ಆರೋಗ್ಯ ಕ್ಷೇತ್ರಕ್ಕೆ ಸಿದ್ದರಾಮಯ್ಯ ಘೋಷಿಸಿದ ಕೊಡುಗೆಗಳು

ಬೆಂಗಳೂರು: 

    ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ  ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಾಕಷ್ಟು ಸೌಲಭ್ಯಗಳು ಮತ್ತು ವಿಮಾ ಯೋಜನೆಗಳನ್ನು ಘೋಷಿಸಿದ್ದಾರೆ. ಆರೋಗ್ಯವಂತ ಜನರಿಂದ ಮಾತ್ರ ಸಮತೋಲಿತ ಸಮಾಜ ನಿರ್ಮಾಣ ಸಾಧ್ಯ ಎಂದು ನಾವು ನಂಬಿದ್ದೇವೆ. ಜನನದಿಂದ ಎಲ್ಲಾ ವಯೋಮಾನದವರಿಗೂ ವರ್ಗಬೇಧವಿಲ್ಲದೇ, ಕೈಗೆಟಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಖಾತ್ರಿಪಡಿಸಲು ನಾವು ಬದ್ಧರಾಗಿದ್ದೇವೆ. ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸುವುದು ನಮ್ಮ ಸಂಕಲ್ಪವಾಗಿದೆ ಎಂದರು.

   ರಾಜ್ಯದಲ್ಲಿ ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಅಭಿಯಾನ ರೂಪದಲ್ಲಿ ಕ್ರಮ ಕೈಗೊಳ್ಳಲು 320 ಕೋಟಿ ರೂ. ಒದಗಿಸಲಾಗಿದೆ.

1) ಗರ್ಭಿಣಿಯರಲ್ಲಿ ಮತ್ತು ಪ್ರಸೂತಿ ವೇಳೆಯಲ್ಲಿನ ತೀವ್ರತರಹದ ರಕ್ತಸ್ರಾವ ತಡೆಗಟ್ಟಲು ಮತ್ತು ಚಿಕಿತ್ಸೆ ನೀಡಲು ಅವಶ್ಯವಿರುವ ಉಪಕರಣಗಳನ್ನು ನೀಡಲಾಗುವುದು. ನವೀನ ಡಿಜಿಟಲ್ ತಂತ್ರಜ್ಞಾನದ ಮೂಲಕ ಹೆರಿಗೆ ಸೇವೆಗಳನ್ನು ಬಲಪಡಿಸಲಾಗುವುದು.

2) ಗರ್ಭಿಣಿಯರಲ್ಲಿ ರಕ್ತಹೀನತೆ ತಡೆಗಟ್ಟಲು ಹಿಂದುಳಿದ ಜಿಲ್ಲೆಗಳಲ್ಲಿ ಪೌಷ್ಟಿಕಾಂಶ ಕಿಟ್‌ಗಳು, ಪ್ರೋತ್ಸಾಹ ಧನ ಹಾಗೂ ತಾಯಂದಿರಿಗೆ ವಾತ್ಸಲ್ಯ ಕಿಟ್‌ಗಳನ್ನು ವಿತರಣೆ ಮಾಡಲಾಗುವುದು.

3) ಹುದ್ದೆಗಳನ್ನು ಪುನರ್ ಹಂಚಿಕೆ ಮಾಡುವ ಮೂಲಕ ಪ್ರತಿ ತಾಲ್ಲೂಕು ಆಸ್ಪತ್ರೆಯಲ್ಲಿ MCH ತಜ್ಞರನ್ನು ನಿಯೋಜಿಸಲಾಗುವುದು.

4) ರಾಜ್ಯದಲ್ಲಿ ಸಂಭವಿಸುವ ತಾಯಿ ಮರಣವನ್ನು ರಾಜ್ಯ ತಾಂತ್ರಿಕ ತಜ್ಞರ ಸಮಿತಿಯಿಂದ ಆಡಿಟ್‌ ಮಾಡಿಸಿ ಶಿಫಾರಸ್ಸುಗಳನ್ನು ರಾಜ್ಯ ಅಧಿಕಾರಯುಕ್ತ ಸಮಿತಿ ಮುಂದೆ ಮಂಡಿಸಲಾಗುವುದು. ಸಮಿತಿಯ ನಿರ್ದೇಶನದಂತೆ ತಾಯಿ ಮರಣ ತಡೆಗಟ್ಟುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗುವುದು. 

1) ರಾಜ್ಯದಲ್ಲಿ 50 ಹಾಸಿಗೆ ಸಾಮರ್ಥ್ಯದ 14 Critical Care Block ಗಳು ಹಾಗೂ ಬೆಂಗಳೂರು ನಗರದಲ್ಲಿ 100 ಹಾಸಿಗೆ ಸಾಮರ್ಥ್ಯದ ಒಂದು Critical Care Block ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ.

2) ಅಥಣಿ, ಹುನಗುಂದ ಮತ್ತು ಮುಧೋಳದಲ್ಲಿ 50 ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ಸ್ಥಾಪನೆ ಮಾಡಲು ಅನುಮೋದನೆ ನೀಡಲಾಗಿದೆ.

3) ಆಶಾಕಿರಣ ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದಡಿ 1.4 ಕೋಟಿ ಜನರಿಗೆ ಕಣ್ಣಿನ ತಪಾಸಣೆ; 3.3 ಲಕ್ಷ ಜನರಿಗೆ ಉಚಿತ ಕನ್ನಡಕ ವಿತರಣೆ ಮತ್ತು 93,800 ಜನರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗಿದೆ. 

