ಬೆಂಗಳೂರು
ಗಾಂಜಾ ಮಾರಾಟ ಮಾಡುತ್ತಿದ್ದ ನೈಜೀರಿಯನ್ನೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿ 10 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ರಾಮಮೂರ್ತಿನಗರದ ಹೊರಮಾವು ಗಾರ್ಡನ್ನ ಯೂಸುಫ್ ಅಬ್ದುಲಾಹಿ(28)ಬಂಧಿತ ಆರೋಪಿಯಾಗಿದ್ದಾನೆ, ಬಂಧಿತನಿಂದ 10 ಕೆ.ಜಿ ತೂಕದ ಗಾಂಜಾ, ಎರಡು ಮೊಬೈಲ್ ಫೋನ್, ಪಾಸ್ ಪೋರ್ಟ್ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ.
ತನಿಖೆಯಲ್ಲಿ ಆರೋಪಿಯು ನೈಜೀರಿಯಾದಿಂದ ವಿದ್ಯಾಭ್ಯಾಸಕ್ಕಾಗಿ ಭಾರತಕ್ಕೆ ಬಂದು ಹೊರಮಾವು ಗಾರ್ಡನ್ ಬಳಿ ಬಾಡಿಗೆ ಮನೆ ಮಾಡಿಕೊಂಡು ತಮಿಳುನಾಡು ಮೂಲದ ವ್ಯಕ್ತಿಯೊಬ್ಬನಿಂದ ಕೆ.ಜಿಗಟ್ಟಲೆ ಗಾಂಜಾ ಖರೀದಿ ಮಾಡಿಕೊಳ್ಳುತ್ತಿದ್ದುದಾಗಿ ಹೇಳಿಕೊಂಡಿದ್ದಾನೆ. ಬಳಿಕ ತನ್ನದೇ ಜಾಲವನ್ನ ಸೃಷ್ಟಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಟೆಕ್ಕಿಗಳಿಗೆ ಮಾರಾಟ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿದೆ.
ಯೂಸುಫ್ ಅಬ್ದುಲಾಹಿ ಗಾಂಜಾ ಮನೆಯಲ್ಲಿ ಶೇಖರಿಸಿಕೊಂಡು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಬಂಧಿಸಿ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ ಗಿರೀಶ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








