ಚಳ್ಳಕೆರೆ
ಕೇಂದ್ರ ಸರ್ಕಾರದ ಆಷ್ಮಾನ್ ಭಾರತ ಉತ್ತಮ ಯೋಜನೆಯಾಗಿದ್ದು, ಗ್ರಾಮೀಣ ಭಾಗದ ಬಡ ಜನರು ಯಾವುದೇ ರೀತಿಯ ಪ್ರಾಣಾಪಾಯದ ಕಾಯಿಲೆಗಳಿಗೆ ತುತ್ತಾದಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯುವ ಸೌಲಭ್ಯವಿದೆ. ಆರೋಗ್ಯ ಕರ್ನಾಟಕ ಕಾರ್ಡ್ ಪಡೆದವರು ಈ ಸೌಲಭ್ಯ ಪಡೆಯಬಹುದಾಗಿದೆ.
ಸರ್ಕಾರದ ಹಲವಾರು ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಕೊರತೆಯಿಂದ ಅಂತಹ ಯೋಜನೆಗಳು ಯಶಸ್ಸಿ ಕಾಣುತ್ತಿಲ್ಲ. ಸಾರ್ವಜನಿಕರು ಸಹ ಸರ್ಕಾರದ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರಿ ಅಧಿಕಾರಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಹೆಚ್ಚು ಪ್ರಚಾರ ಕೈಗೊಂಡು ಜಾಗೃತಿ ಮೂಡಿಸುವಂತಾಗಬೇಕೆಂದು ರಾಜ್ಯ ಹೈಕೋರ್ಟ್ನ ಮುಖ್ಯ ನ್ಯಯಮೂರ್ತಿ ಎಲ್.ನಾರಾಯಣಸ್ವಾಮಿ ತಿಳಿಸಿದರು.
ಅವರು, ತಾಲ್ಲೂಕಿನ ಪರಶುರಾಮಪುರ ಹೋಬಳಿಯ ಪಿ.ಮಹದೇವಪುರ ಗ್ರಾಮದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ತಾಲ್ಲೂಕು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಗ್ರಾಮಾಭಿವೃದ್ಧಿಯಲ್ಲಿ ಗ್ರಾಮಸ್ಥರ ಪಾತ್ರ, ಸರ್ಕಾರಿ ಸೌಲಭ್ಯಗಳ ಕುರಿತು ಜಾಗೃತಿ ಕಾರ್ಯಗಾರ, ಆಷ್ಮಾನ್ ಭಾರತ ಆರೋಗ್ಯ ಕಾರ್ಡ್ ವಿತರಣೆ ಕಾರ್ಯಕ್ರಮಕ್ಕೆ ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರತಿಯೊಂದು ಹಂತದಲ್ಲೂ ರಾಜ್ಯದ ಜನತೆಯ ದೃಷ್ಠಿಯಿಂದ ಯೋಜನೆಗಳನ್ನು ರೂಪಿಸಿ ನೂರಾರು ಕೋಟಿ ಹಣವನ್ನು ವೆಚ್ಚ ಮಾಡುವ ಮೂಲಕ ಜನರಿಗೆ ಮನೆ ಬಾಗಿಲಿಗೆ ಸೇವೆ ನೀಡುವ ಉದ್ದೇಶದಿಂದ ಯೋಜನೆಗಳನ್ನು ಜಾರಿಗೆ ತಂದಿದ್ದು, ಆದರೆ, ಯೋಜನೆಗಳ ಅನುಷ್ಠಾನ ಮಾಡಬೇಕಾದ ಅಧಿಕಾರಿ ವರ್ಗದ ನಿರ್ಲಕ್ಷತನದಿಂದ ಸರ್ಕಾರದ ಹಲವಾರು ಯೋಜನೆಗಳು ಇಂದು ಸಾಫಲ್ಯತೆಯನ್ನು ಕಾಣುತ್ತಿಲ್ಲ. ಆದ್ದರಿಂದ ಪ್ರತಿ ಗ್ರಾಮದಲ್ಲೂ ಸರ್ಕಾರದ ಎಲ್ಲಾ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಅಧಿಕಾರಿಗಳು ಹಾಗೂ ಗ್ರಾಮಪಂಚಾಯಿತಿ ಆಡಳಿತ ನಡೆಸಬೇಕಿದೆ. ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿದಲ್ಲಿ ಮಾತ್ರ ಸರ್ಕಾರದ ಉದ್ದೇಶ ಈಡೇರಿದಂತಾಗುತ್ತದೆ ಎಂದರು.
