ಕುಡಿಯುವ ನೀರಿಗಾಗಿ ಸೂಕ್ತ ಕ್ರಮ : ಮಾಜಿ ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ : ಕಾವೇರಿ ಕಣಿವೆ ಪ್ರದೇಶದಲ್ಲಿ ತೀವ್ರ ಮಳೆ ಅಭಾವ ಎದುರಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಸೂಚಿಸಿರುವಷ್ಟು ನೀರನ್ನು ಹರಿಸುವುದು ಪ್ರಸ್ತುತ ಪರಿಸ್ಥಿತಿಯಲ್ಲಿ ಕಷ್ಟಸಾಧ್ಯವಾಗಿದೆ ಎಂದು ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ದಿನಕ್ಕೆ 3,500 ಕ್ಯೂಸೆಕ್‌ನಂತೆ 15 ದಿನಗಳ ಕಾಲ ಒಟ್ಟು 4 ಟಿಎಂಸಿ ನೀರು ಬಿಡುವಂತೆ ಸೂಚಿಸಲಾಗಿದ್ದರೂ, ರಾಜ್ಯದ ಜಲಾಶಯಗಳಲ್ಲಿ ಪ್ರಸ್ತುತ ನೀರಿನ ಸಂಗ್ರಹ ತೀರಾ ಕಡಿಮೆಯಿದೆ. ಈ ಕುರಿತು ಶೀಘ್ರದಲ್ಲೇ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಚಿವ ರಾಮಲಿಂಗಾ ರೆಡ್ಡಿ ಅವರೊಂದಿಗೆ ಚರ್ಚಿಸಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಮುಂಗಾರು ಹಂಗಾಮಿನಲ್ಲಿ ಕಾವೇರಿ ಕಣಿವೆಯ ಜಲಾಶಯಗಳ ವ್ಯಾಪ್ತಿಯಲ್ಲಿ ವಾಡಿಕೆಗಿಂತ ಶೇಕಡಾ 42.8 ರಷ್ಟು ಮಳೆ ಅಭಾವ ದಾಖಲಾಗಿದೆ. ಜೂನ್ ತಿಂಗಳ ಆರಂಭದಲ್ಲಿ ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಿಗೆ ಹರಿದು ಬಂದ ಒಟ್ಟು ಒಳಹರಿವು ಕೇವಲ 4.1 ಖಿಒಅ ಮಾತ್ರವಾಗಿದ್ದು, ಇದು ಕಳೆದ ಅರ್ಧ ಶತಮಾನದಲ್ಲೇ ಜೂನ್ ತಿಂಗಳಲ್ಲಿ ದಾಖಲಾದ 5ನೇ ಅತ್ಯಂತ ಕಡಿಮೆ ಒಳಹರಿವಾಗಿದೆ. ಜುಲೈ ತಿಂಗಳಲ್ಲಿ ಕೆಲವು ಪ್ರದೇಶಗಳಲ್ಲಿ ಮಾತ್ರ ಅತ್ಯಲ್ಪ ಮಳೆಯಾಗಿದ್ದು, ಜಲಾಶಯಗಳು ಭರ್ತಿಯಾಗಿಲ್ಲ. ಮೇಲಾಗಿ ಮುಂಬರುವ ದಿನಗಳಲ್ಲಿಯೂ ಮುಂಗಾರು ಚುರುಕಾಗುವ ಮುನ್ಸೂಚನೆಗಳಿಲ್ಲದಿರುವುದು ಆತಂಕ ಹೆಚ್ಚಿಸಿದೆ.

ಬೆಳೆಗಳಿಗಿಂತ ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಗಮನದಲ್ಲಿಟ್ಟುಕೊಂಡು, ಮಂಡ್ಯ ಮತ್ತು ಮೈಸೂರು ಭಾಗದ ರೈತರಿಗೆ ಕೆ.ಆರ್.ಎಸ್ ನೀರನ್ನು ಸದ್ಯಕ್ಕೆ ಕುಡಿಯಲು ಮಾತ್ರ ಬಳಸುವಂತೆ ಮಾನ್ಯ ಮುಖ್ಯಮಂತ್ರಿಗಳು ಈಗಾಗಲೇ ಸೂಚಿಸಿದ್ದಾರೆ. ಪ್ರಸ್ತುತ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸಿದರೆ, ರಾಜ್ಯದ ಜಲಾಶಯಗಳಲ್ಲಿನ ನೀರಿನ ಮಟ್ಟ ‘ಡೆಡ್ ಸ್ಟೋರೇಜ್’ಗಿಂತಲೂ ಕುಸಿದು, ನಮ್ಮ ರಾಜ್ಯದಲ್ಲೇ ಕುಡಿಯುವ ನೀರಿಗೆ ತೀವ್ರ ಅಭಾವ ಸೃಷ್ಟಿಯಾಗಲಿದೆ. ಎರಡೂ ರಾಜ್ಯಗಳ ಜನರಿಗೆ ಸದ್ಯಕ್ಕೆ ಕುಡಿಯುವ ನೀರಿಗೆ ಕೊರತೆಯಾಗದಂತೆ ನೋಡಿಕೊಳ್ಳುವುದು ನಮ್ಮ ಪ್ರಾಥಮಿಕ ಕರ್ತವ್ಯವಾಗಿದ್ದು, ಈ ಬಾರಿ ಕೃಷಿ ಚಟುವಟಿಕೆಗೆ ಅಗತ್ಯವಿರುವಷ್ಟು ಮಳೆಯಾಗಿಲ್ಲ ಎಂಬುದನ್ನು ನೆರೆ ರಾಜ್ಯವೂ ಅರ್ಥ ಮಾಡಿಕೊಳ್ಳಬೇಕಿದೆ ಎಂದು ಚಲುವರಾಯಸ್ವಾಮಿ ಅವರು ಮನವಿ ಮಾಡಿದ್ದಾರೆ.

Recent Articles

spot_img

Related Stories

Share via
Copy link