘಟನೆಗಳ ಜೆಂಟಿ ಸಮಿತಿಯ ಸಹಯೋಗದಲ್ಲಿ ಮಂಗಳವಾರ ನಗರದ ಪ್ರವಾಸಿ ಮಂದಿರದ ವೃತ್ತದಲ್ಲಿ ಪ್ರತಿಭಟನೆಯನ್ನು ಕೈಗೊಳ್ಳಲಾಗಿತ್ತು.
ಪ್ರವಾಸಿ ಮಂದಿರದ ವೃತ್ತದಿಂದ ಹೊರಟ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಕಾರ್ಮಿಕ ಸಂಘಟನೆಗಳ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ತೆರಳಿತು. ತಹಶೀಲ್ದಾರ್ ಕಛೇರಿಗೆ ಆಗಮಿಸಿದ ಮೆರವಣಿಗೆಯು ಕಛೇರಿಯ ಮುಂದೆ ಪ್ರತಿಭಟನೆ ನಡೆಸಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿತು.
ಜಿಲ್ಲಾ ಸಿ.ಐ.ಟಿ.ಯು. ಕಾರ್ಯದರ್ಶಿ ಸುಬ್ರಹ್ಮಣ್ಯ ಮಾತನಾಡಿ ಕೇಂದ್ರ ಸರ್ಕಾರವು ಗುತ್ತಿಗೆ ಕಾರ್ಮಿಕ ಪದ್ಧತಿಯನ್ನು ಈ ಕೂಡಲೇ ನಿಷೇಧಿಸಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಕಾಯಂಯೇತರ ಕಾರ್ಮಿಕರನ್ನು ಖಾಯಂ ಮಾಡಲು ಈ ಕೂಡಲೇ ಶಾಸನ ಹೊರಡಿಸಬೇಕು. ಕಾರ್ಪೊರೇಟ್ ಬಂಡವಾಳ ಪರ ಕಾರ್ಮಿಕ ಕಾನೂನುಗಳ ತಿದ್ದುಪಡಿಯನ್ನು ಮಾಡಕೂಡದು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಎ.ಐ.ಟಿ.ಯು.ಸಿ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಲಾವತಿ ಮಾತನಾಡಿ ದೇಶದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗಿದ್ದು ಈ ಕೂಡಲೇ ಕೇಂದ್ರ ಸರ್ಕಾರ ಉಸದ್ಯೋಗ ಸೃಷ್ಠಿಗೆ ಕ್ರಮ ಕೈಗೊಳ್ಳಬೇಕು. ಎಲ್ಲಾ ಕಾರ್ಮಿಕರಿಗೂ ಮಾಸಿಕ ವೇತನ 18,000 ರೂಗಳನ್ನು ಕಡ್ಡಾಯವಾಗಿ ನೀಡಬೇಕು. 43ನೇ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸ್ಸಿನಂತೆ ಆಶಾ, ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಇನ್ನಿತರ ಸ್ಕೀಂ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಿ ಖಾಯಂಗೊಳಿಸಬೇಕು ಎಂದು ಒತ್ತಾಯಿಸಿದರು.
ಎ.ಐ.ಟಿ.ಯು.ಸಿ ಕಾರ್ಯದರ್ಶಿ ವನಜಾಕ್ಷಿ, ಖಜಾಂಚಿ ಮೀನಾಕ್ಷಿ, ಸಹ ಕಾರ್ಯದರ್ಶಿ ಲೀಲಾವತಿ, ಉಪಾಧ್ಯಕ್ಷೆ ಸರಳಾದೇವಿ ಸೇರಿದಂತೆ ನಿಸಾರ್ ಅಹಮದ್, ಜಿಲ್ಲಾ ರೈತ ಸಂಘದ ಸಂಚಾಲಕ ನಾದೂರು ಕೆಂಚಪ್ಪ ಸೇರಿದಂತೆ ಅನೇಕ ಪ್ರಮುಖರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
