ಜಿಂದಾಲ್‍ಗೆ ಭೂಮಿ ಪರಭಾರೆಗೆ ಬಿಜೆಪಿ ವಿರೋಧ

ದಾವಣಗೆರೆ:

    ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಜಿಂದಾಲ್ ಕಂಪನಿಗೆ ಸಾವಿರಾರು ಎಕರೆ ಭೂಮಿ ಮಾರಾಟ ಮಾಡಲು ಮುಂದಾಗಿರುವುದನ್ನು ವಿರೋಧಿಸಿ, ಜಿಲ್ಲಾ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

    ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಿಂದ ಪ್ರತಿಭಟನಾ ಮೆರವಣಿಗೆ ಹೊರಟ ಕಾರ್ಯಕರ್ತರು ಜಿಟಿ, ಜಿಟಿ ಸುರಿಯುತ್ತಿದ್ದ ಮಳೆಯಲ್ಲಿಯೇ ಎಸಿ ಕಚೇರಿಗೆ ತೆರಳಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಉಪ ವಿಭಾಗಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಯಶವಂತರಾವ್ ಜಾಧವ್, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವು ಜಿಂದಾಲ್ ಕಂಪನಿಗೆ 3667 ಎಕರೆ ಭೂಮಿ ಪರಭಾರೆ ಮಾಡಲು ತುದಿಗಾಲಲ್ಲಿ ನಿಂತಿದ್ದು, ಜಿಂದಾಲ್‍ಗೆ ಭೂಮಿ ಪರಭಾರೆ ಮಾಡುವ ವಿಚಾರದಲ್ಲಿ ಬೃಹತ್ ಭ್ರಷ್ಟಾಚಾರ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ ಎಂದು ಆರೋಪಿಸಿದರು.

     ನಾಡಿನ ಸಂಪತ್ತನ್ನು ರಕ್ಷಿಸಬೇಕಾದ ರಾಜ್ಯ ಸರ್ಕಾರವು ಜಿಂದಾಲ್ ಕಂಪನಿಗೆ ಬೆಲೆ ಕಟ್ಟಲಾಗದ ಖನಿಜ ಸಂಪತ್ತಿನ ಭೂಮಿಯನ್ನು ನೀಡಲು ಹೊರಟಿರುವುದು ಅತ್ಯಂತ ಖಂಡನೀಯವಾಗಿದೆ. ಖನಿಜ ಸಂಪತ್ತಿನ ಆಗರವೇ ಆದ 3,667 ಎಕರೆ ಭೂಮಿಯನ್ನು ಜಿಂದಾಲ್‍ಗೆ ಮಾರಾಟ ಮಾಡಲು ಹೊರಟಿರುವ ಸಮ್ಮಿಶ್ರ ಸರ್ಕಾರದ ನಡೆಯು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿಕೊಡುತ್ತಿದ್ದು, ಯಾವುದೇ ಕಾರಣಕ್ಕೂ ಭೂಮಿ ಪರಭಾರೆ ಮಾಡಲು ನಾವು ಬಿಡುವುದಿಲ್ಲ ಎಂದು ಎಚ್ಚರಿಸಿದರು.

     ಕೋಟ್ಯಾಂತರ ರು. ಬೆಲೆ ಬಾಳುವ ಭೂಮಿಯನ್ನು ಕಡಿಮೆ ಮೊತ್ತಕ್ಕೆ ನೀಡಿ, ರಾಜ್ಯದ ಬೊಕ್ಕಸಕ್ಕೆ ಸಾವಿರಾರು ಕೋಟಿ ರೂ. ನಷ್ಟವನ್ನುಂಟು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರದ ಇಂತಹ ನಡೆಯ ವಿರುದ್ಧ ರಾಜ್ಯಾದ್ಯಂತ ಅನೇಕ ಪ್ರಮುಖರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೂ, ಮೈತ್ರಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಈ ಬಗ್ಗೆ ಚಕಾರ ಎತ್ತದೇ ಇರುವುದನ್ನು ನೋಡಿದರೆ ರಾಜ್ಯದ ಸಂಪತ್ತು, ಭೂಮಿಯನ್ನು ಲೂಟಿ ಹೊಡೆಯಲಿಕ್ಕಾಗಿಯೇ ಈ ಸರ್ಕಾರ ಬಂದಿದೆಯಾ ಎಂಬ ಅನುಮಾನ ಕಾಡುತ್ತಿದೆ ಎಂದು ಮಾರ್ಮಿಕವಾಗಿ ನುಡಿದರು.

      ಜಿಂದಾಲ್ ಕಂಪನಿಗೆ 3,667 ಎಕರೆ ಭೂಮಿ ಪರಭಾರೆ ಮಾಡುವ ಮೂಲಕ ಸಮ್ಮಿಶ್ರ ಸರ್ಕಾರವು ದೊಡ್ಡ ಮಟ್ಟದ ಭ್ರಷ್ಟಾಚಾರವನ್ನೇ ಎಸಗುತ್ತಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ. ಯಾವುದೇ ಕಾರಣಕ್ಕೂ ಭೂಮಿಯನ್ನು ಪರಭಾರೆ ಮಾಡುವುದಕ್ಕೆ ಬಿಜೆಪಿ ಬಿಡುವುದಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯವ್ಯಾಪಿಯಾಗಿ ಇಂದು ಹೋರಾಟ ನಡೆಸಲಾಗಿದ್ದು, ತಕ್ಷಣವೇ ಮೈತ್ರಿ ಸರ್ಕಾರವು ಭೂಮಿ ನೀಡುವ ನಿರ್ಧಾರದಿಂದ ಹಿಂದೆ ಸರಿಯಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

       ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪಿ.ಸಿ.ಶ್ರೀನಿವಾಸ, ದಕ್ಷಿಣ ಕ್ಷೇತ್ರದ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ ಪೈಲ್ವಾನ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ರಾಜಶೇಖರ, ಮುಖಂಡರಾದ ಎಲ್.ಡಿ.ಗೋಣೆಪ್ಪ, ಶಿವನಗೌಡ ಪಾಟೀಲ, ಮುಕುಂದಪ್ಪ, ಉಮೇಶ ಪಾಟೀಲ, ಶಂಕರಗೌಡ ಬಿರಾದಾರ, ಟಿಂಕರ್ ಮಂಜಣ್ಣ, ರಮೇಶ ನಾಯ್ಕ, ಶಿವಕುಮಾರ, ಶಾಂತಮ್ಮ, ವೀರೇಶ, ಹಾಲೇಶ, ಸುರೇಂದ್ರ ಮೊಯ್ಲಿ, ದೇವೀರಮ್ಮ, ರಾಜು ನೀಲಗುಂದ, ಚೇತು ಬಾಯಿ, ಅಂಜಿನಮ್ಮ, ದಾಕ್ಷಾಯಣಮ್ಮ, ಗಾಯತ್ರಿ ಮತ್ತಿತರರು ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link