ದಿಲ್ಲಿಯಲ್ಲಿ ಸಿಎಂ ಸಿದ್ದರಾಮಯ್ಯ – ಡಿಸಿಎಂ ಡಿ.ಕೆ. ಶಿವಕುಮಾರ್ ಸಹಭೋಜನ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿ ಆಯ್ಕೆಗೆ ಕಾಂಗ್ರೆಸ್ನಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. ಕರ್ನಾಟಕದ ಹೊಸ ಸರ್ಕಾರ ರಚನೆ ಕುರಿತು ಚರ್ಚಿಸಲು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಿರಿಯ ನಾಯಕ ಕೆ.ಜೆ. ಜಾರ್ಜ್ ಸೇರಿದಂತೆ ಕಾಂಗ್ರೆಸ್ನ ಹಿರಿಯ ನಾಯಕರ ಉನ್ನತ ಮಟ್ಟದ ಸಭೆ ಶುಕ್ರವಾರ ದೆಹಲಿಯಲ್ಲಿ ನಡೆಯಿತು. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಮುನಿಯಪ್ಪ ಮತ್ತು ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಅವರ ಜೊತೆಗೆ ದೆಹಲಿಯಲ್ಲಿ ಮಧ್ಯಾಹ್ನ ಸಹಭೋಜನ ಮಾಡಿದರು.
ಸಿದ್ದರಾಮಯ್ಯ ಅವರು ಗುರುವಾರ ರಾಜೀನಾಮೆ ಸಲ್ಲಿಸಿದ್ದು,ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿ ಸಚಿವ ಸಂಪುಟವನ್ನು ವಿಸರ್ಜನೆ ಮಾಡಿದ್ದಾರೆ. ಇದರಂತೆ ನೂತನ ಸರ್ಕಾರ, ಸಂಪುಟ ರಚನೆಯ ಪ್ರಕ್ರಿಯೆಯ ಭಾಗವಾಗಿ ಶಾಸಕಾಂಗ ಸಭೆಯನ್ನು ಶನಿವಾರ(ಮೇ.೩೦) ಸಂಜೆ ೪ ಗಂಟೆಗೆ ನಿಗದಿ ಮಾಡಲಾಗಿದ್ದು, ಸಭೆಯಲ್ಲಿ ಪಕ್ಷದ ಶಾಸಕಾಂಗ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ಬಳಿಕ ಸರ್ಕಾರ ರಚನೆ ಹಕ್ಕು ಮಂಡಿಸಲಾಗುತ್ತದೆ.
ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ ಸಂಜೆ ವಿಧಾನಸೌಧದ ೩ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ಕಾಂಗ್ರೆಸ್ ತನ್ನ ಎಲ್ಲಾ ಶಾಸಕರಿಗೆ ಸಭೆಯಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ವಿಧಾನ ಪರಿಷತ್ ಸಭಾನಾಯಕ ಎನ್..ಎಸ್. ಭೋಸರಾಜು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಡಿಕೆಶಿ ಪಟ್ಟಾಭಿಷೇಕಕ್ಕೆ ಸಕಲ ಸಿದ್ಧತೆ
ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರ ಪಟ್ಟಾಭಿಷೇಕಕ್ಕೆ ಸಕಲ ಸಿದ್ದತೆ ನಡೆಯುತ್ತಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದು ಅಧಿಕೃತವಾಗಿ ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮಾಡುವುದು ಬಹುತೇಕ ಖಚಿತವಾಗಿದೆ.
ಈಗಾಗಲೇ, ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್ ಅವರು ಪ್ರತ್ಯೇಕವಾಗಿ ದೆಹಲಿಗೆ ಪ್ರಯಾಣಿಸಿದ್ದು, ಮುಖ್ಯಮಂತ್ರಿಯಾಗಿ ಅವಕಾಶ ನೀಡಿದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸಿದ್ದರಾಮಯ್ಯ ಕೃತಜ್ಞತೆ ಅರ್ಪಿಸಿದ್ದಾರೆ.
ಎಲ್ಲವೂ ಅಂದುಕೊAಡAತೆ ನಡೆದರೆ ಸೋಮವಾರ ಸಂಜೆ ಗೊದೋಳಿ ಮುಹೂರ್ತದಲ್ಲಿ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅಥವಾ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಲಾಗುತ್ತಿದೆ.
ಸಿಎಂ ಸಿದ್ದರಾಮಯ್ಯನವರಿಗೆ ರಾಹುಲ್ ಗಾಂಧಿ ಬಿಗಿ ಅಪ್ಪುಗೆ
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ದೆಹಲಿಗೆ ತೆರಳಿರುವ ಸಿದ್ದರಾಮಯ್ಯನವರು ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿ ಧನ್ಯವಾದ ಹೇಳಿದರು.
ಗುರುವಾರ ರಾತ್ರಿಯೇ ಬೆಂಗಳೂರಿನಿAದ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯನವರು ಶುಕ್ರವಾರ ಬೆಳಿಗ್ಗೆಯೇ ಸೋನಿಯಾಗಾಂಧಿಯವರ ನಿವಾಸಕ್ಕೆ ತೆರಳಿ ಅಲ್ಲಿಯೇ ರಾಹುಲ್ಗಾಂಧಿ ಮತ್ತು ಸೋನಿಯಾಗಾಂಧಿಯವರನ್ನು ಭೇಟಿ ಮಾಡಿ ೧ ಗಂಟೆಗೂ ಹೆಚ್ಚು ಕಾಲ ಅವರ ಜತೆ ಚರ್ಚಿಸಿದರು.
