ಚಳ್ಳಕೆರೆ
ಸಮಾಜದಲ್ಲಿ ಆಳಾಗಿಬೇರೂರಿದ್ದ ಅಸಮಾನತೆಯನ್ನು ಹೋಗಲಾಡಿಸುವಲ್ಲಿ ಹಡಪದ ಅಪ್ಪಣ್ಣನವರ ಸೇವಾ ಕಾರ್ಯ ಪ್ರಶಂಸನೀಯ. ಅಲಕ್ಷಿತ ಸಮುದಾಯದಲ್ಲಿ ಜನಿಸಿ ಎಲ್ಲರಲ್ಲೂ ತಮ್ಮದೇಯಾದ ವಚನಗಳ ಮೂಲಕ ಜಾಗೃತಿಯನ್ನು ಮೂಡಿಸಿದ ಹಡಪದ ಅಪ್ಪಣ್ಣನವರ ಜಯಂತಿ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಕಾರ ನೀಡಬೇಕೆಂದು ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ ಮನವಿ ಮಾಡಿದರು.
ಅವರು, ಬುಧವಾರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದ ಪೂರ್ವಬಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರ ಅನೇಕ ಮಹಾನ್ ವಚನಕಾರರ ಸೇವೆಯನ್ನು ನೆನಪಿಸಿಕೊಳ್ಳುವ ಸಲುವಾಗಿ ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಸಮುದಾಯದ ಮುಖಂಡರು, ಸಾರ್ವಜನಿಕರು, ವಿವಿಧ ಇಲಾಖೆಯ ಅಧಿಕಾರಿಗಳು, ಜುಲೈ 16ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮವನ್ನು ಆಯೋಜಿಸಿದ್ದು, ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆ ವಹಿಸುವರು ಎಂದು ಅವರು ತಿಳಿಸಿದರು.
ಸಮಾಜದ ಮುಖಂಡ ಪ್ರಕಾಶ್ ಮಾತನಾಡಿ, ಹಡಪದ ಅಪ್ಪಣ್ಣ ತನ್ನದೇಯಾದ ವಚನಗಳ ಮೂಲಕ ಸಮಾಜದ ಎಲ್ಲಾ ವರ್ಗಗಳ ಮೇಲೆ ಬೆಳಕು ಚೆಲ್ಲಿದ ಮಹಾನೀಯ. ಇಂತಹ ಮಹಾನೀಯರ ಕಾರ್ಯಕ್ರಮಕ್ಕೆ ಎಲ್ಲರೂ ಭಾಗವಹಿಸಬೇಕು. ಸಮುದಾಯದ ವತಿಯಿಂದಲೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ಸಿಗೊಳಿಸಿಕೊಡುವಂತೆ ಮನವಿ ಮಾಡಿದರು. ಪೂರ್ವಭಾವಿ ಸಭೆಯಲ್ಲಿ ನಗರಸಭಾ ಸದಸ್ಯೆ ಸುಮಾಭರಮಣ್ಣ, ಎಂ.ಸಾವಿತ್ರಿ, ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿ ಮಾಲತಿ, ಅಬಕಾರಿ ಇಲಾಖೆ ಅಧಿಕಾರಿ ತಿಪ್ಪೇಸ್ವಾಮಿ, ಸಿಡಿಪಿಒ ಕಚೇರಿಯ ಲಲಿತಾಮನೆಕಟ್ಟೆ, ಚೆನ್ನೇಗೌಡ ಮುಂತಾದವರು ಭಾಗವಹಿಸಿದ್ದರು.