ತುಮಕೂರು
ಹೇಮಾವತಿ ನಾಲೆಗೆ ಬಂಡೆಗಳನ್ನು ಹಾಕಿ ತುಮಕೂರು ಜಿಲ್ಲೆಗೆ ಹರಿಯುವ ನೀರಿಗೆ ತಡೆಯೊಡ್ಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಆರೋಪಿಸಿದರು.
ಹೇಮಾವತಿ ಜಲಾಶಯದಿಂದ ತುಮಕೂರು ಜಿಲ್ಲೆಗೆ 25 ಟಿಎಂಸಿ ನೀರು ಹರಿಸುವಂತೆ ನಿಗದಿ ಪಡಿಸಲಾಗಿದೆ. ಆದರೆ ಇದುವರೆವಿಗೂ 25 ಟಿಎಂಸಿ ನೀರು ಹರಿದಿಲ್ಲ. ಬದಲಾಗಿ ನಾಲೆಗೆ ಬಂಡೆಗಳನ್ನು ಹಾಕಿ ಹರಿಯುವ ನೀರನ್ನು ತಡೆಗಟ್ಟುವ ಕೆಲಸ ನಡೆಯುತ್ತಿದೆ. ನಾಲೆಗೆ ಬಂಡೆ ಹಾಕುವವರು ಯಾರು ಎಂಬ ವಿಚಾರ ಎಲ್ಲರಿಗೂ ತಿಳಿದಿದೆ ಎಂದರು.
ಬಾಗೂರು ನವಿಲೆ ಬಳಿ ಸುರಂಗ ಮಾರ್ಗದಲ್ಲಿ ನಾಲೆ ನಿರ್ಮಾಣವಾಗುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಜಿಲ್ಲೆಯ ಜನ ಕುಡಿಯಲು ನೀರಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಿದ್ದರೂ ಸಹ ನಿಗದಿಯಾಗಿರುವ ನೀರು ಹರಿಸಲು ಅಡ್ಡಿಪಡಿಸುತ್ತಿರುವುದರಿಂದ ಈ ಭಾಗದ ಜನರು ನೀರಿಗಾಗಿ ಪರಿತಪಿಸುವಂತಾಗಿದೆ. ಇದನ್ನು ಮನಗಂಡು ನಾನು ಖುದ್ದು ಸ್ಥಳ ಪರಿಶೀಲನೆ ನಡೆಸಲು ಬಂದಿದ್ದೇನೆ ಎಂದರು.
ಹೇಮಾವತಿ ನಾಲೆ ಆಧುನೀಕರಣಗೊಳಿಸಿ, ಜಿಲ್ಲೆಗೆ ನಿಗದಿಪಡಿಸಿರುವ 25 ಟಿಎಂಸಿ ನೀರನ್ನು ಹರಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜನ ಸಾಮಾನ್ಯರ ಹಿತ ಕಾಪಾಡಲು ಸರ್ಕಾರಗಳು ಸಾವಿರಾರು ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿವೆ. ಸರ್ಕಾರದ ಹಣ ದುರುಪಯೋಗವಾಗದೆ ಸದುಪಯೋಗವಾಗಬೇಕು ಎಂಬ ಆಶಯ ತಮ್ಮದಾಗಿದೆ. ಹೀಗಾಗಿ ಹೇಮಾವತಿ ನಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದು, ಇಲ್ಲಿರುವ ಜ್ವಲಂತ ಸಮಸ್ಯೆಗಳನ್ನು ಶಾಶ್ವತವಾಗಿ ನಿವಾರಿಸಲು ಶ್ರಮಿಸುವುದಾಗಿ ತಿಳಿಸಿದರು.
ಹೇಮಾವತಿ ನಾಲೆ ಆಧುನೀಕರಣ ಕಾಮಗಾರಿಗೆ ಮಂಜೂರಾಗಿರುವ ಹಣವನ್ನು ಸಕಾಲದಲ್ಲಿ ಬಿಡುಗಡೆ ಮಾಡಿಸಿ, ಮುಂದಿನ ವರ್ಷದಿಂದಲಾದರೂ ನೀರು ಹರಿಯಲು ಯಾವುದೇ ರೀತಿ ತೊಂದರೆಯಾಗದಂತೆ ನೋಡಿಕೊಳ್ಳಲು ಸಂಸದರು ಮತ್ತು ಶಾಸಕರಿಗೆ ತಿಳಿಸಿದ್ದೇನೆ. ಈಗಾಗಲೇ ಹೇಮಾವತಿ ನಾಲೆಯ ಸಮಸ್ಯೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡಿದ್ದೇನೆ.
