ಬೆಂಗಳೂರು
ರಾಜ್ಯದ ಒಂದು ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸುವ ಮೂಲಕ ಗ್ರಾಮೀಣರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಯಕ್ರಮ ರೂಪಿಸಲಾಗಿದೆ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ಬಾಶೆಟ್ಟಹಳ್ಳಿ ಗ್ರಾಮದಲ್ಲಿ ನಿರ್ಮಿಸಲಾದ ಘನ ತ್ಯಾಜ್ಯ ನಿರ್ವಹಣೆ ಘಟಕದ ಉದ್ಘಾಟನೆ ನೆರವೇರಿಸಿ, ನಂತರ ಸ್ವಚ್ಛ ಮೇವ ಜಯತೆ ಹಾಗೂ ಜಲಾಮೃತ ಯೋಜನೆಯ ರಾಜ್ಯ ಮಟ್ಟದ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದ ಅವರು,ಘನ ತ್ಯಾಜ್ಯ ಘಟಕಗಳಲ್ಲಿನ ಹಸಿ ಕಸವನ್ನು ಗೊಬ್ಬರವನ್ನಾಗಿ ಪರಿವರ್ತಿಸುವುದು. ಗ್ರಾಮೀಣರಲ್ಲಿ ಶೌಚಾಲಯ ಹಾಗು ಸ್ವಚ್ಛತೆಯ ಅರಿವು ಮೂಡಿಸುವುದು ಈ ಆಂದೋಲನದ ಉದ್ದೇಶವಾಗಿದೆ ಎಂದರು.
ಜಲಾಮೃತ ಯೋಜನೆಯಡಿ 20 ಸಾವಿರ ಚೆಕ್ ಡ್ಯಾಂಗಳನ್ನು ನಿರ್ಮಿಸಲಾಗುತ್ತಿದೆ. ಇವುಗಳ ಕಾಮಗಾರಿಯನ್ನು ಮುಂದಿನ ಮಾರ್ಚ್ 30ಕ್ಕೆ ಪೂರ್ಣಗೊಳಿಸಲು ಗುರಿ ನಿಗದಿಗೊಳಿಸಲಾಗಿದೆ. ಇಂದು ಒಂದೇ ದಿನ ರಾಜ್ಯದಲ್ಲಿ ಮೂವತ್ತು ಲಕ್ಷ ಸಸಿ ನಡೆಲಾಗುತ್ತಿದ್ದು, ರಾಜ್ಯದಲ್ಲಿ ಈ ವರ್ಷ ಎರಡು ಕೋಟಿ ಸಸಿಗಳನ್ನು ನೆಡಲಾಗುವುದು ಎಂದರು.
ವಸತಿ ಸಚಿವ ಎಂ.ಟಿ.ಬಿ.ನಾಗರಾಜ್ ಮಾತನಾಡಿ, ಸ್ವಚ್ಛ ಮೇವ ಜಯತೆ ಹಾಗೂ ಜಲಾಮೃತ ಯೋಜನೆಯಲ್ಲಿ ಜನಪ್ರತಿನಿಧಿಗಳ ಪಾತ್ರ ಮಹತ್ವದ್ದಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯರು ಜಾಗೃತಿ ಮೂಡಿಸಿ, ಗ್ರಾಮಸ್ಥರಿಗೆ ಮನವರಿಕೆ ಮಾಡಬೇಕು ಎಂದರು.