
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸಿದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬAಧಿಸಿದAತೆ ಜಾರಿ ನಿರ್ದೇಶನಾಲಯ(ಇ.ಡಿ)ದ ಅಧಿಕಾರಿಗಳು ಭಾನುವಾರ ಭಾರಿ ಕಾರ್ಯಾಚರಣೆ ನಡೆಸಿದ್ದಾರೆ.
ಪರೀಕ್ಷೆಯ ವೇಳೆ ಉಸ್ತುವಾರಿ ವಹಿಸಿಕೊಂಡಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರ ಬೆಂಗಳೂರಿನ ನಿವಾಸದ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಸ್ಥಳದಲ್ಲಿ ಹೈಡ್ರಾಮಾ ಸೃಷ್ಟಿಯಾಯಿತು.
ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳಿಂದ ಸುಮಾರು 70ರಿಂದ 80 ಲಕ್ಷ ರೂಪಾಯಿಗಳವರೆಗೆ ಲಂಚ ಪಡೆದಿರುವ ಗಂಭೀರ ಆರೋಪ ಕೇಳಿಬಂದಿತ್ತು. ಈ ಪ್ರಕರಣಕ್ಕೆ ಸಂಬAಧಿಸಿದAತೆ ಮೂರು ದಿನಗಳ ಹಿಂದಷ್ಟೇ ಇ.ಡಿ ಅಧಿಕಾರಿಗಳು ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಕೆಲವು ಸದಸ್ಯರ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.
ಈ ತನಿಖೆಯ ಮುಂದುವರಿದ ಭಾಗವಾಗಿ, ಪರೀಕ್ಷಾ ಉಸ್ತುವಾರಿ ವಹಿಸಿದ್ದ ಜ್ಞಾನೇಂದ್ರ ಕುಮಾರ್ ಅವರ ಮನೆ ಮೇಲೂ ದಾಳಿ ನಡೆಸಲಾಗಿದೆ. ಭಾನುವಾರ ಮಧ್ಯಾಹ್ನ ಸಿಆರ್ಪಿಎಫ್ ಭದ್ರತಾ ಸಿಬ್ಬಂದಿಯೊAದಿಗೆ ಆಗಮಿಸಿದ ಅಧಿಕಾರಿಗಳಿಗೆ ಅಪಾರ್ಟ್ಮೆಂಟ್ ಬಳಿ ಅಡ್ಡಿ ಎದುರಾಯಿತು. ಅಧಿಕಾರಿಗಳು ಆಗಮಿಸುತ್ತಿದ್ದಂತೆ ಅಪಾರ್ಟ್ಮೆಂಟ್ನ ಸೆಕ್ಯೂರಿಟಿ ಗಾರ್ಡ್ ಮುಖ್ಯ ಗೇಟ್ಗೆ ಬೀಗ ಹಾಕಿ, ಮೇಲಾಧಿಕಾರಿಗಳ ಅಥವಾ ಮನೆಯವರ ಅನುಮತಿ ಇಲ್ಲದೆ ಯಾರನ್ನೂ ಒಳಗೆ ಬಿಡಲು ಸಾಧ್ಯವಿಲ್ಲ ಎಂದು ತಿಳಿಸಿದರು. ಇದರಿಂದಾಗಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಇ.ಡಿ ಅಧಿಕಾರಿಗಳು ಅಪಾರ್ಟ್ಮೆಂಟ್ ಹೊರಭಾಗದಲ್ಲೇ ಕಾಯುವಂತಾಯಿತು.
ಬಳಿಕ ಇ.ಡಿ ಅಧಿಕಾರಿಗಳು ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ಸಂಪರ್ಕಿಸಿದ್ದಾರೆ. ಅಧಿಕಾರಿಗಳೊಂದಿಗೆ ಮಾತನಾಡಿದ ಜ್ಞಾನೇಂದ್ರ ಕುಮಾರ್, ಸೆಕ್ಯೂರಿಟಿಗೆ ಸೂಚನೆ ನೀಡಿದ ನಂತರ ಗೇಟ್ ತೆರೆಯಲಾಗಿದೆ. ಜ್ಞಾನೇಂದ್ರ ಅವರ ಫ್ಲಾಟ್ಗೆ ಬೀಗ ಹಾಕಲ್ಪಟ್ಟಿದ್ದರಿಂದ ಕೀ ಮೇಕರ್ ಅನ್ನು ಸ್ಥಳಕ್ಕೆ ಕರೆಸಲಾಯಿತು. ಕೀ ಮೇಕರ್ ಸಮ್ಮುಖದಲ್ಲೇ ನಕಲಿ ಕೀ ತಯಾರಿಸಿ, ಫ್ಲಾಟ್ನ ಬೀಗವನ್ನು ಯಶಸ್ವಿಯಾಗಿ ತೆರೆಯಲಾಯಿತು.
ಮನೆ ಬಾಗಿಲು ತೆರೆದ ತಕ್ಷಣ ಇ.ಡಿ ಅಧಿಕಾರಿಗಳು ತಪಾಸಣೆ ಪ್ರಕ್ರಿಯೆಯನ್ನು ವಿಡಿಯೋ ಕ್ಯಾಮೆರಾದಲ್ಲಿ ರೆಕಾರ್ಡ್ (ಇನ್ಕ್ಯಾಮೆರಾ ಪರಿಶೀಲನೆ) ಮಾಡುವ ಮೂಲಕ ಆರಂಭಿಸಿದ್ದಾರೆ. ಸಿಆರ್ಪಿಎಫ್ ಸಿಬ್ಬಂದಿ ಅಪಾರ್ಟ್ಮೆಂಟ್ ಸುತ್ತಲೂ ಬಿಗಿ ಬಂದೋಬಸ್ತ್ ಒದಗಿಸಿದ್ದು, ಪ್ರಸ್ತುತ ದಾಖಲೆಗಳ ಶೋಧ ಕಾರ್ಯ ಆರಂಭಿಸಿರುವುದಾಗಿ ಇ.ಡಿ ಮೂಲಗಳು ಖಚಿತಪಡಿಸಿವೆ.








