ಬೆಂಗಳೂರು
ದೇವನಹಳ್ಳಿಯ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಪಿಜ್ಜಾ ಕೆಫೆ ಮಳಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಇಡೀ ಕೆಫೆ ಸಂಪೂರ್ಣವಾಗಿ ಭಸ್ಮವಾಗಿದೆ.
ವಿಮಾನ ನಿಲ್ದಾಣದ ಅಂಗಡಿಯಲ್ಲಿ ಬುಧವಾರ ಬೆಳಿಗ್ಗೆ ಬುರಿಟೋ ಬಾಯ್ಸ್ ಪಿಜ್ಜಾ ಕೆಫೆಯ ಅಡುಗೆ ಮನೆಯಲ್ಲಿ ಇದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಕ್ಷಣ ಮಾತ್ರದಲ್ಲೇ ಅಡುಗೆ ಮನೆ ಸಂಪೂರ್ಣವಾಗಿ ಭಸ್ಮವಾಗಿದೆ.
ನಗರ ವಿಮಾನ ನಿಲ್ದಾಣದಿಂದ ಇತರೆಡೆಗೆ ತೆರಳುವ ಪ್ರಯಾಣಿಕರು ಪಿಜ್ಜಾ-ಕೆಫೆಯಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಕಂಡು ತೀವ್ರ ಆತಂಕಕ್ಕೆ ಒಳಗಾದರು. ಸಮಯಕ್ಕೆ ಸರಿಯಾಗಿ ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದರು. ಆ ವೇಳೆಗಾಗಲೇ ಪಿಜ್ಜಾ-ಕೆಫೆಯ ಅಡುಗೆ ಮನೆಯಲ್ಲಿದ್ದ ವಸ್ತುಗಳೆಲ್ಲವೂ ಬೆಂಕಿಗೆ ಆಹುತಿಯಾಗಿದ್ದವು.
ಈ ಅವಘಡದಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಬೆಂಕಿ ಆಹುತಿಗೆ ಕಾರಣ ಏನು ಎಂಬುದು ಸದ್ಯಕ್ಕೆ ಗೊತ್ತಿಗಿಲ್ಲ. ಆದರೆ ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂದು ಊಹಿಸಲಾಗಿದೆ.
ಪಿಜ್ಜಾ-ಕೆಫೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸುರಕ್ಷಿತ ದೃಷ್ಟಿಯಿಂದ ಪ್ರಯಾಣಿಕರು ಮತ್ತು ಕೆಫೆಗೆ ಹೊಂದಿಕೊಂಡತ್ತಿದ್ದ ಇತರೆ ಮಳಿಗೆಗಳ ಸಿಬ್ಬಂದಿಗಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಯಿತು.
ಸಕಾಲಕ್ಕೆ ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದರಿಂದ ಇತರ ಮಳಿಗೆಗಳಿಗೆ ಬೆಂಕಿ ತಗಲುವುದನ್ನು ತಪ್ಪಿಸಲಾಯಿತು. ಇಲ್ಲದಿದ್ದಲ್ಲಿ ಒಂದಕ್ಕೊಂದು ಹೊಂದಿಕೊಂಡಂತೆ ಇದ್ದ ಇತರ ಮಳಿಗೆಗಳಿಗೂ ಬೆಂಕಿ ಹತ್ತಿಕೊಳ್ಳುವ ಸಾಧ್ಯತೆಗಳು ಇದ್ದವು ಎಂದು ಪ್ರತ್ಯಕ್ಷ್ಯದರ್ಶಿಗಳು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








