ಚಿತ್ರದುರ್ಗ :
ಚಿತ್ರದುರ್ಗ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಮಲೇರಿಯಾ ಪ್ರಕರಣಗಳು ಇಳಿಮುಖವಾಗುತ್ತಿದ್ದು, 2025 ರೊಳಗೆ ಜಿಲ್ಲೆ ಮಲೇರಿಯಾ ಮುಕ್ತ ಜಿಲ್ಲೆಯಾಗಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಾಲಾಕ್ಷ ಹೇಳಿದರು.ಮಲೇರಿಯಾ ಮಾಸಾಚರಣೆ ಅಂಗವಾಗಿ ನಗರದಲ್ಲಿ ಏರ್ಪಡಿಸಲಾಗಿದ್ದ ಮಲೇರಿಯಾ ಜಾಗೃತಿ ಜಾಥಾಕ್ಕೆ ಆರೋಗ್ಯ ಇಲಾಖೆ ಕಚೇರಿ ಆವರಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿ ವರ್ಷದಂತೆ ಈ ವರ್ಷವೂ ಸಹ ದಿನಾಂಕ 25-06-2019 ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕು.ಕ.ಇಲಾಖೆ ಮತ್ತು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾ ವಿಭಾಗದ ಸಹಯೋಗದೊಂದಿಗೆ ಮಲೇರಿಯಾ ವಿರೋಧಿ ಮಾಸಾಚರಣೆಯನ್ನು ಆಯೋಜಿಸಲಾಗುತ್ತಿದ್ದು, ಇದರ ಅಂಗವಾಗಿ ನಗರದಲ್ಲಿ ಮಲೇರಿಯಾ ಜಾಗೃತಿ ಜಾಥಾ ಆಯೋಜಿಸಲಾಗಿದೆ.
‘ಶೂನ್ಯ ಮಲೇರಿಯಾ ನನ್ನಿಂದಲೇ ಪ್ರಾರಂಭವಾಗಲಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಈ ಬಾರಿ ಮಲೇರಿಯಾ ಮಾಸಾಚರಣೆ ಆಚರಿಸಲಾಗುತ್ತಿದೆ. 2025 ಕ್ಕೆ ನಮ್ಮ ರಾಜ್ಯದಿಂದ ಮಲೇರಿಯಾ ನಿರ್ಮೂಲನೆಯಾಗಬೇಕು. ಜಿಲ್ಲೆಯಲ್ಲಿ ಕಳೆದ ಐದಾರು ವರ್ಷಗಳಿಂದ ಮಲೇರಿಯಾ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿದೆ. ಈ ವರ್ಷ ಇದುವರೆಗೆ 173799 ರಕ್ತಲೇಪನಗಳನ್ನು ಸಂಗ್ರಹಿಸಿದ್ದು, ಇದರಲ್ಲಿ 6 ಮಲೇರಿಯಾ ಪ್ರಕರಣಗಳು ಚಳ್ಳಕೆರೆ ತಾಲ್ಲೂಕಿನಲ್ಲಿ 3, ಮೊಳಕಾಲ್ಮೂರಿನಲ್ಲಿ 3 ಪ್ರಕರಣಗಳು ವರದಿಯಾಗಿದ್ದು, ಈ 6 ಪ್ರಕರಣಗಳಿಗೆ ಸಂಬಂಧಿಸಿದಂತೆ ರೋಗಿಗಳಿಗೆ ಚಿಕಿತ್ಸೆ ನೀಡಿ ಗುಣಮುಖರನ್ನಾಗಿಸಲಾಗಿದೆ. ಈ ಪ್ರಕರಣಗಳೂ ಕೂಡ ಬೇರೆ ಜಿಲ್ಲೆಯಿಂದ ಇಲ್ಲಿಗೆ ವಲಸೆ ಬಂದವರಲ್ಲಿ ಕಂಡುಬಂದ ಪ್ರಕರಣಗಳಾಗಿವೆ ಎಂದರು.
ಜಿಲ್ಲಾ ಕೀಟ ಶಾಸ್ತ್ರಜ್ಞರಾದ ನಂದಿನಿ ಕಡಿಯವರು, ಮಲೇರಿಯಾ ಜ್ವರವು ಸೋಂಕಿತ ಅನಾಫಿಲೀಸ್ ಹೆಣ್ಣು ಸೊಳ್ಳೆ ಕಚ್ಚುವಿಕೆಯಿಂದ ಬರುತ್ತದೆ ಇವು ಹೆಚ್ಚಾಗಿ ಕೆರೆ ಕಟ್ಟೆ ಬಾವಿ, ದೊಡ್ಡ ದೊಡ್ಡ ನೀರಿನ ತೊಟ್ಟಿಗಳಲ್ಲಿ ತನ್ನ ಸಂತತಿಯನ್ನು ಬೆಳಸುತ್ತದೆ ಪರಿಸರ ನೈರ್ಮಲ್ಯ ಕಾಪಾಡುವುದು ಸೊಳ್ಳೆಗಳ ನಿಯಂತ್ರಿಸುವುದು, ಶೀಘ್ರ ಪತ್ತೆ ತ್ವರಿತ ಚಿಕಿತ್ಸೆ ಮುಂಜಾಗ್ರತಾ ಕ್ರಮಗಳಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಜಯಪ್ರಕಾಶ್, ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಸಿ.ಓ.ಸುಧ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರೂಪ, ಮೂಗಪ್ಪ.ಬಿ. ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು. ಬಳಿಕ ಕೀಟ ಚಿಕ್ಕದು-ಕಾಟ ದೊಡ್ಡದು, ಮಲೇರಿಯಾ ನಿಯಂತ್ರಣ ನಮ್ಮೆಲ್ಲರ ಜವಾಬ್ದಾರಿ ಎನ್ನುವ ಘೋಷಣೆ ಕೂಗುತ್ತಾ ನಗರ ಮುಖ್ಯ ರಸ್ತೆಗಳಲ್ಲಿ ಜಾಗೃತಿ ಜಾಥಾ ನಡೆಸಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