4) ನರವೈಜ್ಞಾನಿಕ ಖಾಯಿಲೆಗಳಿಗೆ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದಡಿ (KaBHI) ನಿಮ್ಹಾನ್ಸ್‌ ಸಹಯೋಗದೊಂದಿಗೆ ಒಟ್ಟು 2.61 ಲಕ್ಷ ತಪಾಸಣೆ ಮಾಡಿ 32,630 ನರರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಈ ಯೋಜನೆಯನ್ನು ಈ ವರ್ಷ ಎಲ್ಲಾ ಹಂತದ ಆರೋಗ್ಯ ಕೇಂದ್ರಗಳಿಗೆ ವಿಸ್ತರಿಸಲು 20 ಕೋಟಿ ರೂ. ಒದಗಿಸಲಾಗಿದೆ. ಅಲ್ಲದೇ, ಮಾನಸಿಕ ಅಸ್ವಸ್ಥರ ಆರೈಕೆಗೆ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಸರ್ಕಾರೇತರ ಸಂಸ್ಥೆಗಳ ಸಹಯೋಗದೊಂದಿಗೆ ಆರೈಕೆ ಕೇಂದ್ರಗಳನ್ನು ಸ್ಥಾಪಿಸಲಾಗುವುದು. 

1) ಬೆಂಗಳೂರು ಉತ್ತರ ತಾಲ್ಲೂಕಿನ ವ್ಯಾಪ್ತಿಯಲ್ಲಿ 200 ಹಾಸಿಗೆಯ ಅತ್ಯಾಧುನಿಕ ಮತ್ತು ಸುಸಜ್ಜಿತ ಆಸ್ಪತ್ರೆಯನ್ನು 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.‌

2) ಹೊಸದಾಗಿ ಘೋಷಣೆಯಾಗಿರುವ ತಾಲ್ಲೂಕುಗಳಾದ ಹನೂರು, ಅಳ್ನಾವರ, ಅಣ್ಣಿಗೇರಿ, ಮಸ್ಕಿ, ಸಿರಿವಾರ, ಕಾಪು, ಬಬಲೇಶ್ವರ, ಕೊಲ್ಹಾರ, ಚೇಳೂರು, ತೇರದಾಳದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ 

     ಮಾಲೂರು, ಮಾಗಡಿ, ಕುಶಾಲನಗರ, ಕೊರಟಗೆರೆ, ಜಗಳೂರು, ಸವಣೂರು, ರಾಮದುರ್ಗ ಮತ್ತು ಸವದತ್ತಿ ತಾಲ್ಲೂಕು ಮಟ್ಟದ ಆಸ್ಪತ್ರೆಗಳನ್ನು ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗಳನ್ನು ಒಟ್ಟು 650 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಮಾಡಲಾಗುವುದು.

    ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು.

   ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ 200 ಹಾಸಿಗೆ ಹಾಗೂ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು.

   ಮೈಸೂರು ಜಿಲ್ಲೆಯ ತಗಡೂರು ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಹೆಚ್ಚಿನ ದುರಸ್ತಿ ಅಗತ್ಯವಿರುವ ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳನ್ನು 183 ಕೋಟಿ ರೂ. ವೆಚ್ಚದಲ್ಲಿ ಹಂತ ಹಂತವಾಗಿ ದುರಸ್ತಿಗೊಳಿಸಲಾಗುವುದು.

   ಕಲ್ಯಾಣ ಕರ್ನಾಟಕ ಸಂಪೂರ್ಣ ಆರೋಗ್ಯ ಅಭಿವೃದ್ಧಿ ಯೋಜನೆಯಡಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಸೂಚ್ಯಂಕವನ್ನು ವೃದ್ಧಿಸಲು ಒಟ್ಟು 873 ಕೋಟಿ ರೂ. ವೆಚ್ಚದಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ವಿವಿಧ ಕಾರ್ಯಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು.

   ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವಧನದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಮೂರು ಲಕ್ಷಕ್ಕೂ ಅಧಿಕ ಸಿಬ್ಬಂದಿ ವರ್ಗ ಹಾಗೂ ಅವಲಂಬಿತರಿಗೆ 5 ಲಕ್ಷ ರೂ. ವರೆಗೆ ನಗದು ರಹಿತ ಚಿಕಿತ್ಸೆ ನೀಡಲು ಯೋಜನೆ ರೂಪಿಸಲಾಗಿದೆ. ಸಿಬ್ಬಂದಿಯ ವೈಯಕ್ತಿಕ ಮಾಸಿಕ ವಂತಿಕೆ 100 ರೂ. ಮತ್ತು ಸರ್ಕಾರದ ಮಾಸಿಕ ವಂತಿಕೆ 200 ರೂ. ಗಳೊಂದಿಗೆ ಸುವರ್ಣ ಆರೋಗ್ಯ ಟ್ರಸ್ಟ್‌ ಮೂಲಕ ಅನುಷ್ಠಾನಗೊಳಿಸಲಾಗುವುದು.

   ಪ್ರಸವ ಪೂರ್ವ ಮತ್ತು ನವಜಾತ ಶಿಶುಗಳಲ್ಲಿ ಅಪರೂಪದ ಚಯಾಪಚಯ ಖಾಯಿಲೆಗಳನ್ನು (Rare Metabolic Disorder) ಪತ್ತೆ ಹಚ್ಚಲು ಕಾರ್ಯಕ್ರಮವನ್ನು ರೂಪಿಸಲಾಗುವುದು. ಮೊದಲನೆಯ ಹಂತದಲ್ಲಿ ಕಲ್ಯಾಣ ಕರ್ನಾಟಕ ಮತ್ತು ಗಣಿಬಾಧಿತ ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ 10 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.

Recent Articles

spot_img

Related Stories

Share via
Copy link