ಚಿತ್ರದುರ್ಗ
ಸಂಸದರ ಕ್ಷೇತ್ರಾಭಿವೃದ್ದಿ ಯೋಜನೆಯಡಿಯಲ್ಲಿ ಮಂಜೂರಾಗಿರುವ ಎಲ್ಲಾ ಕಾಮಗಾರಿಗಳನ್ನು ಕಾಲಬದ್ದಮಿತಿಯಲ್ಲಿ ಪೂರ್ಣಗೊಳಿಸಬೇಕೆಂದು ಕ್ಷೇತ್ರ ಸಂಸದರಾದ ಬಿ.ಎನ್ ಚಂದ್ರಪ್ಪ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಜ.16 ರಂದು ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಯಾ ಇಲಾಖೆಗಳಿಗೆ ಮಂಜೂರಾಗಿರುವ ಅನುದಾನವನ್ನು ಬಳಸಿಕೊಂಡು ಕಾಮಗಾರಿಗಳನ್ನು ಪೂರ್ಣಗೊಳಿಸುವಲ್ಲಿ ಅಧಿಕಾರಿಗಳು ವಿಳಂಬ ದೋರಣೆಯನ್ನು ತಾಳಬಾರದೆಂದು ಅವರು ತಾಕೀತು ಮಾಡಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಯೋಜನೆಗಳನ್ನು ಆಧ್ಯತೆಯ ಮೇಲೆ ಪೂರ್ಣಗೊಳಿಸಿ, ಜನರಿಗೆ ಶುದ್ದ ಕುಡಿಯುವ ನೀರು ಪೂರೈಕೆಯಾಗುವಂತೆ ಅಧಿಕಾರಿಗಳು ಗಮನ ಹರಿಸಬೇಕೆಂದು ಅವರು ಹೇಳಿದರು.
ಈ ಜಿಲ್ಲೆಗೆ ಸಂಸದರ ಕ್ಷೇತ್ರಾಭಿವೃದ್ಧಿಗಾಗಿ ರೂ.25 ಕೋಟಿ ಮಂಜೂರಾಗಿದ್ದು ಆ ಪೈಕಿ 17.5 ಕೋಟಿ ಮಾತ್ರ ಇಲ್ಲಿಯವರೆಗೆ ಖರ್ಚು ಮಾಡಲಾಗಿದೆ ಉಳಿದ 7.5 ಕೋಟಿ ಕಾಮಗಾರಿಗಳ ಕೆಲಸಗಳನ್ನು ತ್ವರಿತ ಗತಿಯಲ್ಲಿ ಕೈಗೆತ್ತಿಕೊಂಡು ಪೂರ್ಣಗೊಳಿಸಿ ಅನುಧಾನವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಮಾತನಾಡಿ ಕಾಮಗಾರಿ ಅನುಷ್ಠಾನಗೊಳಿಸುವಲ್ಲಿ ಏನಾದರು ಸಮಸ್ಯೆ ಕಂಡು ಬಂದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತಂದು ಅವುಗಳ ಅನುಷ್ಠಾನಕ್ಕೆ ಮುಂದಾಗಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ವಿಜಯ್ಕುಮಾರ್, ನಗರಸಭೆ ಪೌರಯುಕ್ತ ಚಂದ್ರಪ್ಪ ಸಿ, ಭೂಸೇನಾ ನಿಗಮದ ಹಾಗೂ ನಿರ್ಮಿತಿ ಕೇಂದ್ರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
