ಕೂಡ್ಲಿಗಿ:
ತಾಲ್ಲೂಕಿನಲ್ಲಿ ಶಾಲಾ ಕಾಲೇಜುಗಳು ಆರಂಭವಾಗಿ ಒಂದು ತಿಂಗಳು ಕಳೆದರೂ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಇನ್ನೂ ಪ್ರವೇಶ ನೀಡಿಲ್ಲ. ಇದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಮಾರಕವಾಗಿದೆ ಎಂದು ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಬಿ. ವಂಕಟೇಶ್ ನಾಯ್ಕ್ ತೀವ್ರ ಅಸಮದಾನ ವ್ಯಕ್ತಪಡಿಸಿದರು. ಅವರು ಸ್ಥಳೀಯ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಾಸಿಕ ಪ್ರಗತಿ ಪರಿಶೀಲಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಭೆಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತಾರಣಾಧಿಕಾರಿ ಎ. ಮೆಹೆಬೂಬ್ ಬಾಷಾ ಅವರು ತಾಲ್ಲೂಕಿನ ವಸತಿ ನಿಯಲಗಳಿಗೆ 458 ಆನ್ ಲೈನ್ ಮೂಲಕ ಆರ್ಜಿ ಸಲ್ಲಿಕೆಯಾಗಿದ್ದು, 220 ಸೀಟು ಖಾಲಿ ಉಳಿದಿವೆ ಎಂದು ಮಾಹಿತಿ ನೀಡಿದಾಗ, ಮಧ್ಯ ಮಾತನಾಡಿದ ಅಧ್ಯಕ್ಷ ವೆಂಕಟೇಶ್ ನಾಯ್ಕ್, ನಂಜುಂಡಪ್ಪ ವರದಿಯಂತೆ ತಾಲ್ಲೂಕು ಅತ್ಯಂತ ಹಿಂದುಳಿದಿದ್ದಿ, ಬಡ ವಿದ್ಯಾರ್ಥಿಗಳು ದೂರದ ಊರುಗಳಿಂದ ಪ್ರತಿ ದಿನ ಬಂದು ಹೋಗಲು ಕಷ್ಟವಾಗುತ್ತದೆ. ಅವರ ಅನುಕೂಲಕ್ಕೆ ತಾಲ್ಲೂಕಿನ ಎಲ್ಲಾ ವಸತಿ ನಿಲಯಗಳಲ್ಲಿ ಹೆಚ್ಚುವರಿ ಪ್ರವೇಶಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಹೇಳಿದರು.
ನಂತರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿ.ಪಿ. ಮಾಣಿಕ್ಯಾಚಾರ್ ಮಾತನಾಡಿ, ಈಗಾಗಲೇ ಹೆಚ್ಚುವರಿ ವಿದ್ಯಾಥಿಗಳ ಪ್ರವೇಶಕ್ಕೆ ಅನುಕೂಲ ಮಾಡಿಕೊಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಲಾಗಿದ್ದು, ಅನುಮೋದನೆಯ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳಿದರು. ಇದಕ್ಕೆ ಪ್ರತಿಯಾಗಿ ಮಾತನಾಡಿದ ಅಧ್ಯಕ್ಷರು, ಹಿರಿಯ ಅಧಿಕಾರಿಗಳು ತಮ್ಮ ಮಕ್ಕಳನ್ನು ಶಾಲೆ, ಕಾಲೇಜು ಆರಂಭಕ್ಕೂ 15 ದಿನ ಮೊದಲೇ ವಸತಿ ಶಾಲೆಗಳಲ್ಲಿ ಬಿಟ್ಟು ಬರುತ್ತಾರೆ.
ಆದರೆ ವಸತಿ ನಿಲಯಗಳಲ್ಲಿ ಪ್ರವೇಶ ಪಡೆದು ಓದುವ ಬಡ ವಿದ್ಯಾರ್ಥಿಗಳ ಹಿತವನ್ನು ಕಡೆಗಣಿಸುತ್ತಾರೆ. ಇದರಿಂದ ತಿಂಗಳಾದರೂ ಪ್ರವೇಶ ನೀಡಲು ಸಾಧ್ಯವಾಗಿಲ್ಲ ಎಂದು ದೂರಿದರು.
ತಾಲ್ಲೂಕಿನಲ್ಲಿ 2019-20ನೇ ಸಾಲಿಗೆ 50,123 ವಿದ್ಯಾರ್ಥಿಗಳಿದ್ದಾರೆ. 119 ಶಿಕ್ಷಕರ ಕೊರತೆ ಇದ್ದು, ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅದೇಶ ಬಂದಿದ್ದು, ಎಷ್ಟು ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು ಎಂದು ಗುರಿ ನೀಡಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಭೆಯ ಗಮನಕ್ಕೆ ತಂದರು.
ಮುಂಗಾರು ಹಂಗಾಮಿನಲ್ಲಿ ಜೋಳ ಬಿತ್ತನೆಗೆ ನಿಗದಿಯಾಗಿದ್ದ ಪ್ರದೇಶ ಮಳೆಯ ಕೊರತೆಯಿಂದ ರಾಗಿ ಹಾಗೂ ಶೇಂಗಾ ಬಿತ್ತನಗೆ ಪರಿವರ್ತನೆಗೊಂಡಿದೆ. ಇದರಿಂದ ತಾಲ್ಲೂಕಿನಲ್ಲಿ ಶೇಂಗಾ ಬಿತ್ತನೆ ಪ್ರದೇಶ ಹೆಚ್ಚಾಗಿದೆ. ಇದರೊಂದಿಗೆ ಮೂರು ವರ್ಷಗಳ ಬರಗಾಲದಿಂದ ಉತ್ತಮ ಗುಣ ಮಟ್ಟದ ಶೇಂಗಾ ಬೀಜವೂ ಸಿಗುತ್ತಿಲ್ಲವಾದ್ದರಿಂದ ಶೇಂಗಾ ಬೀಜಕ್ಕೆ ಬೇಡಿಕೆ ಹೆಚ್ಚಾಗಿದೆ.
ರೈತರಿಗೆ ತೊಂದರೆಯಾಗದ ರೀತಿಯಲ್ಲಿ ಶೇಂಗಾ ಕಾಯಿ ಪೂರೈಕೆ ಕ್ರಮ ಕೈಗೊಳ್ಳಗಿದೆ ಎಂದು ಕೃಷಿ ಸಹಾಯಕ ನಿರ್ದೇಶಕ ಎನ್.ವಿ. ಪ್ರಕಾಶ್ ಮಾಹಿತಿ ನೀಡಿದರು.ತೋಟಗಾರಿಕೆ, ಆರೋಗ್ಯ, ರೇಷ್ಮೆ, ಶಿಶು ಅಭಿವೃದ್ಧಿ ಸೇರಿದಂತೆ ಇತರೆ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಸ್ಥಾಯಿ ಸಮಿತಿ ಅಧ್ಯಕ್ಷ ಕೆಇಬಿ ಬಸವರಾಜ, ಕಾರ್ಯನಿರ್ಹಣಾಧಿಕಾರಿ ಜಿ.ಎಂ. ಬಸಣ್ಣ ಇದ್ದರು. ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