ಇನ್ನೊಮ್ಮೆ ನಾಲಾ ವೀಕ್ಷಣೆಗೆ ಬಂದು ಅಧಿಕಾರಿಗಳೊಂದಿಗೆ ಅರ್ಧ ದಿನ ಇಲ್ಲೇ ಇದ್ದು, ಏನೇನು ಕೆಲಸ ಆಗಬೇಕು, ಏನೇನು ಆಗಿದೆ ಎಂಬ ಬಗ್ಗೆ ಸುದೀರ್ಘವಾಗಿ ಚರ್ಚಿಸಿ, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಲು ಕೆಲಸ ಮಾಡುತ್ತೇನೆ ಎಂದರು. ಹೇಮಾವತಿ ನಾಲಾ ಆಧುನೀಕರಣ ಕಾಮಗಾರಿಗೆ ಇನ್ನೂ ಹೆಚ್ಚಿನ ಹಣದ ಅಗತ್ಯವಿದ್ದರೆ ಸರ್ಕಾರದಿಂದ ಬಿಡುಗಡೆ ಮಾಡಿಸಲು ಪ್ರಯತ್ನಿಸುವುದಾಗಿ ಹೇಳಿದ ಅವರು, ಸಾವಿರಾರು ಕೋಟಿ ರೂ. ಖರ್ಚು ಮಾಡಿದರೂ ಸಹ ಜನತೆ ನೀರಿಲ್ಲದೆ ತೊಂದರೆ ಅನುಭವಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಮುಂದಾದರೂ ಸರ್ಕಾರದ ಹಣ ದುರುಪಯೋಗವಾಗದೆ ಸದುಪಯೋಗವಾಗಬೇಕು.
ಈ ದಿಸೆಯಲ್ಲಿ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು. ನಾಲಾ ಆಧುನೀಕರಣ ಕಾಮಗಾರಿ ಕೆಲಸ ಯಾವಾಗ ಪ್ರಾರಂಭ ಮಾಡುತ್ತಾರೆ, ಎಷ್ಟೆಷ್ಟು ಹಣ ಮಂಜೂರಾಗಿದೆ, ಎಲ್ಲದರ ಬಗ್ಗೆಯೂ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡಿದ್ದೇನೆ ಎಂದರು.
ಜನಾಕ್ರೋಶ
ರಾಜ್ಯದ ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ. ಈ ಸರ್ಕಾರ ಬರೀ ವರ್ಗಾವಣೆ ದಂಧೆಯಲ್ಲಿ ಮುಳುಗಿದ್ದು, ಅಭಿವೃದ್ಧಿ ಕಾರ್ಯಗಳು ಮೂಲೆಗುಂಪಾಗಿವೆ. ಹಾಗಾಗಿ ಈ ಸರ್ಕಾರ ಜನಮನ್ನಣೆ ಕಳೆದುಕೊಂಡಿದೆ ಎಂದರು.
ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆಗೆ ಅವಕಾಶ ನೀಡುವುದಿಲ್ಲ. ರಾಜ್ಯದ ರಾಜಕೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಈ ಆಧಾರದ ಮೇಲೆ ನಮ್ಮ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ಹೇಳಿದರು.ಜನ ಸರ್ಕಾರದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ವರ್ಗಾವಣೆ ದಂಧೆ ಮಾಡಿಕೊಂಡು ಕುಳಿತಿದ್ದಾರೆ.
ಇಂಜಿನಿಯರ್ ಜತೆ ಚರ್ಚೆ
ಬಾಗೂರು-ನವಿಲೆ ಸುರಂಗ ಮಾರ್ಗ ಹಾಗೂ ನಾಲೆ ಆಧುನೀಕರಣ ಕುರಿತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಮಾವತಿ ನಾಲಾ ಮುಖ್ಯ ಎಂಜಿನಿಯರ್ ಬಾಲಕೃಷ್ಣ ಅವರೊಂದಿಗೆ ಚರ್ಚಿಸಿದರು. ನಾಲಾ ಆಧುನೀಕರಣ ಕಾಮಗಾರಿಯನ್ನು ಶೀಘ್ರ ಮುಗಿಸಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಒದಗಿಸಬೇಕು ಎಂದು ಇಂಜಿನಿಯರ್ಗೆ ಸೂಚಿಸಿದರು. ಇನ್ನೊಂದು ವಾರದೊಳಗೆ ನಾಲೆ ಸ್ವಚ್ಚ ಗೊಳಿಸುವುದಾಗಿ ಮುಖ್ಯ ಎಂಜಿನಿಯರ್ ಬಾಲಕೃಷ್ಣ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಸದ ಜಿ.ಎಸ್. ಬಸವರಾಜು, ಶಾಸಕರಾದ ಪ್ರೀತಂಗೌಡ, ಮಸಾಲೆ ಜಯರಾಮ್, ಬಿ.ಸಿ. ನಾಗೇಶ್, ಮಾಜಿ ಸಚಿವ ಎಸ್. ಶಿವಣ್ಣ, ಮಾಜಿ ಶಾಸಕ ಬಿ. ಸುರೇಶ್ಗೌಡ, ವಿಧಾನ ಪರಿಷತ್ ಸದಸ್ಯ ಡಾ. ಎಂ.ಆರ್. ಹುಲಿನಾಯ್ಕರ್, ಎಸ್. ಶಿವಪ್ರಸಾದ್, ಹೆಬ್ಬಾಕ ರವಿಶಂಕರ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








