ಹುಳಿಯಾರು:
ಸದೃಢ ಭಾರತ ನಿರ್ಮಾಣಕ್ಕೆ ಸಂವಿಧಾನ ನೀಡಿರುವ ಹಕ್ಕು ಮತದಾನ, ವಯಸ್ಕರೆಲ್ಲರೂ ತಪ್ಪದೆ ಮತ ಚಲಾಯಿಸಿ ಪ್ರಾಮಾಣಿಕರನ್ನು ಆಯ್ಕೆ ಮಾಡಬೇಕು ಎಂದು ಹುಳಿಯಾರು ಪಪಂ ಮುಖ್ಯಾಧಿಕಾರಿ ಡಿ.ಭೂತಪ್ಪ ಅವರು ಹೇಳಿದರು.ಹುಳಿಯಾರಿನಲ್ಲಿ ಪಟ್ಟಣ ಪಂಚಾಯ್ತಿ ಮತ್ತು ಚುನಾವಣಾ ಸ್ವೀಪ್ ಸಮಿತಿ ಸಹಯೋಗದಲ್ಲಿ ಗುರುವಾರ ನಡೆದ ಮತದಾನ ಜಾಗೃತಿ ಜಾಥಾ ಪಂಜಿನ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.
ಪ್ರಜಾ ಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮತದಾನ ಮಾಡುವುದು ಅತ್ಯಗತ್ಯವಾಗಿದೆ. ಯಾವುದೇ ಕಾರಣಕ್ಕೂ ಮತದಾನದಿಂದ ದೂರ ಇರಬಾರದು. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಈಡೇರಬೇಕಾದರೆ ನಿಸ್ವಾರ್ಥ ಜನಸೇವಕರನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರ ಮತದಾರರಿಗೆ ಇದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕಡ್ಡಾಯ ಮತ್ತು ನೈತಿಕ ಮತದಾನದ ಸಂದೇಶ ಸಾರುವ ಘೋಷಣೆ ಕೂಗುತ್ತಾ ಪಂಜಿನ ಮೆರವಣಿಗೆ ನಡೆಸಿ ಜನರಲ್ಲಿ ಮತದಾನ ಜಾಗೃತಿ ಮೂಡಿಸಿದರು. ಹಣಕ್ಕೆ ಮತ ಮಾರಿಕೊಳ್ಳಬೇಡಿ, ಅಭಿವೃದ್ಧಿ ಬಗ್ಗೆ ಕಾಳಜಿ ಇರುವ ಅಭ್ಯರ್ಥಿಗೆ ಮತ ನೀಡಿ, ಮತದಾನ ನಮ್ಮ ಹಕ್ಕು ಎನ್ನುವ ಘೋಷಣೆಗಳ ಮೂಲಕ ಮತದಾನ ಜಾಗೃತಿ ಜಾಥಾದಲ್ಲಿ ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಪಂಜಿನ ಮೆರವಣಿಗೆಯಲ್ಲಿ ಪಪಂ ಆರ್ಓ ಪ್ರದೀಪ್, ಎಸ್ಡಿಎ ಜಿನಾಯತ್, ಸಿಬ್ಬಂಧಿಗಳಾದ ಆನಂದ್, ರೇಖಾ, ವೆಂಕಟೇಶ್ ಸೇರಿದಂತೆ ಇಪ್ಪತ್ತೈದಕ್ಕೂ ಹೆಚ್ಚು ಪೌರಕಾರ್ಮಿಕರು ಪಂಜು ಹಿಡಿದು ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