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಹಂಚಾಟೆ ಸಂಜೀವಕುಮಾರ್ ಮಾತನಾಡಿ, ಗ್ರಾಮೀಣ ಭಾಗಗಳಲ್ಲಿ ಅಕ್ಷರಸ್ಥರ ಸಂಖ್ಯೆ ಕಡಿಮೆ ಇದ್ದು, ಅವರಿಗೆ ಯೋಜನೆಗಳ ಬಗ್ಗೆ ತಿಳಿದುಕೊಳ್ಳುವಂತಹ ಯಾವುದೇ ಕುತೂಹಲವಿಲ್ಲ. ಸರ್ಕಾರ ರೂಪಿಸಿದ ಬಹುತೇಕ ಯೋಜನೆಗಳು ಗ್ರಾಮೀಣಾಭಿವೃದ್ಧಿ ದೃಷ್ಠಿಯಿಂದ ರೂಪಿತವಾಗಿವೆ. ಆದ್ದರಿಂದ ಪ್ರತಿಯೊಂದು ಯೋಜನೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಬೇಕಿದೆ.
ಇಂದು ಗ್ರಾಮೀಣ ಭಾಗಗಳಲ್ಲಿ ಇರುವ ವಿದ್ಯಾವಂತರು ಇಂತಹ ಯೋಜನೆಗಳ ಬಗ್ಗೆ ಜನರಿಗೆ ಮಾರ್ಗದರ್ಶನ ಮಾಡುವ ಮೂಲಕ ಸರ್ಕಾರಿ ಯೋಜನೆಗಳು ಜನರಿಗೆ ತಲುಪುವಂತೆ ಸಹಕರಿಸಬೇಕು ಎಂದರು. ತಾಲ್ಲೂಕಿನ ಗಡಿಭಾಗದ ಈ ಗ್ರಾಮೀಣಾಭಿವೃದ್ಧಿಯಲ್ಲಿ ಗ್ರಾಮಸ್ಥರ ಮಾತ್ರ ಹಾಗೂ ಆಷ್ಮಾನ್ ಆರೋಗ್ಯ ಕಾರ್ಡ್ ಬಗ್ಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇಂದು ನೂರಾರು ಜನ ಆಗಮಿಸಿ ಮಾಹಿತಿ ಪಡೆದಿದ್ಧಾರೆ. ಸರ್ಕಾರದ ಯೋಜನೆಗಳ ಅನುಷ್ಠಾನ ಕಾರ್ಯಕ್ರಮಗಳು ಗ್ರಾಮೀಣ ಭಾಗದಲ್ಲಿ ನಡೆದಲ್ಲಿ ಹೆಚ್ಚು ಸಹಕಾರಿಯಾಗುತ್ತದೆ ಎಂದರು.
ಗೌರವಾನ್ವಿತ ನ್ಯಾಯಮೂರ್ತಿಗಳಾದ ವಸ್ತ್ರಮಠ, ಜಾನ್ ಮೈಕಲ್ ಕುನ್ನಾ, ಜಿಲ್ಲಾ ಸತ್ರ ನ್ಯಾಯಾಧೀಶ ವಟವಟಿ, ನ್ಯಾಯಾಧೀಶರಾದ ಟಿ.ಶಿವಣ್ಣ, ದೇವೇಂದ್ರಪಂಡಿತ್, ಕೋಟೆಪ್ಪ ಕಾಂಭ್ಳೆ, ಮನುಪಟೀಲ್, ಜಿಲ್ಲಾಧಿಕಾರಿ ವಿನೋತ್ಪ್ರಿಯಾ, ಜಿಲ್ಲಾ ರಕ್ಷಣಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಸಿ.ಎಲ್.ಪಾಲಾಕ್ಷ, ಡಿಡಿಪಿಐ ಅಂಥೋನಿ, ತಹಶೀಲ್ದಾರ್ ತುಷಾರ್ ಬಿ.ಹೊಸೂರ್, ಬಿಇಒ ವೆಂಕಟೇಶಪ್ಪ, ವಕೀಲರ ಸಂಘದ ಅಧ್ಯಕ್ಷ ನಾಗರಾಜು, ಕಾರ್ಯದರ್ಶಿ ಹನುಮಂತಪ್ಪ, ಸೋಮಶೇಖರರೆಡ್ಡಿ, ವೆಂಕಟರಮಣಪ್ಪ, ರಾಜಶೇಖರ್ ಮುಂತಾದವರು ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಮ್ಮ ವಹಿಸಿದ್ದರು. ಇದೇ ಸಂದರ್ಭದಲ್ಲಿ ಗ್ರಾಮದ ಜನರಿಗೆ ಸಸಿ ಹಾಗೂ ಆರೋಗ್ಯ ಕಾರ್ಡ್ಗಳನ್ನು ವಿತರಿಸಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