ರಾಷ್ಟç ರಾಜಕಾರಣಕ್ಕೆ ಹೋಗಲು ನನಗೆ ಇಷ್ಟವಿಲ್ಲ. ರಾಜ್ಯ ರಾಜಕಾರಣದಲ್ಲಿ ಉಳಿಯುತ್ತೇನೆ ಎಂದು ಸ್ಪಷ್ಟಪಡಿಸಿರುವ ಸಿದ್ದರಾಮಯ್ಯನವರು ತಮ್ಮ ಮುಂದಿನ ರಾಜಕೀಯ ಭವಿಷ್ಯದ ಬಗ್ಗೆಯೂ ಈ ಮೂವರು ನಾಯಕರೊಂದಿಗೆ ಚರ್ಚೆ ನಡೆಸಿದರು ಎನ್ನಲಾಗಿದೆ.
ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಚನೆಯಾಗಲಿರುವ ಸರ್ಕಾರದಲ್ಲಿ ಯಾರಿಗೆಲ್ಲಾ ಸಚಿವ ಪಟ್ಟ ನೀಡಬೇಕು, ಈ ಹಿಂದೆ ತಮ್ಮ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಯಾವ ಯಾವ ನಾಯಕರುಗಳಿಗೆ ಸಚಿವ ಸ್ಥಾನ ನೀಡಬೇಕು. ಈ ಎಲ್ಲದರ ಬಗ್ಗೆಯೂ ಸಿದ್ದರಾಮಯ್ಯ ರಾಹುಲ್ಗಾಂಧಿಯವರ ಜತೆ ಸುದೀರ್ಘ ಚರ್ಚೆ ನಡೆಸಿದರು ಎಂದು ಹೇಳಲಾಗಿದೆ.
ಈ ಭೇಟಿ ಚರ್ಚೆಯ ಸಂದರ್ಭದಲ್ಲಿ ಸಿದ್ದರಾಮಯ್ಯನವರ ಜತೆ ಕೆ.ಜೆ. ಜಾರ್ಜ್ ಹಾಗೂ ಅವರ ಪುತ್ರ ಡಾ. ಯತೀಂದ್ರ ಇದ್ದರು. ರಾಹುಲ್ಗಾಂಧಿ ಮತ್ತು ಸೋನಿಯಾಗಾಂಧಿಯವರನ್ನು ಭೇಟಿಯಾಗಿ ಚರ್ಚಿಸಿದ ಬಳಿಕ ಸಿದ್ದರಾಮಯ್ಯನವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ದೆಹಲಿ ನಿವಾಸಕ್ಕೆ ತೆರಳಿ ಅವರ ಜತೆಯೂ ಸುಮಾರು ಹೊತ್ತು ಮುಂದಿನ ಆಗು ಹೋಗುಗಳ ಬಗ್ಗೆ ಚರ್ಚಿಸಿದರು.
ಹೊಸ ಸಚಿವ ಸಂಪುಟ ರಚನೆಯ ನಿರ್ಧಾರ ಆಗಿಲ್ಲ: ಡಿಸಿಎಂ
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಹೊಸ ಸಚಿವ ಸಂಪುಟ ರಚನೆಯ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಆಗಿಲ್ಲ. ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆ ಕರೆಯಲಾಗಿದೆ. ಕಾಂಗ್ರೆಸ್ ಹೈಕಮಾಂಡ್ ಜೊತೆ ಚರ್ಚೆಗಳು ಇನ್ನೂ ನಡೆಯುತ್ತಿವೆ. ಪಕ್ಷದ ಎಲ್ಲಾ ಶಾಸಕರುಗಳಿಗೆ ಸಭೆಗೆ ಬೆಂಗಳೂರಿನಲ್ಲಿಯೇ ಇರುವಂತೆ ತಿಳಿಸಲಾಗಿದೆ. ಎಲ್ಲವೂ ಹೈಕಮಾಂಡ್ ಕೋರಿಕೆಯಂತೆ ನಡೆಯುತ್ತಿದೆ. ಏನನ್ನೂ ನಿರ್ಧರಿಸಲಾಗಿಲ್ಲ. ನಾಳೆ ನಾವು ಸಿಎಲ್ಪಿ ಸಭೆ ಕರೆದಿದ್ದೇವೆ, ನಮ್ಮ ಕೇಂದ್ರ ನಾಯಕರು ಬರಬೇಕು. ನಾವು ನಮ್ಮ ಹೈಕಮಾಂಡ್ ಜೊತೆ ಚರ್ಚಿಸಬೇಕು. ಎಲ್ಲ ಶಾಸಕರು ಬೆಂಗಳೂರಿನಲ್ಲಿಯೇ ಇರುವಂತೆ ನಾವು ಕೇಳಿಕೊಂಡಿದ್ದೇವೆ. ಅದನ್ನು ಹೊರತುಪಡಿಸಿ, ಬೇರೆ ಏನೂ ಇಲ್ಲ’ ಎಂದು ಸ್ಪಷ್ಟಪಡಿಸಿದರು.







