ಬೆಂಗಳೂರು:
ಡೆಂಗೀ ರೋಗಾಣು ಪತ್ತೆ ಸಂಬಂಧ ರಕ್ತ ಪರೀಕ್ಷೆ ಸೇರಿದಂತೆ ಇನ್ನಿತರ ವೈದ್ಯಕೀಯ ಸೇವೆಗಳಿಗೆ ಖಾಸಗಿ ಆಸ್ಪತ್ರೆಗಳು ಮಾಡುತ್ತಿರುವ ದುಬಾರಿ ಹಣ ವಸೂಲಿಗೆ ಕಡಿವಾಣ ಹಾಕಲು ಸರ್ಕಾರವೇ ದರ ನಿಗದಿ ಮಾಡಿದೆ ಎಂದು ಆರೋಗ್ಯ ಇಲಾಖೆಯ ಸಾಂಕ್ರಾಮಿಕ ರೋಗ ವಿಭಾಗದ ಜಂಟಿ ನಿರ್ದೇಶಕ ಡಾ.ಶಿವರಾಜ್ ಸಜ್ಜನ್ ಶೆಟ್ಟಿ ತಿಳಿಸಿದ್ದಾರೆ.
ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗೀ ರೋಗಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಬಂದ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರ ದರ ನಿಗಧಿ ಮಾಡಿ ಹೆಚ್ಚಿನ ದರ ವಸೂಲು ಮಾಡುವ ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾ ವಹಿಸಿದೆ ಎಂದರು.
ನಗರದಲ್ಲಿ ಗುರುವಾರ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ಆಯೋಜಿಸಿದ್ದ,
ರಾಷ್ಟ್ರೀಯ ಡೆಂಗೀ ದಿನಾಚರಣೆ ಅಂಗವಾಗಿ ಒಂದು ದಿನದ ಕಾರ್ಯಾಗಾರ ಹಾಗೂ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರ ಡೆಂಗೀ ತಡೆಗಟ್ಟಲು ಅನೇಕ ಪರಿಣಾಮಕಾರಿ ಕಾರ್ಯಕ್ರಮಗಳನ್ನು ರೂಪಿಸಿದ್ದು ಇದರಿಂದ ಡೆಂಗೀ ಯಶಸ್ವಿಯಾಗಿ ಇಳಿಮುಖ ಕಾಣುತ್ತಿದೆ ಎಂದು ತಿಳಿಸಿದರು.
ಡೆಂಗೀ ಒಂದು ಸಾಮಾಜಿಕ ಪಿಡುಗಾಗಿ ಪರಿಣಮಿಸಿದೆ ಎಂದ ಅವರು, ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬರದಂತೆ ತಡೆಯುವುದೇ ಸೂಕ್ತ. ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ರೋಗಬರದಂತೆ ಮುನ್ನಚ್ಚೆರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
ಸೊಳ್ಳೆಗಳ ಮೂಲಕ ಹಲವು ಮಾರಣಾಂತಿಕ ಕಾಯಿಲೆಗಳು ಹರಡುತ್ತಿದ್ದು, ಡೆಂಗ್ಯೂ ಮಾರಣಾಂತಿಕ ಕಾಯಿಲೆಯೇ ಆಗಿದೆ ಅದಕ್ಕೆ ಸೂಕ್ತ ಚಿಕಿತ್ಸೆಗಳಿದ್ದರೂ ಅದು ಬರದಂತೆ ತಡೆಗಟ್ಟುವುದು ಮುಖ್ಯ. ಮನೆಯ ಸುತ್ತಲೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ರೋಗವನ್ನು ತಡೆಗಟ್ಟಬೇಕು ಎಂದರು.
ಈ ಸಂದರ್ಭದಲ್ಲಿ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಎಚ್ಎಸ್ ಸತೀಶ್, ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ.ಸಿ.ಆರ್. ಜಯಂತಿ, ಸಂಶೋಧನಾ ಅಧಿಕಾರಿ ಡಾ.ಮಹಮ್ಮದ್ ಶರೀಫ್, ಡಾ.ದೇವೇಂದ್ರಪ್ಪ, ಸೆಲ್ವಿತಂಗ ರಾಜನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಕಳೆದ 2018ರ ನವಂಬರ್ ಅಂತ್ಯದೊಳಗೆ ದೇಶ ವ್ಯಾಪ್ತಿಯಲ್ಲಿ ಬರೋಬ್ಬರಿ 8,9 974 ಡೆಂಗೀ ಪ್ರಕರಣಗಳು ಬೆಳಕಿಗೆ ಬಂದಿದ್ದು, ಇದರಲ್ಲಿ 144 ಮಂದಿ ಮೃತಪಟ್ಟಿದ್ದರು.ಅದೇ ರೀತಿ, ಕರ್ನಾಟಕದಲ್ಲಿ ಪ್ರಸ್ತುತ ಸಾಲಿನ ಏಪ್ರಿಲ್ ಮಾಸದವರೆಗಿನ ವರದಿ ಅನ್ವಯ 716 ಡೆಂಗೀ ಪ್ರಕರಣಗಳು ಬೆಳಕಿಗೆ ಬಂದಿದ್ದು, ಯಾರು ಮೃತಪಟ್ಟಿಲ್ಲ ಎಂದು ಆರೋಗ್ಯ ಇಲಾಖೆಯ ಸಮೀಕ್ಷೆ ತಿಳಿಸಿದೆ.ಆದರೂ ಡೆಂಗೀ ಪ್ರಕರಣಗಳ ವರದಿಯಾಗದಂತೆ ಸೂಕ್ತ ಚಿಕಿತ್ಸೆ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ.- ಡಾ.ಶಿವರಾಜ್ ಸಜ್ಜನ್ ಶೆಟ್ಟಿ ಜಂಟಿ ನಿರ್ದೇಶಕರು,ಸಾಂಕ್ರಾಮಿಕ ರೋಗ ವಿಭಾಗ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








