ವಸತಿ ಯೋಜನೆಗಳಡಿ ಮನೆ ನಿರ್ಮಾಣ ತ್ವರಿತಗೊಳಿಸಿ:ವಿನೋತ್ ಪ್ರಿಯಾ

ಚಿತ್ರದುರ್ಗ

   ಚಿತ್ರದುರ್ಗ ಜಿಲ್ಲೆಯಲ್ಲಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಗಳಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯವನ್ನು ತ್ವರಿತಗೊಳಿಸಬೇಕು. ಹಾಗೂ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನವನ್ನು ಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಗಳಡಿ ವಿವಿಧ ಇಲಾಖೆಗಳು ಸಾಧಿಸಿರುವ ಪ್ರಗತಿ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಜಿಲ್ಲಾ ಪಂಚಾಯತ್ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಡಾ. ಬಿ.ಆರ್. ಅಂಬೇಡ್ಕರ್ ಆವಾಸ್ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಸತಿ ರಹಿತ ಫಲಾನುಭವಿಗಳಿಗೆ ಮನೆ ನಿರ್ಮಿಸಲು ಗುರಿ ನಿಗದಿಪಡಿಸಲಾಗಿತ್ತು. ಆದರೆ ಜಿಲ್ಲೆಯಲ್ಲಿ ಮನೆಗಳ ನಿರ್ಮಾಣ ಕಾರ್ಯ ಬಹಳಷ್ಟು ಮಂದಗತಿಯಲ್ಲಿ ಸಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು

    ಪ.ಜಾತಿಯವರಿಗೆ 5659 ಮನೆಗಳ ನಿರ್ಮಾಣಕ್ಕೆ 103 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ಆದರೆ ಇದುವರೆಗೂ 963 ಮನೆಗಳ ನಿರ್ಮಾಣ ಮಾತ್ರ ಪೂರ್ಣಗೊಂಡಿದ್ದು, 4696 ಮನೆಗಳ ನಿರ್ಮಾಣ ಇನ್ನೂ ವಿವಿಧ ಹಂತಗಳಲ್ಲಿದೆ. ಪರಿಶಿಷ್ಟ ಪಂಗಡದವರಿಗೆ 4500 ಮನೆಗಳ ನಿರ್ಮಾಣ ಕಾರ್ಯಕ್ಕೆ 84 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಆದರೆ ಮನೆಗಳ ನಿರ್ಮಾಣ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ಸೂರು ರಹಿತ ಬಡವರಿಗೆ ಮನೆ ಕಲ್ಪಿಸಲು ಸರ್ಕಾರ ವಸತಿ ಯೋಜನೆಗಳನ್ನು ರೂಪಿಸಿದೆ. ಯೋಜನೆಯ ಸಮರ್ಪಕ ಜಾರಿಗೆ ಅಧಿಕಾರಿಗಳು ಪ್ರಾಮಾಣಿಕ ಯತ್ನ ಮಾಡುತ್ತಿಲ್ಲ ಎಂದರು

    ಇದಕ್ಕೆ ಪ್ರತಿಕ್ರಿಯಿಸಿದ ಜಿ.ಪಂ. ಯೋಜನಾ ನಿರ್ದೇಶಕ ಶಶಿಧರ್ ಅವರು, ಸದ್ಯ ವಸತಿ ಯೋಜನೆಯಡಿ ಫಲಾನುಭವಿಗೆ 1.70 ಲಕ್ಷ ರೂ. ಸಬ್ಸಿಡಿ ನೀಡಲಾಗುತ್ತಿದೆ. ಮನೆಗಳ ನಿರ್ಮಾಣ ಕಾರ್ಯದ ವಿವಿಧ ಹಂತಗಳಿಗೆ ಅನುಗುಣವಾಗಿ ಅನುದಾನವನ್ನು ಫಲಾನುಭವಿಗೆ ನೀಡಲಾಗುತ್ತಿದೆ. ಅಲ್ಲದೆ ಪ್ರತಿ ಫಲಾನುಭವಿಗೆ ಉದ್ಯೋಗಖಾತ್ರಿ ಯೋಜನೆಯಡಿ 90 ದಿನಗಳ ಕೂಲಿ ಮೊತ್ತ ನೀಡಲಾಗುತ್ತಿದೆ. ಮನೆಗಳ ನಿರ್ಮಾಣ ಕಾರ್ಯವನ್ನು ತ್ವರಿತಗೊಳಿಸಲು ಗ್ರಾ.ಪಂ. ಪಿಡಿಒ ಗಳಿಗೆ ತಾಕೀತು ಮಾಡಲಾಗುವುದು ಎಂದು ತಿಳಿಸಿದರು.

