ದಾವಣಗೆರೆ
ಪೂರ್ವ ವಲಯದ ನೂತನ ಪೊಲೀಸ್ ಮಹಾ ನಿರೀಕ್ಷಕರಾಗಿ ಸೌಮೇಂದು ಮುಖರ್ಜಿ ಶುಕ್ರವಾರ ಸಂಜೆ ಅಧಿಕಾರ ಸ್ವೀಕರಿಸಿದರು.
ಬಿಹಾರ ಮೂಲದವರಾದ ಸೌಮೇಂದು ಮುಖರ್ಜಿ ಅವರು 1998ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಈ ಹಿಂದೆ ಗುಲ್ಬರ್ಗಾದಲ್ಲಿ ಎಎಸ್ಪಿಯಾಗಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜಿಲ್ಲಾ ಪೆÇೀಲಿಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಬೆಂಗಳೂರು ನಗರ ಆಗ್ನೇಯ ವಿಭಾಗದ ಡಿಸಿಪಿಯಾಗಿ ಹಾಗೂ ಆಂತರಿಕ ಭದ್ರತೆಯ ಐಜಿಪಿಯಾಗಿ ಸೇವೆ ಸಲ್ಲಿಸಿದ್ದು, ಅಗ್ನಿ ಶಾಮಕ ಮತ್ತು ಕೆಎಸ್ಆರ್ಟಿಸಿ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ನಗರದ ಐಜಿಪಿ ಕಚೇರಿಯಲ್ಲಿ ಶುಕ್ರವಾರ ಸಂಜೆ ಅಧಿಕಾರ ವಹಿಸಿಕೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲಾಖೆಯ ತಂಡದ ನಾಯಕನಾಗಿ ಅಧಿಕಾರಿ ಮತ್ತು ಸಿಬ್ಬಂಧಿಗಳೊಂದಿಗೆ ಸೌಜನ್ಯದಿಂದ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸುತ್ತೇನೆ ಎಂದು ತಿಳಿಸಿದರು.
ಈ ಹಿಂದಿನ ಚುನಾವಣೆಗಳಲ್ಲಿ ಕಾರ್ಯನಿರ್ವಹಿಸಿರುವ ಅನುಭವವಿದ್ದು, ಚುನಾವಣೆಗೆ ತಕ್ಕಂತೆ ಸ್ಪಂದಿಸಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗುವುದು. ಇತ್ತೀಚಿನ ದಿನಗಳಲ್ಲಿ ಇಲಾಖೆಯಲ್ಲಿ ತಂತ್ರಜ್ಞಾನ ಮೇಲ್ಮಟ್ಟದಲ್ಲಿದ್ದು, ಅದನ್ನು ಯಶಸ್ವಿಯಾಗಿ ಬಳಿಸಿಕೊಳ್ಳುತ್ತೇನೆ ಎಂದರು.
ಜಿಲ್ಲೆಯಲ್ಲಿ ಇತ್ತೀಚೆಗೆ ಸರ್ಕಾರಿ ಮತ್ತು ಖಾಸಗಿ ಬಸ್ಗಳಿಂದ ಅಪಘಾತಗಳು ಹೆಚ್ಚಾಗುತ್ತಿವೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಯಿಸಿದ ಅವರು, ಇಲ್ಲಿಗೆ ಬರುವ ಮುನ್ನ ಜಿಲ್ಲೆಯ ಅಂಕಿ ಅಂಶಗಳನ್ನು ಗಮನಿಸಿದ್ದೇನೆ. ಅಪಘಾತಗಳಾಗುತ್ತಿರುವುದು ತಿಳಿದು ಬಂದಿದೆ. ಸಂಚಾರ ಸುಧಾರಣೆ ಮತ್ತು ಅಪಘಾತ ತಡೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಪಘಾತಗಳಿಗೆ ಕಾರಣ ಏನೆಂಬುದನ್ನು ಪತ್ತೆ ಮಾಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಆರ್. ಚೇತನ್, ಹೆಚ್ಚುವರಿ ಪೊಲಿಸ್ ವರಿಷ್ಠಾಧಿಕಾರಿ ಟಿ.ಜೆ. ಉದೇಶ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳ ಪಿಎಸ್ಐ ಮತ್ತು ಇಲಾಖೆಯ ಅಧಿಕಾರಿಗಳು, ಸಿಬ್ಬಂಧಿಗಳು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








