ಚಳ್ಳಕೆರೆ
ತಾಲ್ಲೂಕಿನ ಜನತೆ ಕಳೆದ ಸುಮಾರು ಎರಡು ತಿಂಗಳಿನಿಂದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರಿ ವರ್ಗದಿಂದ ಯಾವುದೇ ರೀತಿಯ ಸೌಲಭ್ಯಗಳನ್ನು ನಿರೀಕ್ಷಿಸಲಿಲ್ಲ. ಕುಡಿಯುವ ನೀರೂ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆ ನಡುವೆಯೂ ಸಹ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಜನತೆ ಸಹಕಾರ ನೀಡಿದ್ಧಾರೆ. ಈಗ ಚುನಾವಣಾ ಕಾರ್ಯಗಳು ಮುಗಿದಿದ್ದು ಗ್ರಾಮಗಳಿಗೆ ತೆರಳಿ ರೈತ ಸಮಸ್ಯೆಯನ್ನು ನಿವಾರಿಸಲು ತಾಲ್ಲೂಕು ಮಟ್ಟದ ಅಧಿಕಾರಿಗಳು ಮುಂದಾಗಬೇಕೆಂದು ಉಪವಿಭಾಗಾಧಿಕಾರಿ ವಿಜಯಕುಮಾರ್ ಸೂಚಿಸಿದರು.
ಅವರು,ಬುಧವಾರ ಮಧ್ಯಾಹ್ನ ಇಲ್ಲಿನ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬರಗಾಲದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ವಿಶೇಷ ಕಾರ್ಯಪಡೆ ಸಭೆ ಕರೆದು ಸಭೆಗೆ ಚಾಲನೆ ನೀಡಿ ಮಾತನಾಡಿದರು. ಈಗಾಗಲೇ ಕಳೆದ ಸುಮಾರು ಎರಡು ತಿಂಗಳುಗಳಿಂದ ರೈತರಿಗೆ ಅವಶ್ಯಕವಾಗಿ ಬೇಕಾದ ನೀರು, ಗೊಬ್ಬರ ಹಾಗೂ ಸಬ್ಸಿಡಿ ದೊರಕಿಸಿಕೊಡಲು ಇದುವರೆಗೂ ಸಾಧ್ಯವಾಗಿಲ್ಲ. ಪ್ರಸ್ತುತ ವರ್ಷವೂ ಸಹ ಮಳೆ ಬಾರದ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗಗಳಲ್ಲಿ ಹಲವಾರು ಕೊರತೆಗಳು ಗೋಚರಿಸಿತೊಡಗಿವೆ.
ಗ್ರಾಮೀಣ ಭಾಗದ ಜನರು ಜೀವನ ನಿರ್ವಹಿಸುವುದೇ ಕಷ್ಟಕರವಾಗಿದ್ದು, ನಿತ್ಯದ ಬದುಕು ಸಾಗಿಸಲು ಅನಿವಾರ್ಯವಾಗಿ ವಲಸೆ ಹೋಗಬೇಕು ಅಥವಾ ಗ್ರಾಮೀಣ ಭಾಗದಲ್ಲೇ ಕೆಲಸ ನಿರ್ವಹಿಸಬೇಕಿದೆ. ಅದ್ದರಿಂದ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಸಹ ಅಭಿವೃದ್ಧಿ ಅಧಿಕಾರಿಗಳು ಹಿರಿಯ ಅಧಿಕಾರಿಗಳ ಸಲಹೆ ಪಡೆದು ಉದ್ಯೋಗ ಖಾತರಿ ಯೋಜನೆಯಡಿ ಕಾಮಗಾರಿಗಳನ್ನು ಕೂಡಲೇ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ತಾಲ್ಲೂಕಿನ ಎಲ್ಲಾ 40 ಗ್ರಾಮ ಪಂಚಾಯಿತಿ ಕ್ಷೇತ್ರಗಳಲ್ಲಿ ಉದ್ಯೋಗ ಖಾತರಿ ಯೋಜನೆ ಕಾಮಗಾರಿ ಪ್ರಾರಂಭವಾಗಬೇಕು. ಕಾಮಗಾರಿ ಅನುಷ್ಠಾನಕ್ಕೆ ಅಗತ್ಯವಿರುವ ಎಲ್ಲಾ ದಾಖಲಾತಿಗಳನ್ನು ಸಂಬಂಧಪಟ್ಟ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಿದ್ದ ಪಡಿಸಿರಬೇಕು. ಗ್ರಾಮೀಣ ಭಾಗಗಳಲ್ಲಿ ಕೈಗೊಳ್ಳುವ ಹೆಚ್ಚಿನ ಕಾಮಗಾರಿಗಳಿಗೆ ಮಾನವ ದಿನಗಳನ್ನು ರೂಪಿಸಿಕೊಳ್ಳು ಅನುಕೂಲ ವಾಗುವಂತೆ ಕೂಲಿ ನೀಡುವ ಕಾಮಗಾರಿಗೆ ಆದ್ಯತೆ ನೀಡಬೇಕು. ಯಾವುದೇ ಹಂತದಲ್ಲೂ ಹತಾಷೆ ಎದುರಾಗದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ತುರ್ತು ಗಮನಹರಿಸಬೇಕೆಂದರು.