ಕೃಷಿ ಸಂಸ್ಕರಣೆ ಘಟಕಕ್ಕೆ ಆದ್ಯತೆ ನೀಡಿ :

      ಜಿಲ್ಲೆಯಲ್ಲಿ ಕೃಷಿ ಇಲಾಖೆ ವತಿಯಿಂದ ಪ.ಜಾತಿ, ಪ.ಪಂಗಡದ ರೈತರಿಗೆ ಕೃಷಿ ಸಂಸ್ಕರಣೆ ಘಟಕಕ್ಕಾಗಿ ಶೇ. 90 ರಷ್ಟು ಸಬ್ಸಿಡಿ ನೀಡುವ ಯೋಜನೆಯಿದ್ದು, ಇದುವರೆಗೂ 22 ಜನರು ಮಾತ್ರ ಯೋಜನೆಯ ಲಾಭ ಪಡೆದಿದ್ದಾರೆ. ಈ ಯೋಜನೆಗೆ ಹೆಚ್ಚಿನ ರೈತರು ಆಸಕ್ತಿ ತೋರುತ್ತಿಲ್ಲ ಎಂದು ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ ತಿಳಿಸಿದರು

     ಹೀಗಾಗಿ ಯೋಜನೆಯ ಅನುದಾನವನ್ನು ಹೆಚ್ಚು ಬೇಡಿಕೆ ಇರುವ ಟಾರ್ಪಲಿನ್ ವಿತರಣೆಗೆ ಬಳಕೆ ಮಾಡಲಾಗಿದ್ದು, 2675 ಜನರಿಗೆ ವಿತರಣೆ ಮಾಡಲಾಗಿದೆ, ಕೃಷಿ ಯಂತ್ರೋಪಕರಣ ಯೋಜನೆಯಡಿ 762 ಫಲಾನುಭವಿಗಳಿಗೆ ಕೃಷಿ ಪರಿಕರ ನೀಡಲಾಗಿದೆ ಎಂದು ತಿಳಿಸಿದರು.

    ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಕೃಷಿ ಸಂಸ್ಕರಣೆ ಘಟಕದ ಸೌಲಭ್ಯ ಪಡೆಯುವುದರಿಂದ, ಒಂದು ಕುಟುಂಬದ ಬದುಕು ರೂಪಿಸಲು ಅವಕಾಶವಿದೆ. ಆದರೆ ಟಾರ್ಪಲಿನ್ ವಿತರಣೆಗೆ ಹೆಚ್ಚು ಆದ್ಯತೆ ನೀಡಿರುವುದು ಸರಿಯಲ್ಲ. ಹೀಗಾಗಿ ಜನರ ಮನವೊಲಿಸಿ, ಅವರಿಗೆ ಯೋಜನೆಯ ವಿವರಣೆ ನೀಡಿ, ಕೃಷಿ ಸಂಸ್ಕರಣೆ ಘಟಕದ ಯೋಜನೆ ಬಳಸಿಕೊಳ್ಳಲು ಅರಿವು ಮೂಡಿಸಬೇಕು ಎಂದು ಸೂಚನೆ ನೀಡಿದರು.

ಭಾಗ್ಯಲಕ್ಷ್ಮಿ ಬಾಂಡ್ ಶೀಘ್ರ ವಿತರಿಸಿ :

      ಒಂದು ಕುಟುಂಬದಲ್ಲಿ 2 ಹೆಣ್ಣು ಮಕ್ಕಳಿಗೆ ಭಾಗ್ಯಲಕ್ಷ್ಮಿ ಬಾಂಡ್ ಯೋಜನೆಯ ಸೌಲಭ್ಯ ಮಂಜೂರಾತಿಗೆ ಅವಕಾಶವಿದ್ದು, ಜಿಲ್ಲೆಯಲ್ಲಿ ಯೋಜನೆಗೆ 89350 ನೊಂದಣಿಯಾಗಿವೆ. ಬಹುತೇಕ ಫಲಾನುಭವಿಗಳಿಗೆ ಭಾಗ್ಯಲಕ್ಷ್ಮಿ ಬಾಂಡ್ ವಿತರಣೆ ಮಾಡಲಾಗಿದ್ದು, ಇನ್ನೂ ಸುಮಾರು 8 ಸಾವಿರ ಬಾಂಡ್ ವಿತರಿಸುವುದು ಬಾಕಿ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾನಾಯಕ್ ಅವರು ತಿಳಿಸಿದರು.

      ಆದಷ್ಟು ಶೀಘ್ರ ಭಾಗ್ಯಲಕ್ಷ್ಮಿ ಬಾಂಡ್‍ಗಳನ್ನು ಸಂಬಂಧಪಟ್ಟ ಫಲಾನುಭವಿಗಳಿಗೆ ವಿತರಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳು ತಾಕೀತು ಮಾಡಿದರು.

ಸಭೆಗೆ ಗೈರು ಹಾಜರಾದವರಿಗೆ ನೋಟಿಸ್ :

     ಇಲಾಖೆಗಳಲ್ಲಿ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಬಿಡುಗಡೆಯಾಗಿರುವ ಅನುದಾನ ಹಾಗೂ ವೆಚ್ಚದ ಕುರಿತು ಏರ್ಪಡಿಸಲಾದ ಪ್ರಗತಿ ಪರಿಶೀಲನಾ ಸಭೆಗೆ 56 ಅಧಿಕಾರಿಗಳ ಪೈಕಿ ಸುಮಾರು 22 ಅಧಿಕಾರಿಗಳು ಗೈರು ಹಾಜರಾಗಿದ್ದರು.ಈ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಸಭೆಗೆ ಗೈರು ಹಾಜರಾದ ಎಲ್ಲ ಅಧಿಕಾರಿಗಳಿಗೆ ಹಾಗೂ ಇಲಾಖೆಗಳಲ್ಲಿ ಇದೇ ಯೋಜನೆಗಳಡಿ ಪ್ರಗತಿ ಸಾಧಿಸದ ಅಧಿಕಾರಿಗಳಿಗೂ ಶೋಕಾಸ್ ನೋಟಿಸ್ ಜಾರಿಗೊಳಿಸುವಂತೆ ಸೂಚನೆ ನೀಡಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap