ಚಿತ್ರದುರ್ಗ:
ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಭಾರತೀಯ ಜನತಾ ಪಾರ್ಟಿಯ ನೇತೃತ್ವದ ಸರ್ಕಾರ ತನ್ನ ಕಾರ್ಮಿಕ ನೀತಿಯನ್ನು ಬದಲಾಯಿಸಿಕೊಳ್ಳಬೇಕಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಉಪಾಧ್ಯಕ್ಷ ಎ.ಜಾಕೀರ್ ಹುಸೇನ್ ಅಭಿಪ್ರಾಯ ಪಟ್ಟರು
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು ಕೇಂದ್ರ ಸರ್ಕಾರ ಕಳೆದ ಐದು ವರ್ಷಗಳ ಅವಧಿಯಲ್ಲಿ ರೈತರು, ಕೂಲಿ ಕಾರ್ಮಿಕರಿಗೆ ಯಾವುದೇ ಅನುಕೂಲ ಮಾಡಿಕೊಟ್ಟಿಲ್ಲ. ಬದಲಾಗಿ ಶ್ರೀಮಂತರ ಪರವಾದ ನಿಲುವನ್ನು ಹೊಂದಿದೆ. ಇದರಿಂದ ಕೊಟ್ಯಾಂತರ ಕಾರ್ಮಿಕರ ಭವಿಷ್ಯಕ್ಕೆ ಪೆಟ್ಟು ಬೀಳುತ್ತಿದೆ. ಸರ್ಕಾರ ತನ್ನ ನಿಲುವನ್ನು ಬದಲಾಯಿಸಿಕೊಳ್ಳಬೇಕು ಎಂದು ಹೇಳಿದರು
ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಬಳಿಕ ಯಾವುದೇ ಬದಲಾವಣೆಯಾಗಿಲ್ಲ. ಅಭಿವೃದ್ದಿಯನ್ನೂ ಮಾಡಿಲ್ಲ. ಬರೀ ಸುಳ್ಳು ಹೇಳಿಕೊಂಡು ಕಾಲಾಹರಣ ಮಾಡಿದ್ದಾರೆ. ಜನರಲ್ಲಿ ಭ್ರಮೆ ಹುಟ್ಟಿಸುವ ಕೆಲಸ ಮಾಡುತ್ತಲೇ ಅಧಿಕಾರ ಹಿಡಿಯುವ ತಂತ್ರಗಾರಿಕೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು
ಈ ಸರ್ಕಾರದಿಂದ ಬಡವರು, ರೈತರು, ಕಾರ್ಮಿಕರು ಹಾಗೂ ಶೋಷಿತ ವರ್ಗಗಳಿಗೆ ಯಾವುದೇ ಅನುಕೂಲವಾಗಿಲ್ಲ. ಕಳೆದ ಐದು ವರ್ಷದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಿದೆ. ಬೆಲೆ ಏರಿಕೆಯಾಗುತ್ತಿದೆ. ಈ ಸರ್ಕಾರಕ್ಕೆ ಬಡವರು ಮತ್ತು ಕಾರ್ಮಿಕರ ಬಗ್ಗೆ ಯಾವುದೇ ಕಾಳಜಿಯೂ ಇಲ್ಲ, ಬದ್ಧತೆಯೂ ಇಲ್ಲವೆಂದು ಜಾಕೀರ್ ಹುಸೇನ್ ಟೀಕಿಸಿದರು
ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಸೈಯದ್ ಮೊಹಿನುದ್ದೀನ್ ಮಾತನಾಡಿ ಚಿಕಾಗೋ ನಗರದಲ್ಲಿ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ಪರಿಣಾಮ ಪ್ರತಿ ವರ್ಷವೂ ಮೇ.1 ರಂದು ಕಾರ್ಮಿಕರ ದಿನಾಚರಣೆ ಆಚರಿಸುವ ಮೂಲಕ ಹುತಾತ್ಮ ಕಾರ್ಮಿಕರನ್ನು ಸ್ಮರಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಂ.ಕೆ.ತಾಜ್ಪೀರ್ ಮಾತನಾಡುತ್ತ ಚಿಕಾಗೋದಲ್ಲಿ ಕಾರ್ಮಿಕರು ದಿನಕ್ಕೆ ಎಂಟು ಗಂಟೆಗಳ ಕಾಲ ಕೆಲಸ ಮಾಡುವುದಾಗಿ ಹೋರಾಟಕ್ಕಿಳಿದು ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳುವ ಸಂದರ್ಭದಲ್ಲಿ ಅನೇಕ ಸಾವು-ನೋವುಗಳು ಸಂಭವಿಸಿತು. ಅಂದಿನಿಂದ ಇಲ್ಲಿಯತನಕ ಹುತಾತ್ಮ ಕಾರ್ಮಿಕರನ್ನು ಸ್ಮರಿಸಿಕೊಳ್ಳುವುದಕ್ಕಾಗಿ ಮೇ 1 ರಂದು ಹುತಾತ್ಮರ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್ಕುಮಾರ್, ಕಾರ್ಯದರ್ಶಿ ಹಾಗೂ ನ್ಯಾಯವಾದಿ ರವೀಂದ್ರ, ಎ.ಪಿ.ಎಂ.ಸಿ.ಉಪಾಧ್ಯಕ್ಷ ಜಯಣ್ಣ, ಅಸಂಘಟಿತ ಕಾರ್ಮಿಕರ ಜಿಲ್ಲಾಧ್ಯಕ್ಷ ಎಸ್.ಎನ್.ಮೋಹನ್ ಪೂಜಾರಿ, ಐ.ಎನ್.ಟಿ.ಯು.ಸಿ. ಜಿಲ್ಲಾಧ್ಯಕ್ಷ ಸೈಯದ್ ಸೈಫುಲ್ಲಾ, ಜಿಲ್ಲಾ ಕಾರ್ಮಿಕ ವಿಭಾಗದ ಉಪಾಧ್ಯಕ್ಷ ಅಣ್ಣಪ್ಪ ಮುದ್ದಾಪುರ, ಸೇವಾದಳದ ಪದಾಧಿಕಾರಿಗಳು ಕಾರ್ಮಿಕರ ದಿನಾಚರಣೆಯಲ್ಲಿ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