ತಹಶೀಲ್ದಾರ್ ತುಷಾರ್ ಬಿ.ಹೊಸೂರ್ ಮಾತನಾಡಿ, ಗ್ರಾಮೀಣ ಭಾಗಗಳ ನೈಜ್ಯ ಪರಿಸ್ಥಿತಿ ಮತ್ತು ಅಲ್ಲಿನ ಸಮಸ್ಯೆಗಳ ಬಗ್ಗೆ ಎಲ್ಲಾ ಅಧಿಕಾರಿಗಳಿಗೆ ಸಾಕಷ್ಟು ಮಾಹಿತಿ ಇದೆ. ವಿಶೇಷವಾಗಿ ಗ್ರಾಮೀಣ ಭಾಗಗಳ ಕುಡಿಯುವ ನೀರು, ಸ್ವಚ್ಚತೆಯ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗಮನ ಹರಿಸಬೇಕಿದೆ. ಗ್ರಾಮದ ಬಡ ಜನರಿಗೆ ಉದ್ಯೋಗ ಖಾತರಿ ಯೋಜನೆಯಡಿ ತೊಡಗಿಸಿಕೊಂಡು ನೆರವಾಗಬೇಕಿದೆ. ಜನರ ಸಮಸ್ಯೆಗಳ ನಿವಾರಣೆಗೆ ಎಲ್ಲಾ ಹಂತದಲ್ಲೂ ಪ್ರಾಮಾಣಿಕ ಪ್ರಯತ್ನ ನಡೆಸಬೇಕೆಂದು ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ಚಂದ್ರಶೇಖರ್ ಮಾತನಾಡಿ, ತಾಲ್ಲೂಕಿನ ಸುಮಾರು 35 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಅದರಲ್ಲಿ 16 ಗ್ರಾಮಗಳಿಗೆ ಈಗಾಗಲೇ ನೀರಿನ ಟ್ಯಾಂಕರ್ಗಳ ಮೂಲಕ ಪ್ರತಿನಿತ್ಯ ಎರಡು ಬಾರಿ ನೀರು ಸರಬರಾಜು ಮಾಡಲಾಗುತ್ತಿದೆ. ಜಿಲ್ಲಾಧಿಕಾರಿಗಳ ಸೂಚನೆಯಂತೆ ನೀರು ಸರಬರಾಜು ಮಾಡುವ ಟ್ಯಾಂಕರ್ಗಳಿಗೆ ಜಿಪಿಎಸ್ ಅಳವಡಿಸಲು ನಿರ್ದೇಶನ ನೀಡಿದೆ. ದುರಸ್ಥಿಯಾಗಬೇಕಿರುವ ಕುಡಿಯುವ ನೀರು ಬೋರ್ವೆಲ್, ನೀರಿನ ಘಟಕಗಳ ದುರಸ್ಥಿಗಳಿಗೆ ಸಂಬಂಧಪಟ್ಟ ಇಲಾಖೆಗೆ ಪಟ್ಟಿ ಮಾಡುವಂತೆ ತಿಳಿಸಿರುವುದಾಗಿ ತಿಳಿಸಿದರು.
ಸಹಾಯಕ ಕೃಷಿ ನಿರ್ದೇಶಕ ಡಾ.ಎನ್.ಮಾರುತಿ, ಗ್ರಾಮೀಣ ಕುಡಿಯುವ ನೀರು ಯೋಜನೆ ಕಿರಣ್ನಾಯಕ, ತೋಟಗಾರಿಕೆ ಅಧಿಕಾರಿ ವಿರೂಪಾಕ್ಷಪ್ಪ, ಪಶು ವೈದ್ಯಾಧಿಕಾರಿ ಡಾ.ಹನುಮಪ್ಪ, ಕಂದಾಯಾಧಿಕಾರಿಗಳಾದ ಶರಣಬಸಪ್ಪ, ಶಾಂತಪ್ಪ, ರಫೀಸಾಬ್, ಗ್ರಾಮ ಲೆಕ್ಕಿಗರಾದ ರಾಜೇಶ್, ದಿವಾಕರ ಮುಂತಾದವರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
