ಹಾವೇರಿ 
ಬೇಸಿಗೆ ಕುಡಿಯುವ ನೀರಿನ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸಿ ಎಂದು ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಸೂಚಿಸಿದರು.ಮಂಗಳವಾರ ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಜನರಿಗೆ ಉದ್ಯೋಗ ಕಲ್ಪಿಸಿರುವ ಕುರಿತಂತೆ ಪರಿಶೀಲನೆ ನಡೆಸಿದರು.
ಎಪ್ರಿಲ್, ಮೇ, ಜೂನ್ ಹಾಗೂ ಜುಲೈ ತಿಂಗಳವರೆಗೆ ನೀರಿನ ಸಮಸ್ಯೆ ಎದುರಾಗುವ ಗ್ರಾಮಗಳಿಗೆ ನೀರು ಪೂರೈಸುವ ಕುರಿತಂತೆ ಕ್ರಿಯಾಯೋಜನೆಯನ್ನು ತಯಾರಿಸಬೇಕು. ಟ್ಯಾಂಕರ್ ಮೂಲಕ ಯಾವ ಯಾವ ಮೂಲಗಳಿಂದ ಯಾವ ಗ್ರಾಮಗಳಿಗೆ ನೀರು ಪೂರೈಸಬೇಕಾಗುತ್ತದೆ ಎಂಬ ವಿವರಗಳೊಂದಿಗೆ ಅಗತ್ಯಕ್ಕನುಗುಣವಾಗಿ ನೀರು ಪೂರೈಸಲು ಆದ್ಯತೆ ನೀಡುವಂತೆ ಸೂಚಿಸಿದರು.
ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು, ಪೈಪ್ ಮೂಲಕ ನೀರು ಸರಬರಾಜು ಮುಂದುವರಿದ ಹಳೆಯ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಈಗಾಗಲೇ ಕುಡಿಯುವ ನೀರಿನ ಯೋಜನೆಗೆ ಜಿಲ್ಲಾಡಳಿತದಲ್ಲಿ ಸಾಕಷ್ಟು ಅನುದಾನವಿದೆ.
ಅನುಷ್ಠಾನಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಅನುದಾನದ ಬೇಡಿಕೆ ಸಲ್ಲಿಸಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಯಾವುದೇ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಬೇಕು.
ಕಳೆದ ಎರಡು ವರ್ಷದಿಂದ ಕುಡಿಯುವ ನೀರಿನ ವಿವಿಧ ಕಾಮಗಾರಿಗಳು ಈವರೆಗೆ ಪೂರ್ಣಗೊಳಿಸಿದ ಏಜೆನ್ಸಿಗಳ ವಿರುದ್ಧ ಕ್ರಮತೆಗೆದುಕೊಳ್ಳಬೇಕಾಗುತ್ತದೆ. ಜಿಲ್ಲೆಯಲ್ಲಿ ಎಲ್ಲೆಲ್ಲಿ ಈ ರೀತಿಯ ಕಾಮಗಾರಿಗಳು ನಡೆಯುತ್ತವೆ ಆ ಸ್ಥಳಗಳಿಗೆ ಕಡ್ಡಾಯವಾಗಿ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರಗಳು ಭೇಟಿ ನೀಡಿ ಚುರುಕಿನಿಂದ ಕಾಮಗಾರಿ ಪೂರ್ಣಗೊಳಿಸಲು ಕ್ರಮಕೈಗೊಳ್ಳಬೇಕು. ಒಂದೊಮ್ಮೆ ಕಳಪೆ ಗುಣಮಟ್ಟದ ಕಾಮಗಾರಿಗಳು ನಡೆದಿದ್ದರೆ ವರದಿ ಸಲ್ಲಿಸುವಂತೆ ಸೂಚಿಸಿದರು.
ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತಂತೆ ಮಾಹಿತಿ ಪಡೆದರು. ಮಾಹಿತಿಯ ಪ್ರಕಾರ ಜಾನುವಾರುಗಳಿಗೆ ಜಿಲ್ಲೆಯಲ್ಲಿ ಮೇವಿನ ಕೊರತೆ ಇಲ್ಲ. 2018ರ ಜಾನುವಾರು ಗಣತಿಯ ಪ್ರಕಾರ ಮೇವಿನ ಲಭ್ಯತೆ ಕುರಿತಂತೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಪಶು ಸಂಗೋಪನೆ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.
ಜಿಲ್ಲೆಯಲ್ಲಿ 174 ಗ್ರಾಮಗಳಿಗೆ ಬೇಸಿಗೆ ನೀರಿನ ಸಮಸ್ಯೆ ಎದುರಾಗಬಹುದೆಂದು ಅಂದಾಜಿಸಲಾಗಿದೆ. ಈ ಪೈಕಿ 45 ಗ್ರಾಮಗಳಲ್ಲಿ 92 ಖಾಸಗಿ ಬೋರವೆಲ್ಗಳನ್ನು ಗುರುತಿಸಲಾಗಿದೆ. ಎಂಟು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಸಂದರ್ಭ ಎದುರಾಗಬಹುದು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಭಿಯಂತರ ವಿನಾಯಕ ಹುಲ್ಲೂರ ವಿವರಿಸಿದರು.
ಪ್ರಸಕ್ತ ಸಾಲಿನಲ್ಲಿ ಕುಡಿಯುವ ನೀರಿನ ಬರಪರಿಹಾರದಡಿ 352 ಕಾಮಗಾರಿಗಳನ್ನು ಕೈಗೊಂಡಿದ್ದು 315 ಕಾಮಗಾರಿಗಳು ಪೂರ್ಣಗೊಳಿಸಲಾಗಿದೆ, 37 ಕಾಮಗಾರಿಗಳು ಪ್ರಗತಿಯಲ್ಲಿವೆ. ಹೆಚ್ಚುವರಿಯಾಗಿ ಮಾರ್ಚ್ ತಿಂಗಳಲ್ಲಿ ಎರಡು ಕೋಟಿ ರೂ. ಬಿಡುಗಡೆಯಾಗಿದ್ದು ಕ್ರಿಯಾಯೋಜನೆ ತಯಾರಿಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಕೆ.ಲೀಲಾವತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ, ಉಪವಿಭಾಗಾಧಿಕಾರಿಗಳಾದ ಹರ್ಷಲ್ ನಾರಾಯಣ, ಎನ್.ತಿಪ್ಪೇಸ್ವಾಮಿ, ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಇಲಾಖೆ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








